ಕುಡಿವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ: ತಹಸೀಲ್ದಾರ್‌

| Published : Feb 23 2024, 01:49 AM IST

ಕುಡಿವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ: ತಹಸೀಲ್ದಾರ್‌
Share this Article
  • FB
  • TW
  • Linkdin
  • Email

ಸಾರಾಂಶ

ಕಮಲನಗರದ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ತಾಪಂ ಇಒ ಹಾಗೂ ತಹಸೀಲ್ದಾರ್‌ ನೇತೃತ್ವದಲ್ಲಿ ಕುಡಿಯುವ ನೀರಿನ ಸಂಬಂಧ ಗ್ರಾಪಂ ಕಾರ್ಯದರ್ಶಿಗಳ ಸಭೆಯಲ್ಲಿ ತಹಸೀಲ್ದಾರ್‌ ಅಮೀತಕುಮಾರ ಕುಲಕರ್ಣಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಕಮಲನಗರ

ಬೇಸಿಗೆ ಆರಂಭವಾಗಿದ್ದು, ಗ್ರಾಮೀಣ ಜನತೆಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲು ಅಧಿಕಾರಿಗಳು ಸಮರ್ಥವಾಗಿ ಕೆಲಸ ನಿರ್ವಹಿಸಬೇಕೆಂದು ತಹಸೀಲ್ದಾರ್‌ ಅಮೀತಕುಮಾರ ಕುಲಕರ್ಣಿ ಹೇಳಿದರು.

ಪಟ್ಟಣದ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಹಸೀಲ್ದಾರ್‌ರ ನೇತೃತ್ವದಲ್ಲಿ ತಾಲೂಕು ವ್ಯಾಪ್ತಿಯಲ್ಲಿನ ಪ್ರಸಕ್ತ ಕುಡಿಯುವ ನೀರಿನ ಸಂಬಂಧ ಗ್ರಾಪಂ ಕಾರ್ಯದರ್ಶಿಗಳ ಸಭೆ ನಡೆಸಿ ಮಾತನಾಡಿದ ಅವರು, ಅಂತರ್ಜಲ ಮಟ್ಟ ಕಡಿಮೆ ಇರುವ ಕಡೆಗಳಲ್ಲಿ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇರುತ್ತದೆ. ಸಮಸ್ಯೆಗಳನ್ನು ಎದುರಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದರು.

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ ಪಾಟೀಲ್ ಮಾತನಾಡಿ, ಪೈಪ್‌ಲೈನ್‌, ಮೋಟಾರ್ ರಿಪೇರಿ, ಟ್ಯಾಂಕರ್ ವ್ಯವಸ್ಥೆ ಹಾಗೂ ಸಣ್ಣ-ಪುಟ್ಟ ರಿಪೇರಿ ಇರುವ ಗ್ರಾಮಗಳ ಹೆಸರನ್ನು ಪಟ್ಟಿ ಮಾಡಿ ತಿಳಿಸಬೇಕು ಎಂದರು.

ತಾಪಂ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಮಾತನಾಡಿ, ಈಗಾಗಲೇ ಬೇಸಿಗೆ ಆರಂಭಗೊಂಡಿದೆ. ಜನರಿಗೆ ನೀರಿನ ಸಮಸ್ಯೆಯಾಗದಂತೆ ಮುಂಜಾಗ್ರತೆ ವಹಿಸಿ, ಮುಂದೆ ಎದುರಾಗಬಹುದಾದ ಸಮಸ್ಯಾತ್ಮಕ ಗ್ರಾಮಗಳ ಪಟ್ಟಿ ಸಿದ್ಧಪಡಿಸಿ ವರದಿ ಸಲ್ಲಿಸಬೇಕು ಎಂದು ತಿಳಿಸಿದರು.

ಕುಡಿಯುವ ನೀರು ಮತ್ತು ನೈರ್ಮಲ್ಯ ನಿರ್ಮೂಲನೆ ಇಲಾಖೆ ಎಇಇ ಸುಭಾಷ, ತಾಲೂಕಿನ ವಿವಿಧ ಗ್ರಾಮ ಪಂಚಾಯತನ ಕಾರ್ಯದರ್ಶಿಗಳು ಹಾಜರಿದ್ದರು.