ಅಡುಗೆ ಅನಿಲ ಸೋರಿಕೆ ತಡೆಗಟ್ಟುವ ಕ್ರಮಗಳ ಬಗ್ಗೆ ಅಣಕು ಪ್ರದರ್ಶನದ ಮೂಲಕ ಅಗ್ನಿಶಾಮಕ ದಳದ ಅಧಿಕಾರಿಗಳು ಸಾರ್ವಜನಿಕರಲ್ಲಿ ಅರಿವು ಮೂಡಿಸಿದ್ದಾರೆ. ಅವಘಡ ತಡೆಗಟ್ಟಲು ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಿದೆ. ಸಾರ್ವಜನಿಕರು ಅಡುಗೆ ಅನಿಲ ಬಳಕೆ ಮಾಡುವಾಗ ಜಾಗೃತರಾಗಬೇಕು.

ಹುಬ್ಬಳ್ಳಿ:

ಕಳೆದ ಎರಡು ವರ್ಷಗಳಿಂದ ನಗರ ಪ್ರದೇಶಗಳಲ್ಲಿ ಅಗ್ನಿ ಅವಘಡ ಹೆಚ್ಚಾಗುತ್ತಿವೆ. ಅದರಲ್ಲೂ ಚಳಿಗಾಲದಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಅವಘಡಗಳು ಸಂಭವಿಸುತ್ತಿದ್ದು ಇದನ್ನು ತಡೆಗಟ್ಟಲು ಪ್ರತಿಯೊಬ್ಬರು ಜಾಗೃತಿ ವಹಿಸುವುದು ಅವಶ್ಯವಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಹೇಳಿದರು.

ಇಲ್ಲಿನ ಶ್ರೀಸಿದ್ದಾರೂಢ ಮಠದ ಆವರಣದಲ್ಲಿ ಧಾರವಾಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಬಲವರ್ಧನೆ ಹಾಗೂ ಜಿಲ್ಲೆಯಲ್ಲಿ ಸಂಭವಿಸಬಹುದಾದ ವಿಪತ್ತು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಅನಿಲ ಸೋರಿಕೆಯಿಂದ ದುರಂತ ಕಡಿಮೆಗೊಳಿಸುವ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಏರ್ಪಡಿಸಿದ್ದ ಅಣಕು ಪ್ರದರ್ಶನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಡುಗೆ ಅನಿಲ ಸೋರಿಕೆ ತಡೆಗಟ್ಟುವ ಕ್ರಮಗಳ ಬಗ್ಗೆ ಅಣಕು ಪ್ರದರ್ಶನದ ಮೂಲಕ ಅಗ್ನಿಶಾಮಕ ದಳದ ಅಧಿಕಾರಿಗಳು ಸಾರ್ವಜನಿಕರಲ್ಲಿ ಅರಿವು ಮೂಡಿಸಿದ್ದಾರೆ. ಅವಘಡ ತಡೆಗಟ್ಟಲು ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಿದೆ. ಸಾರ್ವಜನಿಕರು ಅಡುಗೆ ಅನಿಲ ಬಳಕೆ ಮಾಡುವಾಗ ಜಾಗೃತರಾಗಬೇಕು ಎಂದರು.

ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಅಡುಗೆ ಅನಿಲ ಸಿಲಿಂಡರ್ ಮತ್ತು ಒಲೆಯ ಪೈಪ್ ಬದಲಾಯಿಸಬೇಕು. ಅಗ್ನಿ ಅವಘಡಗಳು ಸಂಭವಿಸಿದಾಗ ಗಾಯಾಳುಗಳಿಗೆ ಯಾವ ರೀತಿಯಲ್ಲಿ ಪ್ರಥಮ ಚಿಕಿತ್ಸೆ ನೀಡಬೇಕು ಎಂಬುದನ್ನು ಸಹ ತಿಳಿಯಪಡಿಸಲಾಗಿದೆ‌ ಎಂದು ಹೇಳಿದರು.

ಅಣಕು ಪ್ರದರ್ಶನ:

ಕಾರ್ಯಕ್ರಮದಲ್ಲಿ ಅಡುಗೆ ಅನಿಲ ಸೋರಿಕೆಯಾದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಅಗ್ನಿ ಶಾಮಕ ದಳದ ಅಧಿಕಾರಿಗಳು ಅಣಕು ಪ್ರದರ್ಶನದ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ಈ ವೇಳೆ ಜಿಪಂ ಸಿಇಒ ಭುವನೇಶ ಪಾಟೀಲ, ಕೈಮಗ್ಗ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಗರಿಮಾ ಪವಾರ, ಪ್ರೊಬೇಷನರಿ ಐಎಎಸ್ ಅಧಿಕಾರಿ ರಿತೀಕಾ ವರ್ಮಾ, ಉಪವಿಭಾಗಾಧಿಕಾರಿ ಶಾಲಂ ಹುಸೇನ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ವಿನೋದಕುಮಾರ ಹೆಗ್ಗಳಗಿ, ಡಿಎಚ್‌ಒ ಡಾ. ಎಸ್.ಎಂ. ಹೊನಕೇರಿ, ಹುಬ್ಬಳ್ಳಿ ಶಹರ ತಹಸೀಲ್ದಾರ್‌ ಮಹೇಶ ಭಗವಂತ ಗಸ್ತೆ, ತಾಪಂ ಇಒ ಡಾ. ರಾಮಚಂದ್ರ ಹೊಸಮನಿ, ಶ್ರೀಸಿದ್ಧಾರೂಢ ಸ್ವಾಮಿ ಟ್ರಸ್ಟ್‌ ಕಮಿಟಿ ಟ್ರಸ್ಟಿಗಳಾದ ಬಾಳು ಮಗಜಿಕೊಂಡಿ, ಗೀತಾ ಕಲಬುರ್ಗಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.