ಗಣೇಶ ಹಬ್ಬದಲ್ಲಿ ಹಾನಿಕಾರಕ ಉತ್ಪನ್ನಗಳಿಂದ ತಯಾರಿಸಿದ ಮೂರ್ತಿಗಳಿಂದ ಪರಿಸರ ಹಾಗೂ ಜನ-ಜಾನುವಾರುಗಳಿಗೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಹಾಗಾಗಿ ಪರಿಸರ ಸ್ನೇಹಿ ಮಣ್ಣಿನ ಗಣಪತಿ ಬಳಸಬೇಕು. ವಿಷಪೂರಿತ ರಾಸಾಯನಿಕಗಳಿಂದ ತಯಾರಿಸಿದ ಮೂರ್ತಿಗಳಿಂದ ಜಲಮಾಲಿನ್ಯ ಹಾಗೂ ಜಲಚರಗಳ ಪ್ರಾಣಕ್ಕೆ ಕಂಟಕವಾಗುತ್ತದೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಗೌರಿ ಗಣೇಶನ ಹಬ್ಬದ ಪ್ರಯುಕ್ತ ಪಟ್ಟಣದ ರೋಟರಿ ಅಚೀವರ್ಸ್ ಅಕಾಡೆಮಿ ಹಾಗೂ ಪಟ್ಟಣದ ಗೃಹರಕ್ಷಕ ದಳದಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪರಿಸರ ಸ್ನೇಹಿ ಗಣಪನ ಪ್ರತಿಷ್ಠಾಪನೆಗಾಗಿ ಜಾಗೃತಿ ಜಾಥಾ ನಡೆಸಲಾಯಿತು.

ವಿದ್ಯಾರ್ಥಿಗಳು, ರೋಟರಿ ಕ್ಲಬ್ ಅಚೀವರ್ಸ್ ಅಕಾಡೆಮಿ, ಗೃಹರಕ್ಷಕ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ ಪರಿಸರ ಸ್ನೇಹಿ ಗಣಪತಿ ಕೂರಿಸಿ ಪರಿಸರ ಸಂರಕ್ಷಿಸಬೇಕು ಎಂಬ ಘೋಷವಾಕ್ಯದೊಂದಿಗೆ ಜಾಥಾ ನಡೆಸುವ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು. ಜೊತೆಗೆ ಮನೆ ಮನೆಗೆ ತೆರಳಿ ಪರಿಸರಸ್ನೇಹಿ ಗಣಪ ಹಾಗೂ ಗೌರಿ ಮೂರ್ತಿಗಳನ್ನು ಉಚಿತವಾಗಿ ವಿತರಣೆ ಮಾಡಲಾಯಿತು.

ನಂತರ ರೋಟರಿ ಸಂಸ್ಥೆ ಜಿಲ್ಲಾ ಸಹ ಕಾರ್ಯದರ್ಶಿ ಮಂಜುರಾಮ ಮಾತನಾಡಿ, ಗಣೇಶ ಹಬ್ಬದಲ್ಲಿ ಹಾನಿಕಾರಕ ಉತ್ಪನ್ನಗಳಿಂದ ತಯಾರಿಸಿದ ಮೂರ್ತಿಗಳಿಂದ ಪರಿಸರ ಹಾಗೂ ಜನ-ಜಾನುವಾರುಗಳಿಗೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಹಾಗಾಗಿ ಪರಿಸರ ಸ್ನೇಹಿ ಮಣ್ಣಿನ ಗಣಪತಿ ಬಳಸಬೇಕು ಎಂದು ಮನವಿ ಮಾಡಿದರು.

ಅಚೀವರ್ಸ್ ಅಕಾಡೆಮಿ ಅಧ್ಯಕ್ಷ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹಾಗೂ ಎನ್‌ಎಸ್‌ಎಸ್ ಅಧಿಕಾರಿ ಡಾ.ರಾಘವೇಂದ್ರ ಮಾತನಾಡಿ, ವಿಷಪೂರಿತ ರಾಸಾಯನಿಕಗಳಿಂದ ತಯಾರಿಸಿದ ಮೂರ್ತಿಗಳಿಂದ ಜಲಮಾಲಿನ್ಯ ಹಾಗೂ ಜಲಚರಗಳ ಪ್ರಾಣಕ್ಕೆ ಕಂಟಕವಾಗುತ್ತದೆ. ಹೀಗಾಗಿ ಜೇಡಿ ಮಣ್ಣಿನಿಂದ ತಯಾರಿಸಿದ ಗಣೇಶನ ಮೂರ್ತಿಯನ್ನು ಪೂಜಿಸುವುದು ಬೇಕು ಎಂದು ಸಾರ್ವಜನಿಕರಲ್ಲಿ ಮನವಿನ ಮಾಡಿದರು.

ಈ ವೇಳೆ ರೋಟರಿ ಕ್ಲಬ್ ಅಧ್ಯಕ್ಷ ಎನ್.ನಾಗೇಂದ್ರ, ರೇವಣ್ಣ, ನಾಗರಾಜ್, ಶ್ರೀನಿವಾಸ್, ಶ್ರೀಧರ್, ಗೃಹರಕ್ಷಕ ದಳದ ವೆಂಕಟೇಶ್, ಡಿಸಿಸಿ ಬ್ಯಾಂಕ್ ನಿವೃತ್ತ ವ್ಯವಸ್ಥಾಪಕ ನಾರಾಯಣ್ ಸೇರಿದಂತೆ ಇತರರು ಹಾಜರಿದ್ದರು.ಇಂದು ಗೌರಿ ಗಣೇಶ ರಥ, ವಿಶೇಷ ಪೂಜೆ

ಮದ್ದೂರು: ತಾಲೂಕಿನ ವೈದ್ಯನಾಥಪುರದ ಪುರಾಣ ಪ್ರಸಿದ್ಧ ಶ್ರೀವೈದ್ಯನಾಥೇಶ್ವರ ದೇವಾಲಯದಲ್ಲಿ ಸೆ.14ರಂದು ಗೌರಿ ಗಣೇಶ ರಥದ ಅಂಗವಾಗಿ ವಿಶೇಷ ಪೂಜಾ ಕಾರ್ಯ ಹಮ್ಮಿಕೊಳ್ಳಲಾಗಿದೆ.ಶ್ರೀವೈದ್ಯನಾಥೇಶ್ವರ ಮೂಲ ವಿಗ್ರಹಕ್ಕೆ ಮುಂಜಾನೆ ಕ್ಷೀರಭಿಷೇಕ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ಮತ್ತು ಅಲಂಕಾರ ಸೇವೆ ನಡೆಯಲಿದೆ. ದೇಗುಲದ ಪ್ರಾಂಗಣದ ಶ್ರೀಪ್ರಸನ್ನ ಪಾರ್ವತಂಬ ಮೂಲ ವಿಗ್ರಹಕ್ಕೆ ಅಭಿಷೇಕ ಕುಂಕುಮಾರ್ಚನೆಯೊಂದಿಗೆ ಅಲಂಕಾರ ಸೇವೆ ನಂತರ ದೇಗುಲದಲ್ಲಿ ಗೌರಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ ವಿಶೇಷ ಪೂಜೆ ಸಲ್ಲಿಸಲಾಗುವುದು. ದೇವರ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬೆಳಕೆರೆ ಗ್ರಾಮದ ಗ್ರಾಮಸ್ಥರಿಂದ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ ಎಂದು ಶ್ರೀವೈದ್ಯನಾಥೇಶ್ವರ ಟ್ರಸ್ಟ್ ಅಧ್ಯಕ್ಷ ವಿ.ಟಿ.ಶಿವರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.