ಹೊಸಪೇಟೆ: ರಾಷ್ಟ್ರೀಯ ಪಲ್ಸ್ ಪೊಲೀಸ್ ಅಭಿಯಾನದ ಅಂಗವಾಗಿ ಜಿಲ್ಲಾಡಳಿತ, ರೋಟರಿ ಕ್ಲಬ್, ಭಾರತೀಯ ವೈದ್ಯಕೀಯ ಸಂಘ, ಮಲ್ಲಿಗೆ ಪ್ಯಾರಾ ಮೆಡಿಕಲ್ ಕಾಲೇಜು ಮತ್ತು ತುಂಗಭದ್ರಾ ಸ್ಕೂಲ್ ಆಫ್ ನರ್ಸಿಂಗ್, ದೀಪಾಲಿ ಸ್ಕೂಲ್ ಆಫ್ ನರ್ಸಿಂಗ್, ಟಿ.ಎಂ.ಇ. ಸೊಸೈಟಿ ಆಫ್ ನರ್ಸಿಂಗ್ ಸಹಯೋಗದಲ್ಲಿ ಶನಿವಾರ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಜಾಗೃತಿ ಜಾಥಾಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ. ಎಲ್.ಆರ್. ಶಂಕರ್ ನಾಯ್ಕ್ ಚಾಲನೆ ನೀಡಿದರು.

ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜೂ. 28ರಂದು ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೊಲಿಯೋ ಲಸಿಕಾ ಕಾರ್ಯಕ್ರಮದಲ್ಲಿ 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಪೊಲಿಯೋ ಲಸಿಕೆ ಹಾಕಿಸುವಂತೆ ಮನವಿ ಮಾಡಿದರು. ನೆರೆ ಜಿಲ್ಲೆ, ರಾಜ್ಯಗಳಿಂದ ಬಂದಿರುವ ಪ್ರಯಾಣಿಕರು ಹಾಗೂ ಸುತ್ತಮುತ್ತಲಿನ ನಿವಾಸಿಗಳು ತಮ್ಮ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ತಿಳಿಸಿದರು.

ನೂತನ ಕ್ಯೂಆರ್ ಕೋಡ್ ವ್ಯವಸ್ಥೆ: ಸಾರ್ವಜನಿಕರ ಅನುಕೂಲಕ್ಕಾಗಿ ಈ ಬಾರಿ ನೂತನ ತಂತ್ರಜ್ಞಾನ ಪರಿಚಯಿಸಲಾಗಿದ್ದು, ಇಲಾಖೆ ವತಿಯಿಂದ ನೀಡಲಾಗಿರುವ ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ಸಾರ್ವಜನಿಕರು ತಮ್ಮ ಹತ್ತಿರದ ಪೊಲಿಯೋ ಲಸಿಕಾ ಕೇಂದ್ರವನ್ನು ಸುಲಭವಾಗಿ ಪತ್ತೆ ಹಚ್ಚಬಹುದಾಗಿದೆ ಎಂದರು.

ಜಾಥಾದಲ್ಲಿ ಪಾಲ್ಗೊಂಡ ನರ್ಸಿಂಗ್ ವಿದ್ಯಾರ್ಥಿಗಳು ಲಸಿಕಾ ಅಭಿಯಾನದ ಭಿತ್ತಿಪತ್ರಗಳನ್ನು ಹಿಡಿದು ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ಘೋಷಣೆ ಕೂಗುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಜಾಗೃತಿ ಜಾಥಾವು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ (ಹಳೇ ಆಸ್ಪತ್ರೆ ಆವರಣ) ಆರಂಭವಾಗಿ ನಂತರ ಪುಣ್ಯಮೂರ್ತಿ ಸರ್ಕಲ್, ಬಸ್ ನಿಲ್ದಾಣ, ಪುನೀತ್ ರಾಜ್ ಕುಮಾರ್ ಸರ್ಕಲ್, ಅಂಬೇಡ್ಕರ್ ಸರ್ಕಲ್, ರಾಮಾ ಟಾಕೀಸ್ ಮಾರ್ಗವಾಗಿ ಚಲಿಸಿ ದೊಡ್ಡ ಮಸೀದಿ ಮಾರ್ಗದಿಂದ ಪುನಃ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿ ಮುಕ್ತಾಯಗೊಂಡಿತು.

ಜಿಲ್ಲಾ ಆರ್‌ಸಿಎಚ್‌ ಅಧಿಕಾರಿ ಡಾ. ಜಂಬಯ್ಯ, ಆರೋಗ್ಯ ನಿರೀಕ್ಷಣಾಧಿಕಾರಿ ಧರ್ಮನಗೌಡ, ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ. ದೊಡ್ಡಮನಿ, ತಾಲೂಕು ವೈದ್ಯಾಧಿಕಾರಿ ಡಾ. ವಿನೋದ್ ಕುಮಾರ್ ಇದ್ದರು.