ಸಾರಾಂಶ
ಕೊಂಬು ಕಹಳೆ, ವೀರಗಾಸೆ, ಗಾರುಡಿ ಗೊಂಬೆ, ಪೂಜಾ ಕುಣಿತ, ಡೊಳ್ಳು ಕುಣಿತ, ನಾದಸ್ವರ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಹಾಗೂ ಮಹಿಳೆಯರ ಪೂರ್ಣ ಕುಂಭ ಸ್ವಾಗತದೊಂದಿಗೆ ಕರೆತರಲಾಯಿತು.
ಕನ್ನಡಪ್ರಭ ವಾರ್ತೆ ಮಂಡ್ಯ
ರೈತರಿಗೆ ಉತ್ತೇಜನ ನೀಡುವ ಹಾಗೂ ಯುವಕರನ್ನು ಕೃಷಿಯತ್ತ ಆಕರ್ಷಿಸುವ ನಿಟ್ಟಿನಲ್ಲಿ ಕೊತ್ತತ್ತಿ ಗ್ರಾಮದಲ್ಲಿ ಆಯೋಜಿಸಿದ್ದ ಭತ್ತ ನಾಟಿ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಭವ್ಯ ಸ್ವಾಗತದೊಂದಿಗೆ ಕರೆತರಲಾಯಿತು.ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ಕ್ಯಾತುಂಗೆರೆ ಬಳಿಗೆ ಆಗಮಿಸಿದ ಬಿ.ವೈ.ವಿಜಯೇಂದ್ರ ಅವರಿಗೆ ಕ್ರೇನ್ ಮೂಲಕ ಬೃಹತ್ ಕಬ್ಬಿನ ಹಾರ ಹಾಕಿ ಸ್ವಾಗತಿಸಲಾಯಿತು. ನಂತರ ಗ್ರಾಮದ ಶ್ರೀ ವೀರಾಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ದೇವಾಲಯ ಬಳಿಯಿಂದ ಕೊತ್ತತ್ತಿವರೆಗೆ ಮೆರವಣಿಗೆ ಆಯೋಜಿಸಲಾಗಿತ್ತು. ಈ ವೇಳೆ ಖುದ್ದು ಟ್ರ್ಯಾಕ್ಟರ್ ಚಲಾಯಿಸಿ ವಿಜಯೇಂದ್ರ ಸಂಭ್ರಮಿಸಿದರು. ರ್ಯಾಲಿಯಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು. ಕ್ರೇನ್ ಮೂಲಕ ಅಲ್ಲಲ್ಲಿ ಬಿ.ವೈ.ವಿಜಯೇಂದ್ರ ಅವರಿಗೆ ಪುಷ್ಪವೃಷ್ಟಿ ಮಾಡಲಾಯಿತು.
ಆನಂತರ ಅವರು ಎತ್ತಿನಗಾಡಿ ಏರಿದರು. ಕೊಂಬು ಕಹಳೆ, ವೀರಗಾಸೆ, ಗಾರುಡಿ ಗೊಂಬೆ, ಪೂಜಾ ಕುಣಿತ, ಡೊಳ್ಳು ಕುಣಿತ, ನಾದಸ್ವರ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಹಾಗೂ ಮಹಿಳೆಯರ ಪೂರ್ಣ ಕುಂಭ ಸ್ವಾಗತದೊಂದಿಗೆ ಕರೆತರಲಾಯಿತು. ಮೆರವಣಿಗೆಗೆ ಎತ್ತಿನಗಾಡಿಗಳು, ಟ್ರ್ಯಾಕ್ಟರ್ಗಳು ಸಾಥ್ ನೀಡಿದವು. ಬಿ.ವೈ.ವಿಜಯೇಂದ್ರ ಜೊತೆಯಲ್ಲಿ ಎಸ್.ಸಚ್ಚಿದಾನಂದ, ಎನ್.ಎಸ್.ಇಂದ್ರೇಶ್ ಕೂಡ ಇದ್ದರು.