ಅರಸೀಕೆರೆ: ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರಾದ ಲಾರ್ಡ್‌ ಬೇಡನ್ ಪಾವೆಲ್ ಅವರ ಜೀವನ ಮೌಲ್ಯಗಳು, ಸೇವಾ ಮನೋಭಾವ ಹಾಗೂ ದೂರದೃಷ್ಟಿಯ ಮಾರ್ಗದರ್ಶನಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಉತ್ತಮ ವ್ಯಕ್ತಿತ್ವ ರೂಪುಗೊಂಡು, ಜವಾಬ್ದಾರಿಯುತ ನಾಗರಿಕರಾಗಿ ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಮುರುಂಡಿ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಲೋಹಿತ್ ಅಭಿಪ್ರಾಯಪಟ್ಟರು.ತಾಲೂಕಿನ ಮುರುಂಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರೇರಣಾ ಗೈಡ್ ಘಟಕ ಹಾಗೂ ಸ್ವಾಮಿ ವಿವೇಕಾನಂದ ಸ್ಕೌಟ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕ ಲಾರ್ಡ್ ಬೇಡನ್ ಪಾವೆಲ್ ಅವರ ಜನ್ಮದಿನಾಚರಣೆ, ಚಿಂತನ ದಿನ ಹಾಗೂ ವಿಶ್ವ ಭ್ರಾತೃತ್ವ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬೇಡನ್ ಪಾವೆಲ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ವಂದನೆ ಸಲ್ಲಿಸಲಾಯಿತು.ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳು ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯಪಾಲನೆ, ಸ್ವಯಂಸೇವಾ ಮನೋಭಾವ ಹಾಗೂ ಜೀವನ ಕೌಶಲಗಳನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ನಗರ–ಗ್ರಾಮೀಣ ಎರಡೂ ಪ್ರದೇಶಗಳ ಮಕ್ಕಳಲ್ಲಿ ಸ್ವಾವಲಂಬನೆಗೆ ಪ್ರೇರಣೆ ನೀಡುವ ಜೊತೆಗೆ ಪ್ರಕೃತಿ ವಿಕೋಪ, ಅಗ್ನಿ ಅವಘಡ, ಅಪಘಾತ, ಪರಿಸರ ಸಂರಕ್ಷಣೆ ಹಾಗೂ ಸಮಾಜ ಸೇವೆಯಂತಹ ಸಂದರ್ಭಗಳಲ್ಲಿ ತಮ್ಮನ್ನು ತಾವು ಮತ್ತು ಇತರರನ್ನು ರಕ್ಷಿಸಿಕೊಳ್ಳುವ ತರಬೇತಿಯನ್ನು ನೀಡುತ್ತವೆ ಎಂದು ಅವರು ತಿಳಿಸಿದರು. ಇತ್ತೀಚೆಗೆ ಶಾಲೆಯಲ್ಲಿ ಆಯೋಜಿಸಿದ್ದ ಸ್ಥಳೀಯ ಉತ್ಪನ್ನಗಳ ಮಾರುಕಟ್ಟೆ ಹಾಗೂ ಆಹಾರ ಪದಾರ್ಥ ತಯಾರಿಕೆ ಕಾರ್ಯಕ್ರಮಗಳು ರಾಜ್ಯಮಟ್ಟದಲ್ಲಿ ಪ್ರಶಂಸೆಗೆ ಪಾತ್ರವಾಗಿರುವುದು ಸ್ಕೌಟ್ ಗೈಡ್ ಚಟುವಟಿಕೆಗಳ ಫಲ ಎಂದು ಹೇಳಿದರು.ಜಿಲ್ಲಾ ತರಬೇತಿ ಆಯುಕ್ತೆ ಕೆ.ಪಿ. ಕಾತ್ಯಾಯಿನಿ ಮಾತನಾಡಿದರು.

ಕಾರ್ಯಕ್ರಮದ ಅಂಗವಾಗಿ ಪ್ರಬಂಧ ಮತ್ತು ಚಿತ್ರಕಲಾ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಊರಿನ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ, ಮಾನವ ಸರಪಳಿ ನಿರ್ಮಾಣ, ಭಾಷಣ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಈ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಸುರೇಶ್, ಗೈಡ್ ಕ್ಯಾಪ್ಟನ್ ಚಂಪಾರಾಣಿ ಮಾತನಾಡಿದರು. ಶಿಕ್ಷಕರಾದ ನವೀನ ಕುಮಾರ್, ಅಂಜನಪ್ಪ, ಸುಮಲತಾ, ಕವಿತಾ, ಸುರೇಶ್ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.