ಸಾರಾಂಶ
ಕನ್ನಡಪ್ರಭ ವಾರ್ತೆ ತುಮಕೂರು
ಮುಸ್ಲಿಂ ಬಾಂಧವರ ಪವಿತ್ರ ಹಬ್ಬಗಳಲ್ಲಿ ಒಂದಾದ ತ್ಯಾಗ, ಬಲಿದಾನ ಸ್ಮರಿಸುವ ಬಕ್ರೀದ್ ಹಬ್ಬವನ್ನು ನಗರ ಸೇರಿದಂತೆ ಜಿಲ್ಲಾದ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು.ಜಿಲ್ಲೆಯ ಕುಣಿಗಲ್, ತಿಪಟೂರು, ತುರುವೇಕೆರೆ, ಚಿಕ್ಕನಾಯಕನಹಳ್ಳಿ, ಗುಬ್ಬಿ, ಕೊರಟಗೆರೆ, ಮಧುಗಿರಿ, ಸಿರಾ, ಪಾವಗಡ ಹಾಗೂ ತುಮಕೂರು ತಾಲೂಕಿನಾದ್ಯಂತ ಮುಸ್ಲಿಂ ಬಾಂಧವರು ಬಕ್ರೀದ್ ಹಬ್ಬವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಿ, ಹೊಸ ಉಡುಪುಗಳನ್ನು ಧರಿಸಿ ಆಯಾ ತಾಲೂಕು ಕೇಂದ್ರಗಳ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ನಗರದ ಕುಣಿಗಲ್ ರಸ್ತೆಯಲ್ಲಿರುವ ಈದ್ಗಾ ಮೈದಾನದಲ್ಲಿ ಬೆಳಿಗ್ಗೆ 10ಕ್ಕೆ ಮುಸ್ಲಿಂ ಬಾಂಧವರು ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಂತರ ಮೆಕ್ಕಾ ಮಸೀದಿ, ಈದ್ಗಾ ಮೊಹಲ್ಲಾ ಪಕ್ಕದಲ್ಲಿರುವ ಕೌಸರ್ ಮಸೀದಿ ಸೇರಿದಂತೆ ನಗರದ ವಿವಿಧ ಮಸೀದಿಗಳಲ್ಲೂ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದರು. ಈದ್ಗಾ ಮೈದಾನಕ್ಕೆ ಕಾಂಗ್ರೆಸ್ ಮುಖಂಡರಾದ ಇಕ್ಬಾಲ್ ಅಹಮದ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರೇಶೇಖರಗೌಡ, ಕೆಂಚಮಾರಯ್ಯ, ರೇವಣಸಿದ್ದಯ್ಯ, ಅಸ್ಲಾಂಪಾಷ, ಡಿವೈಎಸ್ಪಿ ಚಂದ್ರಶೇಖರ್ ಅವರು ಭೇಟಿ ನೀಡಿ ಮುಸ್ಲಿಂ ಸಮುದಾಯದ ಮುಖಂಡರಿಗೆ ಬಕ್ರೀದ್ ಹಬ್ಬದ ಶುಭಾಶಯ ಕೋರಿದರು.ಮುಖಂಡರಾದ ಇಕ್ಬಾಲ್ ಅಹಮದ್ ಮಾತನಾಡಿ, ಬಕ್ರೀದ್ ಹಬ್ಬವು ತ್ಯಾಗ ಮತ್ತು ಬಲಿದಾನದ ಪ್ರತೀಕ. ಬಡವರಿಗೆ, ನಿರ್ಗತಿಕರಿಗೆ ದಾನ, ಧರ್ಮ ಮಾಡಲು ಅವಕಾಶ ಮಾಡಿಕೊಡುವುದೇ ಬಕ್ರೀದ್ ಹಬ್ಬದ ವಿಶೇಷತೆ. ಎಲ್ಲರೂ ಕೂಡಿ ಸಮಾನತೆಯಿಂದ ಬಾಳಲು, ಶಾಂತಿ ಸೌಹಾರ್ದತೆಯ ಪ್ರತೀಕವಾಗಿದೆ ಈ ಬಕ್ರೀದ್ ಹಬ್ಬ ಎಂದರು. ಮನುಕುಲಕ್ಕೆ ಶಾಂತಿ ನೀಡಲಿ, ಮಳೆ, ಬೆಳೆಯಾಗಲಿ. ಶಾಂತಿ ನೆಲೆಸಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇವೆ. ಬೇರೆಯವರ ಬಗ್ಗೆ ಇರುವ ಕೆಡಕನ್ನು ನಾವೆಲ್ಲಾ ತ್ಯಾಗ ಮಾಡಬೇಕಾಗಿದೆ ಎಂದರು.
ಬಕ್ರೀದ್ ಹಬ್ಬವು ಸಮಾಜದಲ್ಲಿ ಶಾಂತಿ, ಸಮೃದ್ಧಿ ನೆಲೆಸುವಂತೆ ಮಾಡಲಿ, ಎಲ್ಲರೂ ಕೂಡಿ ಬಾಳುವಂತಾಗಲಿ, ಉತ್ತಮ ಮಳೆ, ಬೆಳೆಯಾಗಿ ದೇಶ ಸಮೃದ್ಧಿಯಾಗಲಿ ಎಂದು ಆಶಿಸಿದರು. ನಮ್ಮಲ್ಲಿರುವ ಅಸೂಯೆ, ದ್ವೇಷವನ್ನು ತೆಗೆದು ಹಾಕಬೇಕು. ಬಕ್ರೀದ್ ತ್ಯಾಗ ಬಲಿದಾನದ ಸಂಕೇತ ಎಂದು ಹೇಳುವ ಮೂಲಕ ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯ ಕೋರಿದರು.ಮಾಜಿ ಉಪಮೇಯರ್ ಅಸ್ಲಾಂಪಾಷ ಮಾತನಾಡಿ, ಮಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬ ಬಹಳ ಶ್ರೇಷ್ಠವಾದುದು. ಎಲ್ಲರೂ ಶಾಂತಿಯಿಂದ ಹಬ್ಬವನ್ನು ಆಚರಿಸಿ ದಾನ ಕೊಡಬೇಕು. ಸರ್ಕಾರದ ನಿಯಮಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರಗೌಡ ಮಾತನಾಡಿ, ಹಿಂದೂ-ಮುಸ್ಲಿಂ ಬಾಂಧವರು ಮಹಮದ್ ಪೈಗಂಬರರು ನೀಡಿರುವ ಸಂದೇಶದಂತೆ ಸಾಮರಸ್ಯದಿಂದ ಬದುಕು ನಡೆಸಬೇಕು. ಹಿಂದೂ-ಮುಸ್ಲಿಂ ಬಾಂಧವರು ಎಲ್ಲರೂ ಸೇರಿ ಹಬ್ಬಗಳನ್ನು ಆಚರಿಸಬೇಕು ಎಂದು ಹೇಳಿದರು. ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಈದ್ಗಾ ಮೈದಾನದ ಬಳಿ ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಮಾಡಲಾಗಿತ್ತು.