ಸಿರಿಧಾನ್ಯಗಳಲ್ಲಿ ನಾರಿನಂಶ, ಕಬ್ಬಿಣದ ಅಂಶಗಳು ಹೆಚ್ಚಾಗಿರುವುದರಿಂದ ದೈನಂದಿನ ಆಹಾರ ಪದ್ಧತಿಯಲ್ಲಿ ಸಿರಿಧಾನ್ಯಗಳನ್ನು ಬಳಸಿದರೆ ಆರೋಗ್ಯದಲ್ಲಿ ಸಮತೋಲನ ಕಾಪಾಡಿಕೊಳ್ಳಬಹುದು ಎಂದು ಜಿಪಂ ಮುಖ್ಯ ಯೋಜನಾಧಿಕಾರಿ ಡಾ. ಉದಯ್ ಕುಮಾರ್ ಶೆಟ್ಟಿ ಹೇಳಿದರು.

ಉಡುಪಿ: ಸಿರಿಧಾನ್ಯಗಳಲ್ಲಿ ನಾರಿನಂಶ, ಕಬ್ಬಿಣದ ಅಂಶಗಳು ಹೆಚ್ಚಾಗಿರುವುದರಿಂದ ದೈನಂದಿನ ಆಹಾರ ಪದ್ಧತಿಯಲ್ಲಿ ಸಿರಿಧಾನ್ಯಗಳನ್ನು ಬಳಸಿದರೆ ಆರೋಗ್ಯದಲ್ಲಿ ಸಮತೋಲನ ಕಾಪಾಡಿಕೊಳ್ಳಬಹುದು ಎಂದು ಜಿಪಂ ಮುಖ್ಯ ಯೋಜನಾಧಿಕಾರಿ ಡಾ. ಉದಯ್ ಕುಮಾರ್ ಶೆಟ್ಟಿ ಹೇಳಿದರು.ಮಂಗಳವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ- ಎಣ್ಣೆಕಾಳು ಯೋಜನೆಯಡಿ ಜಿಲ್ಲಾ ಮಟ್ಟದ ಕಾರ್ಯಾಗಾರ ಹಾಗೂ ರಾಷ್ಟ್ರೀಯ ಆಹಾರ ಭದ್ರತೆ ಮತ್ತು ಪೌಷ್ಠಿಕ ಅಭಿಯಾನ ಯೋಜನೆಯ ಡಿ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಉದ್ಘಾಟಿಸಿ ಮಾತನಾಡಿದರು. ಇತ್ತೀಚೆಗೆ ಪ್ರಗತಿಪರ ರೈತರು ಸಾವಯವ ಕೃಷಿಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ. ಸಾವಯವ ಉತ್ಪನ್ನಗಳಿಗೆ ಸದಾ ಬೇಡಿಕೆ ಇರುತ್ತದೆ. ಯುವ ರೈತರು ಸಾವಯವ ಕೃಷಿ ಬಗ್ಗೆ ಹೆಚ್ಚು ಒಲುವು ಹೊಂದಿ, ಕೃಷಿ ಉತ್ಪನ್ನ ಹೆಚ್ಚಿಸಬೇಕು, ಕೈಗಾರಿಕೆ ಹಾಗೂ ಸೇವಾ ವಲಯವನ್ನು ಮೀರಿ ಕೃಷಿ ವಲಯ ಬೆಳೆಯಬೇಕು ಎಂದರು.

ಜಿಲ್ಲಾ ಕೃಷಿಕ ಸಮಾಜದ ರಾಜ್ಯ ಪ್ರತಿನಿಧಿ ಪ್ರದೀಪ್ ಹೆಬ್ಬಾರ್ ಮಾತನಾಡಿ, ಸಿರಿಧಾನ್ಯಗಳ ಬೇಸಾಯ ಮತ್ತು ಮಾರುಕಟ್ಟೆಯನ್ನು ಉತ್ತೇಜಿಸುವ ಇಂತಹ ಕಾರ್ಯಕ್ರಮಗಳಲ್ಲಿ ರೈತರು ಹೆಚ್ಚಾಗಿ ಭಾಗವಹಿಸಬೇಕು ಎಂದರು.

ಬ್ರಹ್ಮಾವರ ರೈತ ಧ್ವನಿ ಸಂಘದ ಅಧ್ಯಕ್ಷ ಜಯರಾಮ ಶೆಟ್ಟಿ, ಬೈಂದೂರು ಕೃಷಿಕ ಸಮಾಜದ ಅಧ್ಯಕ್ಷ ವೆಂಕಟೇಶ್ ಹೆಬ್ಬಾರ್, ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಶ್ರೀದೇವಿ ಜಕ್ಕೆರಾಳ್, ರೈತ ಗಿರೀಶ್ ಪ್ರಭು, ಬ್ರಹ್ಮಾವರ ತಾಲೂಕು ಕೃಷಿ ಸಮಾಜದ ಸದಸ್ಯ ದಿನೇಶ್ ಕಾಮತ್ ಉಪಸ್ಥಿತರಿದ್ದರು.

ಇದೇ ಸಂದರ್ಭ ಕೃಷಿಯಲ್ಲಿ ವಿಶೇಷ ಸಾಧನೆ ರೈತರು ಹಾಗೂ ರೈತ ಮಹಿಳೆಯರನ್ನು ಮತ್ತು ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಹಾಗೂ ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯ ವಿಜೇತರನ್ನು ಸನ್ಮಾನಿಸಲಾಯಿತು.ಸಭಾ ಕಾರ್ಯಕ್ರಮಕ್ಕೂ ಮುನ್ನ ಕೃಷಿ ಉತ್ಪನ್ನಗಳ ವಸ್ತು ಪ್ರದರ್ಶನ ಮಳಿಗೆಗಳನ್ನು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಉದ್ಘಾಟಿಸಿದರು. ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕಿ ಪೂರ್ಣಿಮಾ ಜಿ.ಸಿ. ಪ್ರಾಸ್ತಾವಿಕವಾಗ ಮಾತನಾಡಿ, ಸಹಾಯಕ ಕೃಷಿ ನಿರ್ದೇಶಕಿ ಪೂಜಾ ನಾಯ್ಕ್ ಎಂ. ನಿರೂಪಿಸಿ, ಉಪಕೃಷಿ ನಿರ್ದೇಶಕ ಚಂದ್ರಶೇಖರ ನಾಯ್ಕ್ ವಂದಿಸಿದರು.