ರಾಜ್ಯದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಡವರಿಗೆ ಒಂದೇ ಒಂದು ಮನೆ ನೀಡಲಿಲ್ಲ. ಆಸ್ಪತ್ರೆಯಲ್ಲಿ ವೈದ್ಯರಿಲ್ಲ, ಶಾಲೆಯಲ್ಲಿ ಶಿಕ್ಷಕರಿಲ್ಲ, ಕೇಂದ್ರದ ಮೋದಿ ಸರ್ಕಾರ ಜಾರಿಗೆ ತಂದ ಜನೌಷಧಿ ಕೇಂದ್ರವನ್ನೇ ಮುಚ್ಚುವ ಕೆಲಸ ಮಾಡಿದ್ರು. ಅಂದಮೇಲೆ ಯಾವ ಪುರುಷಾರ್ಥಕ್ಕೆ ನಿಮ್ಮ ಸರ್ಕಾರ ಇರಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ಧಾಳಿ

 ಬಿ.ಎಚ್.ಎಂ. ಗುರುಶಾಂತ ಶಾಸ್ತ್ರಿ

ಕಂಪ್ಲಿ: ರಾಜ್ಯದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಡವರಿಗೆ ಒಂದೇ ಒಂದು ಮನೆ ನೀಡಲಿಲ್ಲ. ಆಸ್ಪತ್ರೆಯಲ್ಲಿ ವೈದ್ಯರಿಲ್ಲ, ಶಾಲೆಯಲ್ಲಿ ಶಿಕ್ಷಕರಿಲ್ಲ, ಕೇಂದ್ರದ ಮೋದಿ ಸರ್ಕಾರ ಜಾರಿಗೆ ತಂದ ಜನೌಷಧಿ ಕೇಂದ್ರವನ್ನೇ ಮುಚ್ಚುವ ಕೆಲಸ ಮಾಡಿದ್ರು. ಅಂದಮೇಲೆ ಯಾವ ಪುರುಷಾರ್ಥಕ್ಕೆ ನಿಮ್ಮ ಸರ್ಕಾರ ಇರಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು.

ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನೀಡಿದ್ದರೂ ದುರ್ಬಳಕೆ ಆದ 187 ಕೋಟಿ ರು. ವಾಪಸ್ ಆ ನಿಗಮಕ್ಕೆ ಜಮಾ ಆಗಬೇಕು ಎಂಬ ಆಗ್ರಹ ಸೇರಿದಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರದ ಆಡಳಿತ ವೈಫಲ್ಯಗಳನ್ನು ಪ್ರಸ್ತಾಪಿಸಿ ರಾಜ್ಯ ಬಿಜೆಪಿ ಹಮ್ಮಿಕೊಂಡಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆ ಸೋಮವಾರ ಗಣಿ ನಾಡು, ಬಳ್ಳಾರಿಯಲ್ಲಿ ಸಂಚರಿಸಿತು. 7ನೇ ದಿನವಾದ ಸೋಮವಾರ ಪಾದಯಾತ್ರೆ ಕಂಪ್ಲಿಯಿಂದ ಹಳೆ ದರೋಜಿವರೆಗೆ ಸುಮಾರು 20 ಕಿ.ಮೀ.ಕ್ರಮಿಸಿತು.

ಪಾದಯಾತ್ರೆ ವೇಳೆ ಹಳೆದರೋಜಿಯಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ವಿಜಯೇಂದ್ರ, ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದರು. ರಾಜ್ಯದಲ್ಲಿಂದು ಇಸ್ಪೀಟ್‌ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ಶಾಸಕರ, ಸಚಿವರ ಬೆಂಬಲ, ಪೊಲೀಸರ ಸಹಕಾರದಿಂದಲೇ ಈ ಇಸ್ಪೀಟ್‌ ದಂಧೆ ನಡೆಯುತ್ತಿದೆ ಎಂದು ಆರೋಪಿಸಿದರು.

ರಾಜ್ಯದ ಕಾಂಗ್ರೆಸ್‌ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ಭ್ರಷ್ಟಾಚಾರದಲ್ಲೇ ಕಾಲ ಕಳೆದಿದೆ. ಭ್ರಷ್ಟಾಚಾರ ಆರೋಪಕ್ಕೆ ಸಿಲುಕಿದ ನಾಗೇಂದ್ರ ಅವರನ್ನು ಎರಡು ಬಾರಿ ರಾಜೀನಾಮೆ ಕೊಡಿಸಿದ್ದೇವೆ. ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಿಕೊಂಡಿದ್ದಾರೆ. ಇಂತಹ ಜನವಿರೋಧಿ, ರೈತ ವಿರೋಧಿ, ದಲಿತ ವಿರೋಧಿ ಸರ್ಕಾರವನ್ನು ಮುಂದಿನ ಚುನಾವಣೆಯಲ್ಲಿ ಸೋಲಿಸಿ ಎಂದು ಕರೆ ನೀಡಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರ್ಬಳಕೆಯಾದ ಹಣ ಸಂಪೂರ್ಣವಾಗಿ ವಾಪಸ್ ಬರುವವರೆಗೂ ಬಿಜೆಪಿ ಹೋರಾಟ ನಿಲ್ಲಿಸುವುದಿಲ್ಲ. ಇದು ಕೇವಲ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸುವ ಹೋರಾಟವಲ್ಲ. ರಾಜ್ಯ ಸರ್ಕಾರದ ವೈಫಲ್ಯಗಳನ್ನು ಜನರ ಮುಂದಿಡುವ ಹೋರಾಟವಾಗಿದೆ ಎಂದು ಹೇಳಿದರು.

ನೆರೆಯಲ್ಲಿ ಓಕೆ, ಹೆಲಿಕಾಪ್ಟರ್‌ನಲ್ಲಿ ಬರ ವೀಕ್ಷಣೆ ಏಕೆ?:

ರಾಜ್ಯದಲ್ಲಿ ಬರ ಪರಿಸ್ಥಿತಿ ನಿರ್ಮಾಣವಾಗಿರುವ ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಹೆಲಿಕಾಪ್ಟರ್‌ನಲ್ಲಿ ತೆರಳಿ ಬರ ವೀಕ್ಷಣೆ ಮಾಡುತ್ತಿರುವುದು ಯಾವ ರೀತಿಯ ಆಡಳಿತ?. ಬರ ಅಧ್ಯಯನವನ್ನು ಹೆಲಿಕಾಪ್ಟರ್‌ನಲ್ಲಿ ಮಾಡಬೇಕು ಎಂದು ಯಾವ ಮಹಾಶಯ ಸಲಹೆ ನೀಡಿದ್ದಾರೋ ಗೊತ್ತಿಲ್ಲ. ಸಾಮಾನ್ಯವಾಗಿ ನೆರೆ ಬಂದ ಸಂದರ್ಭದಲ್ಲಿ ತುರ್ತು ಪರಿಸ್ಥಿತಿ ಅರಿಯಲು ಹೆಲಿಕಾಪ್ಟರ್ ಬಳಸುತ್ತಾರೆ. ಆದರೆ, ಮುಖ್ಯಮಂತ್ರಿ ಬರ ವೀಕ್ಷಣೆಗೆ ಹೆಲಿಕಾಪ್ಟರ್ ಬಳಸುತ್ತಿರುವುದು ದುರ್ದೈವದ ಸಂಗತಿ ಎಂದು ಟೀಕಿಸಿದರು.

ಜನರಿಂದ ಉತ್ತಮ ಪ್ರತಿಕ್ರಿಯೆ

ಬಳ್ಳಾರಿ ಚಲೋ ಪಾದಯಾತ್ರೆಗೆ ಜನರಿಂದ ಉತ್ತಮ ಪ್ರತಿಕ್ರಿಯೆ ದೊರೆಯುತ್ತಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಹೀಗಾಗಿ ಜನರು ಬಿಜೆಪಿ ಹೋರಾಟಕ್ಕೆ ಬೆಂಬಲ ನೀಡುತ್ತಿದ್ದಾರೆ ಎಂದರು.