ಸಾರಾಂಶ
ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದಲ್ಲಿ ಸೆ.6ರಂದು ನಡೆಯಲಿರುವ ಗಣೇಶನ ವಿಸರ್ಜನೆಯ ಮೆರವಣಿಗೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭೂಷಣ ಬೋರಸೆ ಹೇಳಿದರು.ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ನಿಯಮಗಳನ್ನು ರೂಪಿಸಲಾಗಿದ್ದು, ಈ ನಿಯಮಗಳನ್ನು ಪಾಲಿಸುವ ಮೂಲಕ ಶಾಂತಿಯುತ ಗಣೇಶೋತ್ಸವಕ್ಕೆ ಸಹಕರಿಸಬೇಕು ಎಂದು ಕೋರಿದರು.ಗಣೇಶ ವಿಸರ್ಜನೆಗೆ ಕೆಎಸ್ಆರ್ಪಿ ಐಜಿಯವರು ಮಾರ್ಗದರ್ಶನ ನೀಡಿದ್ದಾರೆ. ಹೀಗಾಗಿ, ಯಾವುದೇ ಅಹಿತಕರ ಘಟನೆ ನಡೆಯದಂತೆ ನಿಗಾ ವಹಿಸಲಾಗಿದ್ದು, ಎಲ್ಲರೂ ಶಾಂತಿ ಕಾಪಾಡಬೇಕೆಂದು ಪೊಲೀಸ್ ಆಯುಕ್ತರು ಕರೆ ನೀಡಿದ್ದಾರೆ. ವಿಸರ್ಜನಾ ಮೆರವಣಿಗೆ ಸಂದರ್ಭದಲ್ಲಿ ಓರ್ವ ಡಿಐಜಿ, ಏಳು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, 25 ಡಿಎಸ್ಪಿ, 87 ಇನ್ಸಪೆಕ್ಟರ್ ಹಾಗೂ 250 ಪಿಎಸೈ, ಎಎಸೈ ಸೇರಿದಂತೆ ಹೆಚ್ಚುವರಿ ಅಧಿಕಾರಿಗಳು ಕಾರ್ಯನಿರ್ವಹಿಸಲಿದ್ದಾರೆ ಎಂದರು.ವಿಸರ್ಜನಾ ಹೊಂಡಗಳಲ್ಲಿನ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಲೈಫ್ ಜಾಕೇಟ್ ಕೂಡ ಒದಗಿಸಲಾಗಿದೆ. 17 ಕಡೆ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ. ಇನ್ನು ಡಿಜೆಗೆ ಸಂಬಂಧಿಸಿದಂತೆ ಡೆಸಿಬಲ್ ನಿರ್ಧರಿಸಲಾಗಿದೆ ಎಂದು ತಿಳಿಸಿದರು.