ಸಾರಾಂಶ
ವೇತನ ನೇರಪಾವತಿ ಸೇರಿದಂತೆ ತಮ್ಮ ನಾಲ್ಕು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರಸಭೆ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಫೆ.೧೫ರ ಗುರುವಾರ ಮುಖ್ಯಮಂತ್ರಿ ಭೇಟಿ ಮಾಡುವುದಾಗಿ ನೌಕರರ ಸಂಘದ ಅಧ್ಯಕ್ಷ ಶ್ರೀನಿವಾಸ್ ತಿಳಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಚಳ್ಳಕೆರೆ
ಇಲ್ಲಿನ ನಗರಸಭೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಪೌರಕಾರ್ಮಿಕರು ವೇತನ ನೇರಪಾವತಿ ಸೇರಿದಂತೆ ತಮ್ಮ ನಾಲ್ಕು ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರಸಭೆ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಫೆ.೧೫ರ ಗುರುವಾರ ಮುಖ್ಯಮಂತ್ರಿ ಭೇಟಿ ಮಾಡುವುದಾಗಿ ನೌಕರರ ಸಂಘದ ಅಧ್ಯಕ್ಷ ಶ್ರೀನಿವಾಸ್ ತಿಳಿಸಿದ್ದಾರೆ.ಈ ಬಗ್ಗೆ ಮಾಹಿತಿ ನೀಡಿ, ಹೊರಗುತ್ತಿಗೆದಾರರ ರಾಜ್ಯಾಧ್ಯಕ್ಷ ಎಂ.ಬಿ. ನಾಗಣ್ಣಗೌಡ ಸೂಚನೆಯಂತೆ ಸುಮಾರು ೬೫ಕ್ಕೂ ಹೆಚ್ಚು ಜನರು ತಮ್ಮ ಬೇಡಿಕೆಗಳ ಈಡೇರಿಕೆಗೆ ಮುಖ್ಯಮಂತ್ರಿ ಭೇಟಿ ಮಾಡಲಿದ್ದಾರೆ. ಪ್ರತಿತಿಂಗಳು ಹೊರಗುತ್ತಿಗೆದಾರರಿಗೆ ವೇತನ ನೀಡುವಲ್ಲಿ ವಿಳಂಬವಾಗುತ್ತಿದೆ. ಸೇವಾ ಭದ್ರತೆ ಇಲ್ಲ. ಅಧಿಕಾರಿಗಳು ನಮ್ಮ ಬೇಡಿಕೆ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ಆದ್ದರಿಂದ ಮುಖ್ಯಮಂತ್ರಿ ಭೇಟಿ ಮಾಡಿ ಮನವಿ ಸಲ್ಲಿಸುವುದಾಗಿ ತಿಳಿಸಿದರು.
ನಗರಸಭಾ ಸದಸ್ಯ ಕೆ.ವೀರಭದ್ರಪ್ಪ, ಎಂ.ಜೆ. ರಾಘವೇಂದ್ರ, ಸಾಮಾಜಿಕ ಹೋರಾಟಗಾರರಾದ ಆರ್. ಪ್ರಸನ್ನಕುಮಾರ್, ಉಮೇಶ್ ಚಂದ್ರ ಬ್ಯಾನರ್ಜಿ, ಎಚ್.ಎಸ್. ಸೈಯದ್ ಮುಂತಾದವರು ಭೇಟಿ ನೀಡಿ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ, ಸರ್ಕಾರ ಇವರ ಎಲ್ಲಾ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕೆಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಕಾರ್ಯದರ್ಶಿ ಬಿ. ಮಂಜುನಾಥ, ಉಪಾಧ್ಯಕ್ಷ ಕೆ.ಪೆನ್ನೇಶ್, ಬಿ.ಪಾಪಣ್ಣ, ಆರ್.ನಾಗರಾಜ, ಎಚ್.ಉಮೇಶ್, ದೇವರಾಜ, ಬಸವರಾಜ, ಸೋಮಶೇಖರ್, ಎಸ್. ಪವನ್, ಯೋಗೇಶ್, ಮಂಜುನಾಥ ಬೆಳಗೆರೆ ಮುಂತಾದವರು ಭಾಗವಹಿಸಿದ್ದರು.