ಕನ್ನಡಪ್ರಭವ ವಾರ್ತೆ ಮಂಡ್ಯ
ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸುವಂತೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಯುವ ಅಹೋರಾತ್ರಿ ಪ್ರತಿಭಟನೆ ಬೆಂಬಲಿಸಿ ಮಂಡ್ಯದ ಮಡಿವಾಳ ಸಮಾಜದವರು ನೂರಾರು ಸಂಖ್ಯೆಯಲ್ಲಿ ಬೆಂಗಳೂರಿಗೆ ತೆರಳಿದರು.ನಗರದ ರೈತ ಸಭಾಂಗಣದ ಆವರಣದಿಂದ ಬಸ್ಸಿನಲ್ಲಿ ಬೆಂಗಳೂರಿಗೆ ಮಡಿವಾಳ ಸಮಾಜದವರು ತೆರಳಿದ ವೇಳೆ ಜಿಲ್ಲಾ ಮಡಿವಾಳ ಮಾಚಿದೇವ ಸಂಘದ ಅಧ್ಯಕ್ಷ ಡಿ.ರಮೇಶ್ ಮಾತನಾಡಿ, ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಹೋರಾತ್ರಿ ಪ್ರತಿಭಟನೆಗೆ ಸಮಾಜದವರು ಬೆಂಬಲ ಸೂಚಿಸಿದ್ದೇವೆ ಎಂದರು.
ಮಡಿವಾಳರನ್ನು ಪರಿಶಿಷ್ಟ ಜಾತಿಗೆ ಸೇರಿಸುವಂತೆ ಈ ಹಿಂದೆ ಸಮಾಜದ ಸ್ವಾಮೀಜಿಗಳು ಹಾಗೂ ಹಿರಿಯರು ಹೋರಾಟ ನಡೆಸಿದ ಪರಿಣಾಮ ರಾಜ್ಯ ಸರ್ಕಾರ ಕುಲಶಾಸ್ತ್ರೀಯ ಅಧ್ಯಯನ ಮಾಡಿಸಿ ವರದಿಯನ್ನು ಸ್ವೀಕರಿಸಿದೆ. ಆದರೆ, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡದೇ ನಿರ್ಲಕ್ಷ್ಯ ವಹಿಸಲಾಗಿದೆ. ಹೀಗಾಗಿ ನಮ್ಮ ಹಕ್ಕು ಪಡೆಯಲು ಸರ್ಕಾರದ ಮೇಲೆ ಒತ್ತಡ ಹೇರಬೇಕಾಗಿದೆ ಎಂದರು.ಡಿ.ದೇವರಾಜ ಅರಸು ವೇದಿಕೆ ಅಧ್ಯಕ್ಷ ಎಲ್.ಸಂದೇಶ್ ಮಾತನಾಡಿ, ನಮ್ಮ ಸಮಾಜ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯವಾಗಿ ತುಂಬಾ ಹಿಂದುಳಿದಿದೆ. ಇದನ್ನು ಪರಿಗಣಿಸಿ ದೇಶದ 18 ರಾಜ್ಯಗಳು, 3 ಕೇಂದ್ರಾಡಳಿತ ಪ್ರದೇಶದಲ್ಲಿ ಮಡಿವಾಳ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲಾಗಿದೆ. ಇಲ್ಲೂ ರಾಜ್ಯ ಸರ್ಕಾರ ಕಾಳಜಿ ಪ್ರದರ್ಶಿಸಬೇಕು. ಕಾಂಗ್ರೆಸ್ ಸರ್ಕಾರ ಮಡಿವಾಳ ಸಮಾಜದ ಮತಗಳಿಂದ ಬಂದಿದೆ. ಹಾಗಾಗಿ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸ ಬೇಕೆಂದು ಒತ್ತಾಯಿಸಿದರು.
ಈ ವೇಳೆ ಸಮಾಜದ ಮುಖಂಡರಾದ ಹಳುವಾಡಿ ವೆಂಕಟೇಶ್, ಸಿದ್ದಶೆಟ್ಟಿ,ಎನ್ ಸೋಮಶೇಖರ್, ಶಿವಮಾದು, ರಘು ಸೇರಿದಂತೆ ಇತರರು ಭಾಗವಹಿಸಿದ್ದರು.