ಬಂಗಾರಪೇಟೆ: ಮಾದಕ ವಸ್ತುಗಳ ಬಳಕೆ ವಿರುದ್ಧ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಬಂಗಾರಪೇಟೆ ಪೊಲೀಸ್ ಠಾಣೆ ವತಿಯಿಂದ ಡ್ರಗ್ಸ್‌ ಮುಕ್ತ ಅಭಿಯಾನದ ಅಂಗವಾಗಿ ಜಾಗೃತಿ ಜಾಥಾ ಹಾಗೂ ರೂಟ್ ಮಾರ್ಚ್ ನಡೆಸಲಾಯಿತು.

ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಷು ರಜಪೂತ್, ಕರ್ನಾಟಕವನ್ನು 2028ರೊಳಗೆ ಡ್ರಗ್ಸ್ ಮುಕ್ತಗೊಳಿಸುವ ಉದ್ದೇಶದಿಂದ ಸರ್ಕಾರದ ವತಿಯಿಂದ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ. ರೈಸ್ ಹಾಗೂ ಬೇಡ ಬ್ರೋ ಅಭಿಯಾನಗಳ ಮೂಲಕ ಯುವಜನರು ಮತ್ತು ಸಾರ್ವಜನಿಕರಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದರು. ನಗರದಲ್ಲಿ ನಡೆದ ರೂಟ್ ಮಾರ್ಚ್ ಕೇವಲ ಜಾಗೃತಿ ಕಾರ್ಯಕ್ರಮಕ್ಕೆ ಸೀಮಿತವಾಗಿಲ್ಲ. ರೌಡಿ ಚಟುವಟಿಕೆ, ಕಳ್ಳತನ ಹಾಗೂ ಸಮಾಜ ವಿರೋಧಿ ಚಟುವಟಿಕೆಗಳ ಮೇಲೆ ನಿಗಾ ವಹಿಸುವುದು ಮತ್ತು ಅಂತಹವರಿಗೆ ಎಚ್ಚರಿಕೆ ನೀಡುವುದು ಇದರ ಉದ್ದೇಶವಾಗಿದೆ ಎಂದು ತಿಳಿಸಿದರು.

ಅಲ್ಲದೆ ಸಂಚಾರ ನಿಯಮಗಳ ಪಾಲನೆಗೂ ಒತ್ತು ನೀಡಲಾಗುತ್ತಿದ್ದು, ಸಾರ್ವಜನಿಕರಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ವಿಶ್ವಾಸ ಮೂಡಿಸುವುದು ಮುಖ್ಯವಾಗಿದೆ. ಯಾವುದೇ ಸಮಸ್ಯೆ ಎದುರಾದಲ್ಲಿ ಜನರು ನೇರವಾಗಿ ಪೊಲೀಸ್ ಠಾಣೆ ಅಥವಾ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಶಿವಾಂಷು ರಜಪೂತ್ ಹೇಳಿದರು. ಇನ್ಸ್‌ಪೆಕ್ಟರ್ ರವಿಕುಮಾರ್, ಎಸ್‌ಐ ರಾಜಣ್ಣ ಇತರರು ಇದ್ದರು.