ಕನ್ನಡಪ್ರಭ ವಾರ್ತೆ ಬಾಗಲಕೋಟೆ

ರಾಜ್ಯದಲ್ಲಿ ಸುಮಾರು 30 ಲಕ್ಷ ಜನಸಂಖ್ಯೆ ಹೊಂದಿರುವ ಬಂಜಾರ ಸಮಾಜವು ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದ ಸೈದ್ಧಾಂತಿಕ ಮತಬ್ಯಾಂಕ್ ಆಗಿ ಬೆಂಬಲಿಸುತ್ತಾ ಬಂದಿದೆ. ಆದರೆ, ಇತ್ತೀಚೆಗೆ ನಡೆದ ಸಚಿವ ಸಂಪುಟದ ಮೊದಲ ಹಂತದ ರಚನೆಯಲ್ಲಿ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ಸಿಗದಿರುವುದು ಬಂಜಾರ ಸಮಾಜದಲ್ಲಿ ತೀವ್ರ ನಿರಾಶೆ ಮೂಡಿಸಿದೆ ಎಂದು ಸಮಾಜದ ಮುಖಂಡರಾದ ಚಂದ್ರಶೇಖರ ರಾಠೋಡ ಹೇಳಿದರು.ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2023ರ ವಿಧಾನಸಭಾ ಚುನಾವಣೆಯಲ್ಲಿ ಬಂಜಾರ ಸಮಾಜದ ಹಿರಿಯರು, ಯುವಕರು ಒಗ್ಗಟ್ಟಾಗಿ ಬಿಜೆಪಿ ಹಠಾವೋ, ತಾಂಡಾ ಬಚಾವೋ ಅಭಿಯಾನದ ಮೂಲಕ ಶೇ.90 ರಷ್ಟು ಮತಗಳನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ರಚನೆಯಾಗುವಲ್ಲಿ ಬಂಜಾರ ಸಮಾಜ ಬೆನ್ನೆಲುಬಾಗಿ ನಿಂತಿದೆ ಎಂದು ತಿಳಿಸಿದರು.ಹೀಗಾಗಿ, ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಲ್ಲಿ ಬಂಜಾರ ಸಮಾಜದ ಏಕೈಕ ಶಾಸಕರಾಗಿರುವ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಬಾಗಲಕೋಟೆ ಜಿಲ್ಲಾ ಬಂಜಾರ ಸಮಾಜದಿಂದ ರಾಜ್ಯ ಸರ್ಕಾರಕ್ಕೆ ಒತ್ತಾಯವಿದೆ. ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಾದರೂ ರುದ್ರಪ್ಪ ಲಮಾಣಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿದರು.

ಬಾಗಲಕೋಟೆ ಉಪ ಚುನಾವಣೆಯಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಅವರ ಗೆಲುವಿಗೆ ನಮ್ಮ ಸಮಾಜ ಬೆಂಬಲ ವ್ಯಕ್ತಪಡಿಸಿದೆ ಎಂದರು.ಸುದ್ದಿಗೋಷ್ಠಿಯಲ್ಲಿ ಸಮಾಜದ ಗುರುಗಳಾದ ಸಂತೋಷ ಮಹಾರಾಜರು, ಬಲರಾಮ ಪವಾರ, ಬಾಬು ಚವ್ಹಾಣ್, ಗೋಪಾಲ ಜಾಧವ, ತುಕರಾಮ್ ಚವ್ಹಾಣ್, ಆನಂದ ರಾಠೋಡ ಇದ್ದರು.