ಸಾರಾಂಶ
ರಾಮನಗರ: ಬನ್ನೇರುಘಟ್ಟ ಭಾಗವನ್ನು ಬೆಂಗಳೂರಿನ ಭಾಗವೆಂದು ಪರಿಗಣಿಸಿ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಕೆರೆಗಳನ್ನು ತುಂಬಿಸುವ ಜೊತೆಗೆ ತ್ಯಾಜ್ಯ ವಿಲೇವಾರಿ ಸಮಸ್ಯೆಗೆ ಪರಿಹಾರ ಕಲ್ಪಿಸಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಹೇಳಿದರು.
ಬನ್ನೇರುಘಟ್ಟದಲ್ಲಿ ಚುನಾವಣಾ ಪ್ರಚಾರ ನಡೆಸಿದ ಅವರು, ಅಭಿವೃದ್ಧಿ ವಿಚಾರದಲ್ಲಿ ತಾಪಂ, ಜಿಪಂ, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳನ್ನು ತಂದು ಈ ಭಾಗ ಅಭಿವೃದ್ಧಿಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಸಿದ್ದರಾಮಯ್ಯ ಅವರ ಮೊದಲ ಸರ್ಕಾರ ಇದ್ದಾಗ ಬನ್ನೇರುಘಟ್ಟದಿಂದ ಜಿಗಣಿ ರಸ್ತೆ ಮಂಜೂರಾತಿ ಮಾಡಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟಿದ್ದೇನೆ. ಇಲ್ಲಿನ ಪಂಚಾಯ್ತಿಗೆ ಕಾವೇರಿ ನೀರು ಒದಗಿಸಲು ಪ್ರಯತ್ನಿಸುತ್ತಿದ್ದೇವೆ. ಇದು ಕಾಂಗ್ರೆಸ್ ಹಾಗೂ ಡಿ.ಕೆ.ಸುರೇಶ್ ಗ್ಯಾರಂಟಿ ಎಂದರು.ಈ ಭಾಗದಲ್ಲಿ ಕೆರೆ ತುಂಬಿಸುವ ಯೋಜನೆ ಅನುಷ್ಠಾನಗೊಂಡಿದೆ. ಕಾವೇರಿ ನೀರು, ಅಭಿವೃದ್ಧಿ, ಗ್ಯಾರಂಟಿ ಯೋಜನೆಗಳಿಗಾಗಿ ನಿಮ್ಮ ಮತ ನೀಡಿ ಎಂದು ಕೇಳುತ್ತಿದ್ದೇನೆ. ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ಅನುಮತಿ ನೀಡಿಲ್ಲ. ಇನ್ನು ಕೇಂದ್ರ ಸರ್ಕಾರ ನಮ್ಮ ತೆರಿಗೆ ಹಣದಲ್ಲಿ ಸರಿಯಾದ ಪಾಲನ್ನು ನೀಡುತ್ತಿಲ್ಲ. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಈ ಭಾಗ ಅಭಿವೃದ್ಧಿಯಾಗಿ ಕೈಗಾರಿಕಾ ಪ್ರದೇಶಗಳು ಬೆಳೆಯಬೇಕು ಎಂಬ ಕಾರಣಕ್ಕೆ ಜಿಗಣಿಗೆ ಮೆಟ್ರೋ ರೈಲು ತರಲು ಸರ್ಕಾರ ಆದೇಶಿಸಿದೆ. ಬಿಜೆಪಿಯವರು ನಿಮಗ್ಯಾಕೆ ಮೆಟ್ರೋ ಎಂದು ಕೇಳುತ್ತಾರೆ ಎಂದು ಹೇಳಿದರು.
ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ಐದು ಗ್ಯಾರಂಟಿ ಜಾರಿ ಮಾಡಿದೆ. ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಬಡ ಮನೆಯೊಡತಿಯರಿಗೆ 2 ಸಾವಿರ ಪ್ರೋತ್ಸಾಹ ಧನ ಸಿಗುತ್ತಿದೆ. ಅನಭಾಗ್ಯ ಯೋಜನೆ ಮೂಲಕ 5 ಕೆ.ಜಿ ಅಕ್ಕಿ ನೀಡಲಾಗುತ್ತಿದೆ. ನಾವು 10 ಕೆ.ಜಿ ಅಕ್ಕಿ ನೀಡಲು ಕೇಂದ್ರದಿಂದ ಅಕ್ಕಿ ಖರೀದಿಗೆ ಮುಂದಾದರೆ ಕೇಂದ್ರ ಸರ್ಕಾರ ನಮಗೆ ಅಕ್ಕಿ ಮಾರಾಟ ಮಾಡಲು ನಿರಾಕರಿಸಿತು. ಹೀಗಾಗಿ ಅದೇ ದುಡ್ಡನ್ನು ಜನರಿಗೆ ನೀಡಲಾಗುತ್ತಿದೆ. ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡಲಾಗುತ್ತಿದೆ ಎಂದು ತಿಳಿಸಿದರು.ಚುನಾವಣೆ ನಂತರ ಈ ಯೋಜನೆ ಸ್ಥಗಿತವಾಗಲಿದೆ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಕೊಟ್ಟಿದ್ದನ್ನು ಎಂದಿಗೂ ಕಸಿದುಕೊಂಡಿಲ್ಲ. ನಾವು ಬಿಜೆಪಿಯವರಂತೆ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ, ಎಲ್ಲರ ಖಾತೆಗೆ 15 ಲಕ್ಷ ಹಾಕುತ್ತೇವೆ, ರೈತರ ಆದಾಯ ಡಬಲ್ ಮಾಡುತ್ತೇವೆ ಎಂದೆಲ್ಲಾ ಸುಳ್ಳು ಹೇಳಿಲ್ಲ. ನಾವು ಕೊಟ್ಟ ಮಾತಿನಂತೆ ನಡೆದು ಬಡವರಿಗೆ ನೆರವಾಗಿದ್ದೇವೆ ಎಂದು ಸುರೇಶ್ ಹೇಳಿದರು.
ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರ ನಡೆಸುವ ಮುನ್ನ ಬನ್ನೇರುಘಟ್ಟದ ಶ್ರೀ ಚಂಪಕಧಾಮ ಸ್ವಾಮಿ ದೇವಸ್ಥಾನದಲ್ಲಿ ಸುರೇಶ್ ವಿಶೇಷ ಪೂಜೆ ಸಲ್ಲಿಸಿ ಲೋಕ ಕಲ್ಯಾಣಕ್ಕಾಗಿ ಪ್ರಾರ್ಥಿಸಿದರು.ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಂಟಪ ಗ್ರಾಮದ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.