ಪರವಾನಗಿ ಪಡೆದ ಭೂಮಾಪಕರು ಕಳೆದ ಮಾರ್ಚ್ ತಿಂಗಳಿಂದ ನಡೆಸುತ್ತಿರುವ ಮುಷ್ಕರದಿಂದ ಜಮೀನು ಅಳತೆ ಹಾಗೂ ಸಂಬಂಧಿತ ಸೇವೆಗಳು ಸಂಪೂರ್ಣ ಸ್ಥಗಿತಗೊಂಡಿದ್ದು, ರೈತರು ಮತ್ತು ಜನಸಾಮಾನ್ಯರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಮಾಜಿ ಬಂಟ್ವಾಳ ತಾಲೂಕು ಪಂಚಾಯಿತಿ ಸದಸ್ಯ ಪ್ರಭಾಕರ ಪ್ರಭು ತಿಳಿಸಿದ್ದಾರೆ.

ಬಂಟ್ವಾಳ: ಪರವಾನಗಿ ಪಡೆದ ಭೂಮಾಪಕರು ಕಳೆದ ಮಾರ್ಚ್ ತಿಂಗಳಿಂದ ನಡೆಸುತ್ತಿರುವ ಮುಷ್ಕರದಿಂದ ಜಮೀನು ಅಳತೆ ಹಾಗೂ ಸಂಬಂಧಿತ ಸೇವೆಗಳು ಸಂಪೂರ್ಣ ಸ್ಥಗಿತಗೊಂಡಿದ್ದು, ರೈತರು ಮತ್ತು ಜನಸಾಮಾನ್ಯರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಮಾಜಿ ಬಂಟ್ವಾಳ ತಾಲೂಕು ಪಂಚಾಯಿತಿ ಸದಸ್ಯ ಪ್ರಭಾಕರ ಪ್ರಭು ತಿಳಿಸಿದ್ದಾರೆ.ಈ ಕುರಿತು ರಾಜ್ಯ ಕಂದಾಯ ಸಚಿವರಿಗೆ ಮನವಿ ಸಲ್ಲಿಸಿರುವ ಅವರು, ಜಮೀನು ಮಾರಾಟ-ಖರೀದಿ, ಕುಟುಂಬ ವಿಭಾಗ ಪತ್ರ, 11ಇ ನಕ್ಷೆ, ತಾತ್ಕಾಲಿಕ ಪೋಡಿ ಸೇರಿದಂತೆ ಅಳತೆ ಸಂಬಂಧಿತ ಅನೇಕ ಕಾರ್ಯಗಳು ಸ್ಥಗಿತಗೊಂಡಿವೆ ಎಂದು ಹೇಳಿದ್ದಾರೆ. ರಾಜ್ಯದಾದ್ಯಂತ ಲಕ್ಷಾಂತರ ಅರ್ಜಿಗಳು ವಿಲೇವಾರಿಯಾಗದೆ ಬಾಕಿ ಉಳಿದಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಹಾಗೂ ಬಂಟ್ವಾಳ ತಾಲೂಕೊಂದರಲ್ಲಿಯೇ 3 ಸಾವಿರಕ್ಕೂ ಅಧಿಕ ಅರ್ಜಿಗಳು ಬಾಕಿ ಉಳಿದಿವೆ ಎಂದು ಅವರು ತಿಳಿಸಿದ್ದಾರೆ.

ಪರವಾನಗಿ ಭೂಮಾಪಕರ ಪ್ರಮುಖ ಬೇಡಿಕೆಗಳಾದ ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ ಹಾಗೂ ವಿಶೇಷ ನೇಮಕಾತಿ ಮೂಲಕ ಸರ್ಕಾರಿ ಸೇವೆಯಲ್ಲಿ ಸಕ್ರಮಗೊಳಿಸುವ ವಿಚಾರಗಳಲ್ಲಿ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಪರವಾನಗಿ ಭೂಮಾಪಕರ ಬೇಡಿಕೆಗಳನ್ನು ಈಡೇರಿಸಿ, ಜನರ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.