ಬಂಟ್ವಾಳ: ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಪಂ ವ್ಯಾಪ್ತಿಗಳಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ಉಂಟಾಗಿರುವ ಸಮಸ್ಯೆಗಳ ಕುರಿತು ಸೋಮವಾರ ಬಂಟ್ವಾಳ ತಾಪಂ ಸಭಾಂಗಣದಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ಭಾಗವಹಿಸಿದ ಶಾಸಕ ರಾಜೇಶ್ ನಾಯ್ಕ್ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗಳ ಪ್ರಗತಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಲಜೀವನ್ ಮಿಷನ್ ಬಹು ಗ್ರಾಮ ಯೋಜನೆಗಳಲ್ಲಿ ಉಂಟಾಗಿರುವ ತಾಂತ್ರಿಕ ಅಡಚಣೆಗಳಿಂದ ಕೆಲವು ಪ್ರದೇಶಗಳಲ್ಲಿ ನೀರಿನ ಲಭ್ಯತೆಯಲ್ಲಿ ಸಮಸ್ಯೆ ಉಂಟಾಗಿರುವ ಬಗ್ಗೆ ಮಾಹಿತಿ ಪಡೆದ ಶಾಸಕ ರಾಜೇಶ್ ನಾಯ್ಕ್, ಕುಡಿಯುವ ನೀರಿನ ಪೂರೈಕೆಯನ್ನು ಪ್ರಥಮ ಆದ್ಯತೆಯಾಗಿ ಪರಿಗಣಿಸಿ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ತಾಲೂಕಿನ ಪ್ರತಿಯೊಂದು ಗ್ರಾಮಾಡಳಿತ ಅಧಿಕಾರಿಗಳೊಂದಿಗೆ ಸಂವಹನ ನಡೆಸಿದ ಅವರು, ನೀರಿನ ಕೊರತೆ ಎದುರಾಗದಂತೆ ಲಭ್ಯ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಅಗತ್ಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರು.

ತಹಸೀಲ್ದಾರ್ ಮಂಜುನಾಥ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸಚಿನ್ ಕುಮಾರ್, ಗ್ರಾಪಂ ಆಡಳಿತಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿ ಪೂರಕ ಮಾಹಿತಿ ನೀಡಿದರು.


ಗೋಳ್ತಮಜಲು, ಬಾಳ್ತಿಲ ಸೇರಿದಂತೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಪ್ರದೇಶಗಳ ಗ್ರಾಪಂಗಳಲ್ಲಿ ಕಾಮಗಾರಿಯಿಂದ ಕುಡಿಯುವ ನೀರಿನ ಪೂರೈಕೆಗೆ ಅಡಚಣೆ ಉಂಟಾದರೆ ತಕ್ಷಣ ಗಮನಕ್ಕೆ ತರಬೇಕು ಎಂದು ಶಾಸಕರು ಸೂಚಿಸಿದರು. ಜೊತೆಗೆ ಜಲಜೀವನ್ ಮಿಷನ್ ಹಾಗೂ ಮೆಸ್ಕಾಂ ಅಧಿಕಾರಿಗಳು ತಹಸೀಲ್ದಾರ್ ನೇತೃತ್ವದಲ್ಲಿ ಸಭೆ ನಡೆಸಿ ಸಮಸ್ಯೆ ಬಗೆಹರಿಸಬೇಕು ಎಂದರು.

ಜಕ್ರಿಬೆಟ್ಟು ಡ್ಯಾಂ ನಿರ್ಮಾಣದ ಬಳಿಕ ಕುಡಿಯುವ ನೀರಿನ ಸಮಸ್ಯೆ ಬಹುತೇಕ ನಿವಾರಣೆಯಾಗಿದೆ ಎಂದು ಹೇಳಿದ ಅವರು, ಇದೀಗ ವಿತರಣಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ ಎಂದರು. ವಿವಿಧ ಗ್ರಾಪಂ ಪಿಡಿಒಗಳು ತಮ್ಮ ವ್ಯಾಪ್ತಿಯಲ್ಲಿನ ಸಮಸ್ಯೆಗಳ ಕುರಿತು ಸಭೆಯಲ್ಲಿ ಗಮನ ಸೆಳೆದರು.