ಬಾನು ಮುಷ್ತಾಕ್‌ರಿಂದ ದಸರಾ ಉದ್ಘಾಟನೆ ಬೇಡ

| Published : Sep 02 2025, 01:00 AM IST

ಸಾರಾಂಶ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಅವರನ್ನು ಆಹ್ವಾನಿಸುವ ನಿರ್ಧಾರವನ್ನು ಸರ್ಕಾರ ತಕ್ಷಣ ಹಿಂತೆಗೆದುಕೊಳ್ಳುವಂತೆ ಹಿಂದೂ ಜನ ಜಾಗೃತಿ ಸಮಿತಿ ವತಿಯಿಂದ ಪಟ್ಟಣದಲ್ಲಿ ಸೋಮವಾರ ತಹಸೀಲ್ದಾರ್‌ ಮೂಲಕ ಮನವಿ ಅರ್ಪಿಸಲಾಯಿತು.

ಲಕ್ಷ್ಮೇಶ್ವರ: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಅವರನ್ನು ಆಹ್ವಾನಿಸುವ ನಿರ್ಧಾರವನ್ನು ಸರ್ಕಾರ ತಕ್ಷಣ ಹಿಂತೆಗೆದುಕೊಳ್ಳುವಂತೆ ಹಿಂದೂ ಜನ ಜಾಗೃತಿ ಸಮಿತಿ ವತಿಯಿಂದ ಪಟ್ಟಣದಲ್ಲಿ ಸೋಮವಾರ ತಹಸೀಲ್ದಾರ್‌ ಮೂಲಕ ಮನವಿ ಅರ್ಪಿಸಲಾಯಿತು.

ಈ ವೇಳೆ ಸಮಿತಿಯ ಮುಖಂಡರು ಮಾತನಾಡಿ, ಮೈಸೂರು ದಸರಾ ಕೇವಲ ಸಾಂಸ್ಕೃತಿಕ ಹಬ್ಬವಲ್ಲ. ಅದು ಕರ್ನಾಟಕದ ಅತಿ ದೊಡ್ಡ ಧಾರ್ಮಿಕ ಹಾಗೂ ಪಾರಂಪರಿಕ ಹಿಂದೂಗಳ ಹಬ್ಬವಾಗಿದೆ. ಇಂತಹ ಪವಿತ್ರ ಹಬ್ಬದ ಉದ್ಘಾಟನೆ ಮಾಡುವ ಅತಿಥಿಗಳು ದೇವಿಯ ಮೇಲೆ ಶ್ರದ್ಧೆ, ಮೂರ್ತಿಪೂಜೆಯ ಮೇಲೆ ನಂಬಿಕೆ, ಭಕ್ತಿ ಹಾಗೂ ನಾಡದೇವಿಯ ಮೇಲೆ ಗೌರವ ಹೊಂದಿರಬೇಕು. ಆದರೆ ಬಾನು ಮುಷ್ತಾಕ್‌ ಅವರು ಹಿಂದಿನ ಭಾಷಣಗಳಲ್ಲಿ ನಾಡದೇವಿ ಭುವನೇಶ್ವರಿ ದೇವಿಯನ್ನು ನಂಬುವುದಿಲ್ಲವೆಂದು ಸ್ಪಷ್ಟವಾಗಿ ಹೇಳಿದ್ದಾರೆ. ದತ್ತಪೀಠ ಹೋರಾಟದ ಸಂದರ್ಭದಲ್ಲೂ ಮುಸ್ಲಿಂ ಸಮುದಾಯದ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇಂತಹ ವ್ಯಕ್ತಿಯನ್ನು ದಸರಾ ಉದ್ಘಾಟನೆಗೆ ಆಹ್ವಾನಿಸುವುದು ಅನುಚಿತವಾಗಿದ್ದು, ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತದೆ ಎಂದು ಹೇಳಿದ್ದಾರೆ.

ನಮ್ಮ ರಾಜ್ಯವು ಸಂಸ್ಕೃತಿ, ಪರಂಪರೆ ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುವ ಅಸಂಖ್ಯಾತ ಗಣ್ಯರನ್ನು ಹೊಂದಿದೆ. ಪ್ರಸಿದ್ಧ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರಂಥವರನ್ನು ಆಹ್ವಾನಿಸಬಹುದು. ಸರ್ಕಾರ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸುವ ನಿರ್ಧಾರವನ್ನು ತಕ್ಷಣ ಹಿಂತೆಗೆದುಕೊಳ್ಳಬೇಕು. ದಸರಾ ಉತ್ಸವ ಉದ್ಘಾಟನೆಗೆ ಡಾ. ಎಸ್.ಎಲ್. ಭೈರಪ್ಪ ಅವರಂತಹ ಗಣ್ಯರನ್ನು ಆಹ್ವಾನಿಸಿ ಗೌರವಿಸಬೇಕು ಎಂದು ಆಗ್ರಹಿಸಲಾಗಿದೆ.

ಮೈಸೂರು ದಸರಾ ಹಬ್ಬದ ಪಾವಿತ್ರ‍್ಯ ಕಾಪಾಡಲ್ಪಡುವುದರೊಂದಿಗೆ ಹಿಂದೂ ಸಮುದಾಯದ ಭಾವನೆಗಳಿಗೆ ಧಕ್ಕೆಯಾಗದಂತೆ ಸರ್ಕಾರ ನಿರ್ಧಾರ ಮರುಪರಿಶೀಲಿಸಬೇಕು ಎಂದು ವಿನಂತಿಸಲಾಗಿದೆ.

ಈ ವೇಳೆ ವಕೀಲ ಎಂ.ಎನ್. ಬಾಡಗಿ, ಅಮರೇಶ ಗಾಂಜಿ, ಈರಣ್ಣ ಪೂಜಾರ, ದುಂಡಪ್ಪ ಸವಣೂರು, ಯಲ್ಲಪ್ಪಗೌಡ ಪಾಟೀಲ, ಶಂಕರ ಬ್ಯಾಡಗಿ, ಸುಮಾ ಕುಂಬಾರ, ಶೋಭಾ ಇಟಗಿ ಮತ್ತಿತರರು ಹಾಜರಿದ್ದರು.