26ರಂದು ಬಸವ ಜಯಂತಿ, ಅಭಿನಂದನಾ ಸಮಾರಂಭ

| Published : May 24 2024, 12:51 AM IST

ಸಾರಾಂಶ

ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದಿಂದ ಬಸವ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ನಗರದ ಬಿಐಇಟಿ ಕಾಲೇಜಿನ ಎಸ್‌.ಎಸ್‌. ಮಲ್ಲಿಕಾರ್ಜುನ ಸಾಂಸ್ಕೃತಿಕ ಕೇಂದ್ರದಲ್ಲಿ ಮೇ 26ರಂದು ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾ ಜಿಲ್ಲಾಧ್ಯಕ್ಷ, ದೂಡಾ ಮಾಜಿ ಅಧ್ಯಕ್ಷ ದೇವರಮನಿ ಶಿವಕುಮಾರ ದಾವಣಗೆರೆಯಲ್ಲಿ ಹೇಳಿದ್ದಾರೆ.

- ಸಮಾಜದ ಸಾಧಕ ವಿದ್ಯಾರ್ಥಿ, ಯುವಜನರಿಗೆ ಸನ್ಮಾನ: ದೇವರಮನಿ ಶಿವಕುಮಾರ - - - - ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರಿಂದ ಉದ್ಘಾಟನೆ

- ಮಾಜಿ ಸಚಿವ ಮುಂಡರಗಿಯ ಎಸ್.ಎಸ್. ಪಾಟೀಲ ಮುಖ್ಯ ಅತಿಥಿಯಾಗಿ ಭಾಗಿ

- "ಅನುಷ್ಠಾನದ ದಾರಿಗಳು " ವಿಷಯವಾಗಿ ವಿಶ್ವಾರಾಧ್ಯ ಸತ್ಯಂಪೇಟೆ ಅವರಿಮದ ಉಪನ್ಯಾಸ

- - - ಕನ್ನಡಪ್ರಭ ವಾರ್ತೆ, ದಾವಣಗೆರೆ

ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದಿಂದ ಬಸವ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ನಗರದ ಬಿಐಇಟಿ ಕಾಲೇಜಿನ ಎಸ್‌.ಎಸ್‌. ಮಲ್ಲಿಕಾರ್ಜುನ ಸಾಂಸ್ಕೃತಿಕ ಕೇಂದ್ರದಲ್ಲಿ ಮೇ 26ರಂದು ಹಮ್ಮಿಕೊಳ್ಳಲಾಗಿದೆ ಎಂದು ಮಹಾಸಭಾ ಜಿಲ್ಲಾಧ್ಯಕ್ಷ, ದೂಡಾ ಮಾಜಿ ಅಧ್ಯಕ್ಷ ದೇವರಮನಿ ಶಿವಕುಮಾರ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ 4 ಗಂಟೆಗೆ ಜಿಲ್ಲಾಧ್ಯಕ್ಷ ದೇವರಮನಿ ಶಿವಕುಮಾರ ಅಧ್ಯಕ್ಷತೆಯಲ್ಲಿ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಸಮಾರಂಭ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವ ಮುಂಡರಗಿಯ ಎಸ್.ಎಸ್. ಪಾಟೀಲ ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದರು.

ಬಸವ ತತ್ವ:

"ಅನುಷ್ಠಾನದ ದಾರಿಗಳು " ವಿಷಯವಾಗಿ ಉಪನ್ಯಾಸ ಕಾರ್ಯಕ್ರಮದಲ್ಲಿ ಷಹಪುರದ ಬಸವ ಮಾರ್ಗದ ಸಂಪಾದಕ ವಿಶ್ವಾರಾಧ್ಯ ಸತ್ಯಂಪೇಟೆ ವಿಷಯ ಮಂಡಿಸುವರು. ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷರಾದ ಹಿರಿಯ ಕೈಗಾರಿಕೋದ್ಯಮಿಗಳಾದ ಅಥಣಿ ಎಸ್. ವೀರಣ್ಣ, ಅಣಬೇರು ರಾಜಣ್ಣ, ಎಸ್.ಎಸ್. ಗಣೇಶ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಯುಪಿಎಸ್‌ಸಿ ಸಿಎಸ್‌ಇ-2023ರ ಸಾಧಕಿ ಸೌಭಾಗ್ಯ ಎಸ್. ಬೀಳಗಿಮಠ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ಬಾಗಲಕೋಟೆಯ ಮೆಳ್ಳಿಗೆರೆಯ ವಿದ್ಯಾರ್ಥಿನಿ ಅಂಕಿತ ಬಸಪ್ಪ, ಜಿಲ್ಲೆಗೆ ಮೊದಲ ಸ್ಥಾನ ಪಡೆದ ಶಾಬನೂರು ಗ್ರಾಮದ ಎಚ್‌.ಜಿ. ಗಾನವಿ ಅವರನ್ನು ಮಹಾಸಭಾದಿಂದ ಅಭಿನಂದಿಸಲಾಗುವುದು. 2021-22, 2022-23ನೇ ಸಾಲಿನ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ, ಪ್ರೋತ್ಸಾಹಿಸಲಾಗುವುದು ಎಂದು ಮಾಹಿತಿ ನೀಡಿದರು.

ಸಮಾರಂಭದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಮಹಾ ಅಧಿವೇಶನದ ಯಶಸ್ಸಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಗೌರವ ಸಮರ್ಪಣೆ ನಡೆಯಲಿದೆ. ಶ್ರೀ ಸಿದ್ಧರಾಮ ಕೇಸಾಪುರ ಮತ್ತು ತಂಡ, ಬೆಂಗಳೂರಿನ ಕಲರವ ಸಾಂಸ್ಕೃತಿಕ ವೇದಿಕೆ, ದಾವಣಗೆರೆಯ ಕದಳಿ ಮಹಿಳಾ ವೇದಿಕೆಯಿಂದ ವಚನ ಗೀತೆ ಕಾರ್ಯಕ್ರಮ ನಡೆಯಲಿದೆ. ಸಮಾಜ ಬಾಂಧವರು ಭಾಗವಹಿಸುವಂತೆ ಶಿವಕುಮಾರ ಮನವಿ ಮಾಡಿದರು.

ಮಹಾಸಭಾ ರಾಷ್ಟ್ರೀಯ ಉಪಾಧ್ಯಕ್ಷ, ಹಿರಿಯ ಹೋಟೆಲ್‌ ಉದ್ಯಮಿ ಅಣಬೇರು ರಾಜಣ್ಣ, ಯುವ ಮುಖಂಡರಾದ ಬಿ.ಜಿ. ರಮೇಶ, ಐಗೂರು ಚಂದ್ರಶೇಖರ, ಹಿರಿಯ ವಕೀಲ ಪ್ರಕಾಶ ಪಾಟೀಲ್‌, ಶುಭ ಐನಳ್ಳಿ, ಶಿವಕುಮಾರ ಕೊರಟಗೆರೆ, ಸುನಿಲ್ ಬಾಗೇವಾಡಿ, ನಿಧಿ ಐನಳ್ಳಿ ಇತರರು ಇದ್ದರು.

- - - -23ಕೆಡಿವಿಜಿ1:

ದಾವಣಗೆರೆಯಲ್ಲಿ ಗುರುವಾರ ಅ.ಭಾ.ವೀ.ಮ. ಜಿಲ್ಲಾಧ್ಯಕ್ಷ ದೇವರಮನಿ ಶಿವಕುಮಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.