ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಜಿಲ್ಲಾ ಕೇಂದ್ರದಲ್ಲಿ ಸರ್ಕಾರದ ವತಿಯಿಂದ ಏ.20ರಂದು ಬಸವ ಜಯಂತಿ, ಏ.21ರಂದು ಶಂಕರಾಚಾರ್ಯ ಹಾಗೂ 23ರಂದು ಭಗೀರಥ ಜಯಂತಿಯ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಉಪವಿಭಾಗಾಧಿಕಾರಿ ಡಾ.ಕೆ.ಜೆ.ಕಾಂತರಾಜ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹನೀಯರ ಜಯಂತಿ ಆಚರಿಸುವ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಸವ ಜಯಂತಿಯನ್ನು ಏ.20ರಂದು ಮಧ್ಯಾಹ್ನ 3ಕ್ಕೆ ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ನೀಲಕಂಠೇಶ್ವರ ಸಮುದಾಯ ಭವನದಲ್ಲಿ ಆಚರಿಸಲು ಸಮಾಜದ ಮುಖಂಡರು ಸಲಹೆ ನೀಡಿದ್ದಾರೆ. ಜಯಂತಿ ಕಾರ್ಯಕ್ರಮದ ನಂತರ ಸಂಜೆ 4.30ಕ್ಕೆ ಮೆರವಣಿಗೆಗೆ ಚಾಲನೆ ನೀಡಲಾಗುವುದು ಎಂದರು.
ನೀಲಕಂಠೇಶ್ವರ ದೇಗುಲದಿಂದ ಗಾಂಧಿ ವೃತ್ತ, ಆನೆಬಾಗಿಲು, ಚಿಕ್ಕಪೇಟೆ, ದೊಡ್ಡಪೇಟೆ, ರಂಗಯ್ಯನಬಾಗಿಲು, ಬಸವಮಂಟಪ, ನಗರಸಭೆ, ಮದಕರಿ ವೃತ್ತ ಮಾರ್ಗವಾಗಿ ಪುನಃ ನೀಲಕಂಠೇಶ್ವರ ದೇಗುಲದವರೆಗೂ ವಿವಿಧ ಕಲಾತಂಡಗಳೊಂದಿಗೆ ಬಸವಣ್ಣನವರ ಭಾವಚಿತ್ರ ಮೆರವಣಿಗೆ ನಡೆಸಲು ಸಭೆಯಲ್ಲಿ ಸಮಾಜದ ಮುಖಂಡರು ಚರ್ಚಿಸಿದರು. ಇದಕ್ಕೆ ಸಮ್ಮತಿ ವ್ಯಕ್ತಪಡಿಸಿದ ಉಪವಿಭಾಗಾಧಿಕಾರಿಗಳು, ಸರ್ಕಾರದ ಶಿಷ್ಟಾಚಾರ ಪಾಲಿಸಿಕೊಂಡು ಅರ್ಥಪೂರ್ಣವಾಗಿ ಆಚರಿಸಲಾಗುವುದು. ಜಯಂತಿ ಅಂಗವಾಗಿ ಬಸವೇಶ್ವರರ ವಚನ ಗಾಯನ ಕಾರ್ಯಕ್ರಮ ಅಲ್ಲದೇ ಇವರ ಕುರಿತಾದ ವಿಶೇಷ ಉಪನ್ಯಾಸಕ್ಕಾಗಿ ಸಂಪನ್ಮೂಲ ವ್ಯಕ್ತಿಯನ್ನು ಗುರುತಿಸಿ ಆಹ್ವಾನಿಸಲಾಗುವುದು ಎಂದರು.ವೀರಶೈವ ಸಮಾಜದ ಅಧ್ಯಕ್ಷ ಎಸ್ಎಂಎಲ್ ತಿಪ್ಪಣ್ಣ, ವೀರಶೈವ ಲಿಂಗಾಯತ ಸಮಾಜದ ಮುಖಂಡರಾದ ಸುನೀತಾ ಮಲ್ಲಿಕಾರ್ಜುನ್, ಕೆಇಬಿ ಷಣ್ಮುಖಪ್ಪ, ಶಶಿಧರ್ ಬಾಬು, ವೀರೇಂದ್ರ, ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಚಿದಾನಂದಸ್ವಾಮಿ, ಪೊಲೀಸ್ ಇಲಾಖೆಯ ದಾದಾಪೀರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಭಗೀರಥ ಜಯಂತಿಯನ್ನು ಏ.23ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ಮಹರ್ಷಿ ವಾಲ್ಮೀಕಿ ಭವನಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಭಗೀರಥ ಮಹರ್ಷಿರವರ ಕುರಿತು ಗೀತಗಾಯನ ಕಾರ್ಯಕ್ರಮ ಅಲ್ಲದೇ ಭಗೀರಥರ ಕುರಿತು ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲಾಗುವುದು. ಭಗೀರಥರ ಭಾವಚಿತ್ರಕ್ಕೆ ಪುಷ್ಪಾಲಂಕಾರ ವ್ಯವಸ್ಥೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಉಪವಿಭಾಗಾಧಿಕಾರಿಗಳು ನಿರ್ದೇಶನ ನೀಡಿದರು.
ಉಪ್ಪಾರ ಸಮಾಜದ ಗೌರವಾಧ್ಯಕ್ಷ ನಾಗರಾಜ್, ಜಿಲ್ಲಾ ಅಧ್ಯಕ್ಷ ಎನ್.ವೀರೇಶ್, ಪ್ರಧಾನ ಕಾರ್ಯದರ್ಶಿ ಎಲ್.ಮಹೇಶ್, ಖಜಾಂಚಿ ಹೆಚ್.ಅಜ್ಜಪ್ಪ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏ.21ರಂದು ಬೆಳಿಗ್ಗೆ 11ಕ್ಕೆ ಶ್ರೀ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮ ಅರ್ಥಪೂರ್ಣವಾಗಿ ಆಚರಿಸಲು ಸಭೆಯಲ್ಲಿ ನಿರ್ಧರಿಸಲಾಯಿತು.ಶ್ರೀ ಶಂಕರಾಚಾರ್ಯರ ಕುರಿತಾದ ಸಂಗೀತ ಕಾರ್ಯಕ್ರಮ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್ ತಿಳಿಸಿದರು.
ಚಿತ್ರದುರ್ಗ ಬ್ರಾಹ್ಮಣ ಸಂಘದ ಅಧ್ಯಕ್ಷ ಪಿ.ಎಸ್.ಮಂಜುನಾಥ, ಕಾರ್ಯದರ್ಶಿ ಪ್ರಾಣೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.