ಕನ್ನಡಪ್ರಭ ವಾರ್ತೆ ದಾವಣಗೆರೆ

12ನೇ ಶತಮಾನದಲ್ಲಿ ಸಂಕೀರ್ಣವಾದ ಧಾರ್ಮಿಕ ವಿಧಿವಿಧಾನಗಳನ್ನು ಬದಿಗಿಟ್ಟು, ಸಾಮಾನ್ಯ ಜನರಿಗೂ ಅರ್ಥವಾಗುವ ಸರಳ ಕನ್ನಡ ಭಾಷೆಯಲ್ಲಿ ವಚನಗಳ ಮೂಲಕ ಬಸವಣ್ಣನವರು ಸಾಮಾಜಿಕ ಪರಿವರ್ತನೆ ತಂದರು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲ ರಾವ್ ಹೇಳಿದರು.

ಅವರು ಸೋಮವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಏರ್ಪಡಿಸಿದ್ದ ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರ ಜಯಂತಿಯಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರ ಕ್ರಾಂತಿಕಾರಿ ವಿಚಾರಧಾರೆಗಳ ಕುರಿತು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ಪ್ರಪಂಚದ ಮೊಟ್ಟಮೊದಲ ಸಂಸತ್ತು ಎಂದೇ ಕರೆಯಲ್ಪಡುವ ‘ಅನುಭವ ಮಂಟಪ’ದ ಮೂಲಕ ಬಸವಣ್ಣನವರು ಪ್ರಜಾಪ್ರಭುತ್ವ ಮತ್ತು ಅಭಿವ್ಯಕ್ತಿ ಸ್ವಾತಂತ್ರ‍್ಯಕ್ಕೆ ಅಡಿಪಾಯ ಹಾಕಿಕೊಟ್ಟರು. ಜಾತಿ ಮತ್ತು ವರ್ಗ ರಹಿತ ಸಮಾಜದ ಪರಿಕಲ್ಪನೆ ಇಂದಿನ ಆಧುನಿಕ ಯುಗಕ್ಕೂ ಅತ್ಯಂತ ಪ್ರಸ್ತುತವಾಗಿದೆ ಎಂದು ತಿಳಿಸಿದರು.

‘ಕಾಯಕವೇ ಕೈಲಾಸ’ ಎಂಬ ಮಂತ್ರದ ಮೂಲಕ ಶ್ರಮ ಸಂಸ್ಕೃತಿಯನ್ನು ಗೌರವಿಸಿದ ಮಹಾನ್ ಮಾನವತಾವಾದಿ ಬಸವಣ್ಣ. ಮನುಷ್ಯ ಕೇವಲ ತನ್ನ ಸ್ವಾರ್ಥಕ್ಕಾಗಿ ಬದುಕದೆ, ಸಮಾಜದ ಹಿತಕ್ಕಾಗಿ ಶ್ರಮಿಸಬೇಕು. ಪ್ರಾಣಿ-ಪಕ್ಷಿಗಳಿಗೆ ನೀರುಣಿಸುವುದು ಸೇರಿದಂತೆ ಪ್ರಕೃತಿಯನ್ನು ಪ್ರೀತಿಸುವುದು ಕೂಡ ಕಾಯಕದ ಒಂದು ಭಾಗವೇ ಆಗಿದೆ ಎಂದು ಬಣ್ಣಿಸಿದರು. ಪರಸ್ಪರ ಪ್ರೀತಿ, ವಿಶ್ವಾಸ ಮತ್ತು ಮೃದು ವಚನಗಳೇ ಸನ್ಮಾರ್ಗಕ್ಕೆ ದಾರಿ. ಸಮಾಜದಲ್ಲಿ ಎಲ್ಲರೂ ಸಮಾನರು ಎಂಬ ಭಾವನೆ ಬೆಳೆಯಬೇಕು ಎಂದು ಕರೆ ನೀಡಿದರು.


ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಮಾತನಾಡಿ, 12ನೇ ಶತಮಾನದಲ್ಲಿ ಬಸವಣ್ಣನವರು ನೀಡಿದ ವಚನಗಳು ಇಂದಿನ ಸಮಾಜಕ್ಕೂ ಅತ್ಯಂತ ಪ್ರಸ್ತುತವಾಗಿವೆ, ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ಸುಮಾರು 572 ಕೋಟಿ ರುಪಾಯಿ ವೆಚ್ಚದ ನೂತನ ಅನುಭವ ಮಂಟಪ ಹಾಗೂ ಪರುಷಕಟ್ಟೆಯ ಅಭಿವೃದ್ಧಿ ಕಾಮಗಾರಿಗಳಲ್ಲಿ ನಾನು ಕಾರ್ಯನಿರ್ವಹಿಸಿದ್ದು ನನಗೆ ಹೆಮ್ಮೆ ಎನಿಸುತ್ತದೆ, ‘ಕಾಯಕವೇ ಕೈಲಾಸ’ ಎಂಬ ತತ್ವದೊಂದಿಗೆ ಸಮಾಜದ ಎಲ್ಲ ವರ್ಗದವರನ್ನು ಒಗ್ಗೂಡಿಸುವ ಬಸವಣ್ಣನವರ ಆಶಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ, ಎಎಸ್ಪಿ ಪರಮೇಶ್ವರ ಹೆಗಡೆ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಧುಸೂಧನ್, ತೋಟಗಾರಿಕೆ ಜಂಟಿ ನಿರ್ದೇಶಕ ರಾಘವೇಂದ್ರ, ಕೃಷಿ ಜಂಟಿ ನಿರ್ದೇಶಕ ಜಿಯಾವುಲ್ಲಾ, ಡಿಡಿಪಿಐ ಕೊಟ್ರೇಶ್, ಡಿಡಿಪಿಯು ಪಳನಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ರಶ್ಮಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಸಮುದಾಯದ ಐಗೂರು ಚಂದ್ರಶೇಖರ, ಎಸ್‌.ಜಿ.ಉಳುವಯ್ಯ, ಇತರೆ ಮುಖಂಡರು, ಸಾರ್ವಜನಿಕರು, ಶರಣ ಸಾಹಿತ್ಯಾಸಕ್ತರು ಹಾಜರಿದ್ದರು.