ಸಾರಾಂಶ
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಮಾತನಾಡಿ, ಎತ್ತಿನ ಹೊಳೆ ಯೋಜನೆಗೆ ಜಮೀನು, ಮನೆ ಕಳೆದುಕೊಳ್ಳುವ ರೈತರಿಗೆ ಗರಿಷ್ಠ ಪರಿಹಾರವನ್ನು ಒಂದು ತಿಂಗಳೊಳಗಾಗಿ ನೀಡಬೇಕು ಹಾಗೂ ಭೂಮಿ ಕಳೆದುಕೊಳ್ಳುವ ರೈತರಿಗೆ ಕನಿಷ್ಠ ಎರಡು ಎಕರೆ ಭೂಮಿಯನ್ನು ಲಭ್ಯವಿರುವ ಕಡೆ ನೀಡಬೇಕು. ಈ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ವಹಿಸಲಿದೆ.
ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರ
ತಾಲೂಕಿನ ಚಿಗರೇನಹಳ್ಳಿಯ ಎಂಎಸ್ಜಿಪಿ ಸೇರಿದಂತೆ ಈ ಭಾಗದ ಪ್ರಮುಖ ಸಮಸ್ಯೆಯಾದ ಕಸ ವಿಲೇವಾರಿಗೆ ಪರಿಹಾರ ಕಂಡುಕೊಳ್ಳಲಾಗುವುದು. ಕಸ ವೈಜ್ಞಾನಿಕ ವಿಲೇವಾರಿಗೆ ಆದ್ಯತೆ ನೀಡಿ, ಒಂದು ದಿನದ ಕಸವನ್ನು ಮೂರು ದಿನದಲ್ಲಿ ಸುಡಲಾಗುವುದು. ಅದರಿಂದ ಗ್ಯಾಸ್, ಕರೆಂಟ್ ಉತ್ಪಾದನೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.ವಿದೇಶಗಳಲ್ಲಿ ಈ ತಂತ್ರಜ್ಞಾನವನ್ನು ಯಶಸ್ವಿಯಾಗಿ ಬಳಕೆ ಮಾಡಿಕೊಳ್ಳುತ್ತಿರುವುದನ್ನು ಪರಿಶೀಲಿಸಲಾಗಿದೆ. ಈಗಾಗಲೇ ಕಸ ಸುಡುವ ಮೂಲಕ ಪರಿಸರ ಮಾಲಿನ್ಯ ಆಗದಂತೆ ಕಸ ವಿಲೇವಾರಿ ತಂತ್ರಜ್ಞಾನಗಳನ್ನು ಕೆಲ ನಗರಗಳಲ್ಲಿ ಪಾಲನೆ ಮಾಡಲಾಗುತ್ತಿದ್ದು, ಅದೇ ಮಾದರಿಯನ್ನು ಅನುಷ್ಠಾನಕ್ಕೆ ತರುವ ಚಿಂತನೆ ಇದೆ ಎಂದರು.
ಕಸ ವಿಲೇವಾರಿ ಸಮಸ್ಯೆಗೆ ಸಂಬಂಧಿಸಿದಂತೆ ಶೀಘ್ರ ಈ ಭಾಗಕ್ಕೆ ಮತ್ತೊಮ್ಮೆ ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆಯಲಾಗುವುದು. ವಸ್ತುಸ್ಥಿತಿ ಅರಿತು, ಸ್ಥಳೀಯರ ಆದ್ಯತೆಗಳನ್ನೂ ಗಮನದಲ್ಲಿಟ್ಟುಕೊಂಡು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ಶಾಸಕ ಧೀರಜ್ ಮುನಿರಾಜು ಮಾತನಾಡಿ, ಜಲಾಶಯ ನಿರ್ಮಾಣದಿಂದ ಗ್ರಾಮಗಳು ಮುಳುಗಡೆ ಆಗದಂತೆ ಸಹಕರಿಸಿ, ಬಾಧಿತರಾಗುವ ರೈತರ ನೆರವಿಗೆ ಸರ್ಕಾರ ನಿಲ್ಲಬೇಕು. ದೊಡ್ಡಬಳ್ಳಾಪುರ ತಾಲೂಕಿಗೆ ಬಿಬಿಎಂಪಿ ಕಸದ ಸಮಸ್ಯೆಯಿಂದ ಮುಕ್ತಿ ದೊರಕಿಸಿ ಕೊಡಬೇಕು ಎಂದು ಮನವಿ ಮಾಡಿದರು.