ಕುಡಿಯುವ ನೀರು ಪೂರೈಕೆ ಸಮಸ್ಯೆ ಆಗದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.

| Published : Apr 23 2024, 12:51 AM IST

ಕುಡಿಯುವ ನೀರು ಪೂರೈಕೆ ಸಮಸ್ಯೆ ಆಗದಂತೆ ಎಚ್ಚರ ವಹಿಸಿ: ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್.
Share this Article
  • FB
  • TW
  • Linkdin
  • Email

ಸಾರಾಂಶ

ಗ್ರಾಮೀಣ ಮತ್ತು ಪಟ್ಟಣ ಪ್ರದೇಶ ಸೇರಿದಂತೆ ಯಾವ ಕಡೆಯೂ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗದಂತೆ ಎಚ್ಚರ ವಹಿಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಗದಗ

ಮುಂಗಾರು ಆರಂಭ ಆಗುವ ವರೆಗೆ ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದ್ದಾರೆ.

ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಬರ ನಿರ್ವಹಣೆ ಹಾಗೂ ಮುಂಗಾರು ಪೂರ್ವ ಹಂಗಾಮಿನಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸೋಮವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮೀಣ ಮತ್ತು ಪಟ್ಟಣ ಪ್ರದೇಶ ಸೇರಿದಂತೆ ಯಾವ ಕಡೆಯೂ ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗದಂತೆ ಎಚ್ಚರ ವಹಿಸಬೇಕು. ಗದಗ, ರೋಣ, ಗಜೇಂದ್ರಗಡ, ಮುಂಡರಗಿ, ಶಿರಹಟ್ಟಿ, ನರಗುಂದ, ಲಕ್ಷ್ಮೇಶ್ವರ ತಾಲೂಕು ಕೇಂದ್ರಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು.

ಜಾನುವಾರುಗಳಿಗೆ ಮೇವನ್ನು ಸರಿಯಾಗಿ ಪೂರೈಸಬೇಕು. ಮೇವು ಕೊರತೆಯಾಗದಂತೆ ದಾಸ್ತಾನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ . ನಿರ್ದೇಶನ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಪಂಚಾಯತ್ ಇಒಗಳು ಹಾಗೂ ಸಂಬಂಧಪಟ್ಟ ಎಂಜಿನಿಯರ್ ಗಳು ಮಾಹಿತಿ ನೀಡಿ ಮೇ 15ರ ವರೆಗೆ ಕುಡಿಯುವ ನೀರು ಪೂರೈಕೆಯಲ್ಲಿ ಯಾವುದೇ ರೀತಿ ಸಮಸ್ಯೆ ಉಂಟಾಗದಂತೆ ಗಮನ ಹರಿಸಲಾಗುವುದು ಎಂದರು.

ಜಿಪಂ ಸಿಇಒ ಎಸ್. ಭರತ್ ಮಾತನಾಡಿ, ಕುಡಿಯುವ ನೀರು ಪೂರೈಕೆ ಕಾಮಗಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು. ಯಾವುದೇ ರೀತಿ ಲೋಪ ಉಂಟಾಗದಂತೆ ಎಚ್ಚರ ವಹಿಸಬೇಕು. ಕುಡಿಯುವ ನೀರು ಪೂರೈಕೆಗೆ ಪ್ರಥಮ ಆದ್ಯತೆ ನೀಡಬೇಕು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸುರೇಖಾ, ಉಪ ವಿಭಾಗಾಧಿಕಾರಿ ವೆಂಕಟೇಶ ನಾಯ್ಕ, ಜಿಪಂ ಉಪ ಕಾರ್ಯದರ್ಶಿ ಸಿ.ಬಿ. ದೇವರಮನಿ, ತಹಸೀಲ್ದಾರ್‌ ಶ್ರೀನಿವಾಸ ಕುಲಕರ್ಣಿ, ತಾಪಂ ಇಒಗಳು, ನೋಡಲ್ ಅಧಿಕಾರಿಗಳು ಇತರರಿದ್ದರು.