ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಮೂಲಗಳ, ನೀರಿನ ಮಾದರಿ ಪರೀಕ್ಷಿಸಿ, ನೀರು ಕಲುಷಿತಗೊಳ್ಳದಂತೆ ನಿರಂತರವಾಗಿ ಪರಿಶೀಲನೆ ನಡೆಸಿ, ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು.

ಕನ್ನಡಪ್ರಭ ವಾರ್ತೆ ಕಾರವಾರ

ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಮೂಲಗಳ, ನೀರಿನ ಮಾದರಿ ಪರೀಕ್ಷಿಸಿ, ನೀರು ಕಲುಷಿತಗೊಳ್ಳದಂತೆ ನಿರಂತರವಾಗಿ ಪರಿಶೀಲನೆ ನಡೆಸಿ, ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಸೂಚನೆ ನೀಡಿದರು.

ಮಂಗಳವಾರ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಗ್ರಾಮೀಣ ಜನವಸತಿ ಪ್ರದೇಶಗಳ ಕುಡಿಯುವ ನೀರು ಸರಬರಾಜು ವ್ಯವಸ್ಥೆಯಡಿ ಕ್ಲೋರಿನೇಶನ್ ಮಾಡಿರುವ ಬಗ್ಗೆ ಮತ್ತು ಪೈಪ್ ಲೈನ್‌ಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಿರುವ ಬಗ್ಗೆ ನಿರಂತರವಾಗಿ ಪರಿಶೀಲಿಸಬೇಕು, ನೀರಿನ ಮಾದರಿಗಳನ್ನು ಪಡೆದು ಪ್ರಯೋಗಾಲಯಗಳಲ್ಲಿ ಪರೀಕ್ಷೆಗೆ ಒಳಪಡಿಸಿ, ನೀರು ಗುಣಮಟ್ಟದಿಂದ ಕೂಡಿದ್ದು, ಕುಡಿಯಲು ಯೋಗ್ಯವಿರುವ ಇರುವ ಬಗ್ಗೆ ಖಚಿತಪಡಿಸಿಕೊಂಡು ಸಾರ್ವಜನಿಕರಿಗೆ ಸರಬರಾಜು ಮಾಡುವಂತೆ ನಿರ್ದೇಶನ ನೀಡಿದರು.

ಕುಡಿಯುವ ನೀರಿನ ಮೂಲಗಳು ಕಲುಷಿತವಾಗಿರುವುದು ಕಂಡು ಬಂದಲ್ಲಿ ತಕ್ಷಣವೇ ಅಗತ್ಯ ಕ್ರಮ ಕೈಗೊಂಡು, ಸಾರ್ವಜನಿಕರಿಗೆ ಯಾವುದೇ ಹಾನಿಯಾಗದಂತೆ ಎಚ್ಚರ ವಹಿಸಬೇಕು. ಕಲುಷಿತ ನೀರಿನ ಮೂಲವನ್ನು ಶುದ್ದಗೊಳಿಸಲು ಸಾಧ್ಯವಿಲ್ಲದಿದ್ದಲ್ಲಿ ಪರ್ಯಾಯ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಮತ್ತು ಈ ಸಂದರ್ಭ ಪ್ರಮಾಣೀಕೃತ ಕಾರ್ಯವಿಧಾನಗಳನ್ನು (ಎಸ್.ಓ.ಪಿ) ಅಳವಡಿಸಿಕೊಂಡು ಕಾರ್ಯನಿರ್ವಹಿಸುವಂತೆ ತಿಳಿಸಿದರು.

ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪಂಗಡದ ಜನತೆ ವಾಸಿಸುವ ಪ್ರದೇಶದಲ್ಲಿ ಹಮ್ಮಿಕೊಂಡ ಕುಡಿಯುವ ನೀರಿನ ಕಾಮಗಾರಿಗಳ ಪ್ರಸ್ತಾವನೆಯನ್ನು 2 ವಾರದೊಳಗೆ ಸಲ್ಲಿಸುವಂತೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಿಡಲಾದ ಅನುದಾನವನ್ನು ನಿಗದಿತ ಅವಧಿಯೊಳಗೆ ಬಳಸಬೇಕಾಗಿರುವುದರಿಂದ ತಾಲೂಕುವಾರು ಹಂಚಿಕೆಯಾದ ಕಾಮಗಾರಿಗಳಲ್ಲಿ ಏನಾದರೂ ಬದಲಾವಣೆಗಳಿದ್ದಲ್ಲಿ ಸ್ಥಳೀಯ ಶಾಸಕರ ಗಮನಕ್ಕೆ ತಂದು ಪ್ರಸ್ತಾವನೆ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಳ ಅವಧಿ ವಿಸ್ತರಣೆಯ 20 ಪ್ರಸ್ತಾವನೆಗಳ ಪೈಕಿ 3 ಕಾಮಗಾರಿಗಳ ಅವಧಿ ವಿಸ್ತರಣೆಗೆ ಈ ಸಮಿತಿಯಲ್ಲಿ ಅನುಮೋದನೆ ನೀಡಲು ಅವಕಾಶವಿದ್ದು, ಉಳಿದ ಕಾಮಗಾರಿಗಳು 2 ವರ್ಷ ಮೇಲ್ಪಟ್ಟು ವಿಳಂಬವಾಗಿರುವುದರಿಂದ ಸರ್ಕಾರದಿಂದ ಅನುಮೋದನೆಯಾಗಬೇಕಾಗಿದೆ ಅಂತಹ ಕಾಮಗಾರಿಗಳ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಧಾರವಾಡ ವಿಭಾಗದ ಮುಖ್ಯ ಎಂಜಿನಿಯರ್, ಜಿಪಂ ಉಪ ಕಾರ್ಯದರ್ಶಿ ಅಲ್ಲಾಭಕ್ಷ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ಎಚ್. ಸತ್ಯಪ್ಪ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.