ಡೆಂಘೀಯಿಂದ ಸಾವು ಸಂಭವಿಸದಂತೆ ಎಚ್ಚರಿಕೆ ವಹಿಸಿ: ಸಚಿವ ದಿನೇಶ ಗುಂಡೂರಾವ್‌

| Published : Jun 30 2024, 12:57 AM IST / Updated: Jun 30 2024, 11:04 AM IST

ಡೆಂಘೀಯಿಂದ ಸಾವು ಸಂಭವಿಸದಂತೆ ಎಚ್ಚರಿಕೆ ವಹಿಸಿ: ಸಚಿವ ದಿನೇಶ ಗುಂಡೂರಾವ್‌
Share this Article
  • FB
  • TW
  • Linkdin
  • Email

ಸಾರಾಂಶ

ಡೆಂಘೀ ಹಾಗೂ ಚಿಕೂನ್‌ ಗುನ್ಯಾ ನಿಯಂತ್ರಣ ಪೋಸ್ಟರ್‌ ಬಿಡುಗಡೆ ಹಾಗೂ ಈಡೀಸ್ ಲಾರ್ವಾ ನಿರ್ಮೂಲನಾ ದಿನ ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್‌ ಉದ್ಘಾಟಿಸಿದರು.

  ಬಾಗಲಕೋಟೆ :  ರಾಜ್ಯದಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅದರ ತಡೆಗೆ ಸೂಕ್ತ ಕ್ರಮವಹಿಸಿ ಡೆಂಘೀ ಜ್ವರದಿಂದ ಸಾವು ಸಂಭವಿಸದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ಸೂಚಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಂಡ ಡೆಂಘೀ ಹಾಗೂ ಚಿಕೂನ್‌ ಗುನ್ಯಾ ನಿಯಂತ್ರಣ ಪೋಸ್ಟರ್‌ ಬಿಡುಗಡೆ ಹಾಗೂ ಈಡೀಸ್ ಲಾರ್ವಾ ನಿರ್ಮೂಲನೆ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಬೆಂಗಳೂರು ನಗರದಲ್ಲಿ ಡೆಂಘೀ ಪ್ರಕರಣ ಕಂಡುಬಂದಿದ್ದು, ಮುಖ್ಯಮಂತ್ರಿಗಳು ಸಭೆ ಕರೆದು ನಿಯಂತ್ರಣಕ್ಕೆ ಕ್ರಮವಹಿಸಲು ಸೂಚಿಸಿದ್ದಾರೆ. ಡೆಂಘೀ ನಿಯಂತ್ರಣಕ್ಕೆ ಇಲಾಖೆಯಿಂದ ಹಲವಾರು ಕಾರ್ಯಕ್ರಮ ಹಾಕಿಕೊಳ್ಳಲಾಗಿದೆ. ಅಭಿಯಾನ ರೂಪದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಪ್ರತಿ ಶುಕ್ರವಾರ ಆಶಾ ಕಾರ್ಯಕರ್ತೆಯರು ಸೇರಿದಂತೆ ಇಲಾಖೆಯ ಎಲ್ಲ ಅಧಿಕಾರಿಗಳು, ಸಿಬ್ಬಂದಿ ಸೇರಿ ಮನೆ ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸಬೇಕು. ಅಲ್ಲದೆ, ಜನರಿಗೆ ರೋಗದ ಮುನ್ಸೂಚನೆ ಹಾಗೂ ಲಕ್ಷಣ, ಕೈಗೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಕುರಿತು, ಶುದ್ಧ ನೀರಿನಲ್ಲಿ ಉತ್ಪತ್ತಿಯಾಗುವ ಲಾರ್ವಾ ನಾಶಪಡಿಸುವ ಬಗ್ಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಶೇಖರಣೆಗೊಂಡ ನೀರು ಉಪಯೋಗವಾಗುತ್ತಿರಬೇಕು. ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ ಲಾರ್ವಾ ಉತ್ಪತ್ತಿಯಾಗುವ ಸಾಧ್ಯತೆ ಹೆಚ್ಚು. ನೀರು ಸಂಗ್ರಹ ತೊಟ್ಟಿಗಳ ಮೇಲೆ ಮುಚ್ಚುವ ವ್ಯವಸ್ಥೆ ಆಗಬೇಕು. ಈ ಕಾರ್ಯದಲ್ಲಿ ಗ್ರಾಮ ಪಂಚಾಯತಿ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಕೈ ಜೋಡಿಸಬೇಕು. ಇದೇ ವೇಳೆ ಲಾರ್ವಾ ಮೊಟ್ಟೆಗಳನ್ನು ತಿನ್ನುವ ಮೀನುಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.

ಶಾಸಕ ಎಚ್.ವೈ.ಮೇಟಿ, ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ, ಆಯುಕ್ತ ರಣದೀಪ, ಎಂ.ಡಿ.ಎನ್.ಎಚ್.ಎಂ ನವೀನ ಭಟ್, ವಿವಿಧ ವಿಭಾಗದ ನಿರ್ದೇಶಕರಾದ ಡಾ.ಶರೀಫ್‌, ಅನಂತ ದೇಸಾಯಿ, ಶ್ರೀನಿವಾಸ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಜಿಲ್ಲಾ ರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಯಶ್ರೀ ಎಮ್ಮಿ ಇತರರು ಉಪಸ್ಥಿತರಿದ್ದರು.