ಜಿಲ್ಲೆಯಲ್ಲಿ ಐದು ವರ್ಷದೊಳಗಿನ 1.08 ಲಕ್ಷ ಮಕ್ಕಳಿದ್ದು, ಎಲ್ಲ ಮಕ್ಕಳಿಗೂ ಇಂದು ಪೋಲಿಯೋ ಹನಿ ಹಾಕಲು ಮೂರು ದಿನಗಳ ಕಾರ್ಯಕ್ರಮ ಆಯೋಜಿಸಲಾಗಿದೆ. 2014ರಲ್ಲೇ ಭಾರತ ಪೋಲಿಯೋ ಮುಕ್ತವಾಗಿದೆ ಎಂದು ವಿಶ್ವಸಂಸ್ಥೆ ಪ್ರಮಾಣ ಪತ್ರ ನೀಡಿದ್ದರೂ ಸಹ ನೆರೆಹೊರೆ ರಾಷ್ಟ್ರಗಳಲ್ಲಿ ಪೋಲಿಯೋ ಪ್ರಕರಣಗಳು ಕಂಡು ಬರುತ್ತಿವೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪೋಷಕರು ತಪ್ಪದೆ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಮಕ್ಕಳಿಗೆ ಪೋಲಿಯೋ ಬರದಂತೆ ಎಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ.ಕುಮಾರ್ ತಿಳಿಸಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಭಾನುವಾರ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಐದು ವರ್ಷದೊಳಗಿನ 1.08 ಲಕ್ಷ ಮಕ್ಕಳಿದ್ದು, ಎಲ್ಲ ಮಕ್ಕಳಿಗೂ ಇಂದು ಪೋಲಿಯೋ ಹನಿ ಹಾಕಲು ಮೂರು ದಿನಗಳ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

2014ರಲ್ಲೇ ಭಾರತ ಪೋಲಿಯೋ ಮುಕ್ತವಾಗಿದೆ ಎಂದು ವಿಶ್ವಸಂಸ್ಥೆ ಪ್ರಮಾಣ ಪತ್ರ ನೀಡಿದ್ದರೂ ಸಹ ನೆರೆಹೊರೆ ರಾಷ್ಟ್ರಗಳಲ್ಲಿ ಪೋಲಿಯೋ ಪ್ರಕರಣಗಳು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಲಸಿಕೆ ಹಾಕಲಾಗುತ್ತಿದೆ ಎಂದರು.

ತಾಲೂಕಿನಲ್ಲಿ 5 ವರ್ಷದೊಳಗಿನ 17800 ಮಕ್ಕಳನ್ನು ಗುರುತಿಸಿ 112 ಪೋಲಿಯೋ ಕೇಂದ್ರ ತೆರೆಯಲಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಪಿ.ವೀರಭದ್ರಪ್ಪ ತಿಳಿಸಿದರು.

ಆಸ್ಪತ್ರೆ ಆಡಳಿತಾಧಿಕಾರಿ ಡಾ.ಎಂ.ಡಿ.ಸಂಜಯ್, ಡಾ.ನವೀನ್ ಚಂದ್, ಡಾ.ಶಿವಸ್ವಾಮಿ ಹಾಗೂ ಆಸ್ಪತ್ರೆ ಸಿಬ್ಬಂದಿ ಪಾಲ್ಗೊಂಡಿದ್ದರು.

ಸಮಾಜಕ್ಕೆ ಆರೋಗ್ಯವಂತ ಪ್ರಜೆ ನೀಡಲು ಮಕ್ಕಳಿಗೆ ಲಸಿಕೆ ಹಾಕಿಸಿ: ಎಚ್.ಟಿ.ಮಂಜು

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ತಾಲೂಕಿನ ಎಲ್ಲಾ ಜನರು 5 ವರ್ಷದೊಳಗಿನ ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸುವ ಮೂಲಕ ಸಮಾಜಕ್ಕೆ ಆರೋಗ್ಯವಂತ ಪ್ರಜೆಗಳನ್ನು ನೀಡುವಂತೆ ಶಾಸಕ ಎಚ್.ಟಿ.ಮಂಜು ಕರೆ ನೀಡಿದರು.

ಪಟ್ಟಣದ ಶ್ರೀಮತಿ ದುಂಡುಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಆರೋಗ್ಯ ಇಲಾಖೆಯಿಂದ ಆಯೋಜಿಸಿದ್ದ ಪಲ್ಸ್ ಪೋಲಿಯೋ ಲಸಿಕಾ ಆಂದೋಲನಕ್ಕೆ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿದರು.

ಪೋಲಿಯೋ ಮಾರಕ ಕಾಯಿಲೆಯಿಂದ ನಮ್ಮ ಮಕ್ಕಳನ್ನು ರಕ್ಷಿಸಿಕೊಳ್ಳಲು ದೇಶಾದ್ಯಂತ ಲಸಿಕೆ ಕಾರ್ಯಕ್ರಮ ನಡೆಯುತ್ತಿದೆ. ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು. ಹೀಗಾಗಿ ಪೋಷಕರು ಇಂದಿನಿಂದ ಗ್ರಾಮೀಣ ಪ್ರದೇಶದಲ್ಲಿ ಮೂರು ದಿನಗಳ ಕಾಲ ಮತ್ತು ಕೆ.ಆರ್.ಪೇಟೆ ಪಟ್ಟಣದಲ್ಲಿ ನಾಲ್ಕು ದಿನಗಳ ಕಾಲ ನಡೆಯಲಿರುವ ಪೋಲಿಯೋ ಹನಿ ಹಾಕುವ ಸ್ಥಳಕ್ಕೆ ತಮ್ಮ ಐದು ವರ್ಷದ ಮಕ್ಕಳನ್ನು ಕರೆತಂದು ಲಸಿಕೆ ಹಾಕಿಸಬೇಕು. ಈ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು ಎಂದು ಮನವಿ ಮಾಡಿದರು.

ಈ ವೇಳೆ ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ.ಅಜಿತ್, ತಾಲೂಕು ಆಸ್ಪತ್ರೆ ಆಡಳಿತ ವೈದ್ಯೆ ಡಾ.ಮಂಜುಳಾ, ಆರೋಗ್ಯಾಧಿಕಾರಿ ಶೀಳನೆರೆ ಸತೀಶ್, ಔಷಧ ವಿಭಾಗದ ಅಧಿಕಾರಿಗಳಾದ ಸತೀಶ್ ಬಾಬು, ಅಬ್ದುಲ್ ಗಫಾರ್ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ವೈದ್ಯರು ಉಪಸ್ಥಿತರಿದ್ದರು.