ಸಾರಾಂಶ
ಕನ್ನಡಪ್ರಭ ವಾರ್ತೆ ಹುಕ್ಕೇರಿ
ಸಂಭವನೀಯ ಪ್ರಾಕೃತಿಕ ವಿಕೋಪ ನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸುವವರ ವಿರುದ್ಧ ನಿರ್ಧಾಕ್ಷೀಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ(ಅಭಿವೃದ್ಧಿ), ನೊಡೆಲ್ ಅಧಿಕಾರಿ ಬಸವರಾಜ ಅಡವಿಮಠ ಎಚ್ಚಕೆ ನೀಡಿದರು.ಇಲ್ಲಿನ ತಾಲೂಕು ಪಂಚಾಯತಿ ಸಭಾಭವನದಲ್ಲಿ ಬುಧವಾರ ನಡೆದ ತಾಲೂಕು ಮಟ್ಟದ ವಿಪತ್ತು ನಿರ್ವಹಣಾ ಸಭೆಯಲ್ಲಿ ಮಾತನಾಡಿದ ಅವರು, ವಿಕೋಪ ಸಂದರ್ಭದಲ್ಲಿ ಜನ-ಜಾನುವಾರುಗಳ ಪ್ರಾಣ ಹಾನಿ ಸೇರಿದಂತೆ ಯಾವುದೇ ಅನಾಹುತ ಸಂಭವಿಸದಂತೆ ಮುಂಜಾಗೃತೆ ವಹಿಸಬೇಕು ಎಂದು ಸೂಚಿಸಿದರು.ನಾಲಾ, ಚರಂಡಿ ಮತ್ತು ರಾಜಕಾಲುವೆಗಳನ್ನು ಸ್ವಚ್ಛಗೊಳಿಸಿ ಮಳೆ ನೀರು ಸರಾಗವಾಗಿ ಸಾಗುವಂತೆ ನೋಡಿಕೊಳ್ಳಬೇಕು. ಕಡ್ಡಾಯವಾಗಿ ಕುಡಿಯುವ ನೀರು ಪರೀಕ್ಷಿಸಬೇಕು. ದುರ್ಬಲ ಮರಗಳನ್ನು ತೆರವುಗೊಳಿಸಬೇಕು. ಕಾಳಜಿ ಕೇಂದ್ರ ಮತ್ತು ಮೇವು ಬ್ಯಾಂಕ್ ತೆರೆಯಲು ಅಗತ್ಯ ಯೋಜನೆ ರೂಪಿಸಬೇಕು. ಪ್ರವಾಹಪೀಡಿತ ಹಳ್ಳಿಗಳಲ್ಲಿ ಜನರಿಗೆ ತೊಂದರೆಯಾಗದಂತೆ ಎಲ್ಲ ರೀತಿಯ ಕ್ರಮ ವಹಿಸಬೇಕು ಎಂದು ಆದೇಶಿಸಿದರು.ಗ್ರಾಮ ಪಂಚಾಯತಿ ಮಟ್ಟದಲ್ಲಿ ಟಾಸ್ಕ್ಪೋರ್ಸ್ ಸಮಿತಿ ರಚಿಸಬೇಕು. ಸಮರ್ಪಕ ವಿದ್ಯುತ್ ಪೂರೈಸಲು ಕ್ರಮ ವಹಿಸಬೇಕು. ಆಯ್ದ ಹಳ್ಳಿಗಳಲ್ಲಿ ಆರೋಗ್ಯ ಶಿಬಿರಗಳನ್ನು ಆಯೋಜಿಸಬೇಕು. ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು. ಶಿಥಿಲ ಅಂಗನವಾಡಿ, ಶಾಲಾ ಕಟ್ಟಡಗಳನ್ನು ಉಪಯೋಗಿಸಬಾರದು ಎಂದು ತಿಳಿಸಿದರು.ತಹಸೀಲ್ದಾರ್ ಬಲರಾಮ ಕಟ್ಟೀಮನಿ, ತಾಪಂ ಇಒ ಟಿ.ಆರ್.ಮಲ್ಲಾಡದ, ವ್ಯವಸ್ಥಾಪಕ ಅವಿನಾಶ ಹೊಳೆಪ್ಪಗೋಳ ಮತ್ತಿತರರು ಉಪಸ್ಥಿತರಿದ್ದರು.