ರಾಜ್ಯ ಮಟ್ಟದ ಕಂದಾಯ ಇಲಾಖೆಯ ಹಕ್ಕುಪತ್ರ ವಿತರಣಾ ಕಾರ್ಯಕ್ರಮ ಫೆ. 13ರಂದು ಹಾವೇರಿಯಲ್ಲಿ ಜರುಗಲಿದ್ದು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಸಚಿವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳು ಆಗದಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಲು ಎಲ್ಲ ಅಧಿಕಾರಿಗಳು ಇಂದಿನಿಂದಲೇ ಕಾರ್ಯಪ್ರವೃತ್ತರಾಗಬೇಕು.

ಹಾವೇರಿ: ರಾಜ್ಯ ಮಟ್ಟದ ಕಂದಾಯ ಇಲಾಖೆಯ ಹಕ್ಕುಪತ್ರ ವಿತರಣಾ ಕಾರ್ಯಕ್ರಮ ಫೆ. 13ರಂದು ಹಾವೇರಿಯಲ್ಲಿ ಜರುಗಲಿದ್ದು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಸಚಿವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳು ಆಗದಂತೆ ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಲು ಎಲ್ಲ ಅಧಿಕಾರಿಗಳು ಇಂದಿನಿಂದಲೇ ಕಾರ್ಯಪ್ರವೃತ್ತರಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚಿಸಿದರು.ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಗರದಲ್ಲಿ ಜರುಗಲಿರುವ ರಾಜ್ಯ ಮಟ್ಟದ ಕಂದಾಯ ಇಲಾಖೆಯ ಹಕ್ಕುಪತ್ರ ವಿತರಣಾ ಕಾರ್ಯಕ್ರಮ ಆಯೋಜನೆ ಕುರಿತು ವಿವಿಧ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಒಂದು ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರವಿತರಣೆ ಮಾಡಲಾಗುತ್ತಿದ್ದು, 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಯಶಸ್ವಿಗೆ ಶ್ರಮಿಸಿದಂತೆ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿಗಳು ಯಾವುದೇ ಗೊಂದಲಗಳಿಗೆ ಒಳಗಾಗದೇ ಸಮನ್ವಯದಿಂದ ಕಾರ್ಯನಿರ್ವಹಿಸಲು ಮಾನಸಿಕವಾಗಿ ಸಿದ್ಧರಾಗಬೇಕು ಎಂದು ಸಲಹೆ ನೀಡಿದರು.ಕಾರ್ಯಕ್ರಮದಲ್ಲಿ ಜಿಲ್ಲೆಯ ಕಂದಾಯ ಗ್ರಾಮಗಳ-20,186, ಇ-ಪೋತಿ-7,825, ದರಖಾಸ್ತ್ ಪೋಡಿ- 502, ಪಿಎಂ.ಜಿ.ಎ- 1,675 ಹಾಗೂ ಬಗರಹುಕುಂ 16 ಸೇರಿದಂತೆ 30,204 ಹಕ್ಕುಪತ್ರಗಳನ್ನು ನೀಡಲಾಗುತ್ತಿದೆ. ಜಿಲ್ಲೆಯ ಫಲಾನುಭವಿಗಳು ಹಾಗೂ ಅವರ ಸಂಗಡಿಗರು ಸೇರಿ 60 ಸಾವಿರ ಜನರು ಭಾಗವಹಿಸುವ ಸಾಧ್ಯತೆ ಇದೆ. ಜಿಲ್ಲೆ ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ ಅಂದಾಜು 1.20 ಲಕ್ಷ ಫಲಾನುಭವಿಗಳು ಆಗಮಿಸುವ ಸಂಭವವಿರುತ್ತದೆ. ದೊಡ್ಡಮಟ್ಟದ ಕಾರ್ಯಕ್ರಮವಾಗಿರುವುದರಿಂದ ಸುಗಮ ಸಂಚಾರ, ಫಲಾನುಭವಿಗಳಿಗೆ ಆಸನ, ಊಟ, ಕುಡಿಯುವ ನೀರು, ಶೌಚಾಲಯ, ಸ್ವಚ್ಛತೆ ಸೇರಿದಂತೆ ಮೂಲಭೂತ ಸೌಕರ್ಯವನ್ನು ಅತ್ಯಂತ ವ್ಯವಸ್ಥತವಾಗಿ ಮಾಡಬೇಕು ಎಂದು ಸೂಚನೆ ನೀಡಿದರು.ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿ: ವಸತಿ, ವೇದಿಕೆ ನಿರ್ಮಾಣ, ನಿರ್ವಹಣೆ, ಕುಡಿಯುವ ನೀರು, ವಾಹನ ನಿಲುಗಡೆ, ಹೆಲಿಪ್ಯಾಡ್ ವ್ಯವಸ್ಥೆ, ವಿ.ಐ.ಪಿ ವಾಹನಗಳ ಸಂಚಾರ ಹಾಗೂ ನಿಲುಗಡೆ, ಫಲಾನುಭವಿಗಳ ವಾಹನಗಳ ನಿಲುಗಡೆ, ಬಂದೋಬಸ್ತ್ ವಿದ್ಯುತ್, ತುರ್ತು ಆರೋಗ್ಯ ಚಿಕಿತ್ಸೆ ವ್ಯವಸ್ಥೆ ಸೇರಿದಂತೆ ವಿವಿಧ ಸಮಿತಿಗಳಿಗೆ ನಿಯೋಜಿಸಲಾದ ಅಧಿಕಾರಿಗಳು ಅತ್ಯಂತ ಜವಾಬ್ದಾರಿಯಿಂದ ಕೆಲಸಮಾಡಬೇಕು ಎಂದು ಸೂಚಿಸಿದರು.ವಸತಿ ವ್ಯವಸ್ಥೆ..ಕಾರ್ಯಕ್ರಮ ವ್ಯವಸ್ಥೆಗೆ ಆಗಮಿಸುವ ಹಿರಿಯ ಅಧಿಕಾರಿಗಳು, ಪೊಲೀಸ್ ಇಲಾಖೆ ಸಿಬ್ಬಂದಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಹಾವೇರಿ ನಗರದ ಖಾಸಗಿ ಹೋಟೆಲ್, ವಿವಿಧ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ವಸತಿ ಕಲ್ಪಿಸಬೇಕು ಎಂದು ವಸತಿ ಸಮಿತಿಗೆ ಸೂಚಿಸಿದರು.ಪ್ರವಾಸಿ ಮಂದಿರ ಕಾಯ್ದಿರಿಸಿ..ಕಾರ್ಯಕ್ರಮಕ್ಕೆ ಆಗಮಿಸುವ ಸಚಿವರು ಹಾಗೂ ಗಣ್ಯ ವ್ಯಕ್ತಿಗಳ ವಿಶ್ರಾಂತಿ ಪಡೆದುಕೊಳ್ಳಲು ರಾಣಿಬೆನ್ನೂರು, ಹಾವೇರಿ ಹಾಗೂ ಶಿಗ್ಗಾಂವಿ ಪ್ರವಾಸಿ ಮಂದಿರಗಳನ್ನು ಕಾಯ್ದಿರಿಸಬೇಕು ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ವೇದಿಕೆಯ ಪಕ್ಕದಲ್ಲಿ ಅಗ್ನಿಶಾಮಕ ವಾಹನ, ಅಂಬ್ಯುಲೆನ್ಸ್ ವ್ಯವಸ್ಥೆ ಸೇರಿದಂತೆ ತುರ್ತು ಪರಿಸ್ಥಿತಿ ನಿರ್ವಹಣೆಗೆ ಅಗತ್ಯ ಮುಂಜಾಗ್ರತೆ ವ್ಯವಸ್ಥೆ ಮಾಡಿಕೊಳ್ಳಬೇಕು. ಸಾರಿಗೆ, ವಸತಿ, ವಾಹನ ನಿಲುಗಡೆ, ಊಟದ ವ್ಯವಸ್ಥೆಗೆ ಆಯಾ ಸಮಿತಿಗಳನ್ನು ಸಂಪರ್ಕಿಸಬೇಕು. ಕಳೆದ ವರ್ಷ ಹೊಸಪೇಟೆಯಲ್ಲಿ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ತಮಗೇನಾದರೂ ಸಂದೇಹಗಳಿದ್ದಲ್ಲಿ ಆಯಾ ಇಲಾಖೆಯ ಹೊಸಪೇಟೆಯ ಅಧಿಕಾರಿಗಳನ್ನು ಹಾಗೂ ನೋಡಲ್ ಅಧಿಕಾರಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಸಲಹೆ ನೀಡಿದರು. ಫಲಾನುಭವಿಗಳಿಗೆ, ಗಣ್ಯ ವ್ಯಕ್ತಿಗಳಿಗೆ, ಮಾಧ್ಯಮದವರಿಗೆ ಪ್ರತ್ಯೇಕ ಆಸನ ವ್ಯವಸ್ಥೆ, ಕಾರ್ಯಕ್ರಮಕ್ಕೆ ಆಗಮಿಸುವ ಅಧಿಕಾರಿಗಳಿಗೆ, ವಾಹನಗಳಿಗೆ, ಮಾಧ್ಯಮದವರಿಗೆ, ವಿಐಪಿಗಳಿಗೆ ಪ್ರತ್ಯೇಕ ಪಾಸ್ ವ್ಯವಸ್ಥೆ ಮಾಡುವ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಎಸ್ಪಿ ಯೋಶಧಾ ವಂಟಗೋಡಿ, ಎಡಿಸಿ ಡಾ.ನಾಗರಾಜ ಎಲ್, ಜಿ.ಪಂ.ಉಪ ಕಾರ್ಯದರ್ಶಿ ಡಾ.ಪುನಿತ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಪೂಜಾರ ವೀರಮಲ್ಲಪ್ಪ, ಉಪ ವಿಭಾಗಾಧಿಕಾರಿಗಳಾದ ಶುಭಂ ಶುಕ್ಲಾ, ಕಲ್ಯಾಣಿ ಕಾಂಬ್ಳೆ, ಜಂಟಿ ಕೃಷಿ ನಿರ್ದೇಶಕ ಡಾ.ಮಲ್ಲಿಕಾರ್ಜುನ, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಸಿದ್ದರಾಮಯ್ಯ ಬರಗಿಮಠ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಪ್ರಶಾಂತ ವರಗಪ್ಪನವರ, ತಹಸೀಲ್ದಾರ್ ಶರಣಮ್ಮ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.