ಸಾರಾಂಶ
ಕನ್ನಡಪ್ರಭ ವಾರ್ತೆ ದೇವರಹಿಪ್ಪರಗಿ
ಸಮ ಬಾಳು ಮತ್ತು ಸಮಪಾಲು ಆಶಯ ಈಡೇರಬೇಕಾದರೆ ಅಂಬೇಡ್ಕರ್ ಹಾಕಿಕೊಟ್ಟ ಹಾದಿಯಲ್ಲಿ ನಡೆಯಬೇಕು. ನಮ್ಮ ಜವಾಬ್ದಾರಿಗಳನ್ನು ನಿರ್ವಹಿಸುವ ಮೂಲಕ ಶೋಷಿತ ಹಾಗೂ ಹಿಂದುಳಿದ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸಬೇಕು. ಆ ಮೂಲಕ, ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಶಾಸಕ ರಾಜುಗೌಡ ಪಾಟೀಲ ಕುದುರಿಸಾಲವಾಡಗಿ ಹೇಳಿದರು.ತಾಲೂಕಿನ ಯಲಗೋಡ ಗ್ರಾಮದಲ್ಲಿ ನಡೆದ ಡಾ.ಅಂಬೇಡ್ಕರ್ ಸಮುದಾಯ ಭವನದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಅಂಬೇಡ್ಕರ್ ಸಂವಿಧಾನದ ಕಾರಣದಿಂದಾಗಿ ನಾವೆಲ್ಲರೂ ಇಂದು ಈ ಸ್ಥಿತಿಯಲ್ಲಿದ್ದೇವೆ. ಇಲ್ಲದಿದ್ದರೆ, ನಮ್ಮ ಪರಿಸ್ಥಿತಿ ಊಹಿಸಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಗ್ರಾಮಮಟ್ಟದ ಭವನಗಳನ್ನು ಸ್ವಂತ ಮನೆಗಳಂತೆ ಎಲ್ಲರೂ ನೋಡಿಕೊಳ್ಳಬೇಕು ಹಾಗೂ ಕ್ಷೇತ್ರದ ವಂದಾಲ ಗ್ರಾಮದ ಪ್ರಗತಿ ಕಾಲೋನಿಯಲ್ಲಿ ಸುಮಾರು ₹50 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಹಾಗೂ ಪೀರಾಪುರ-ಅಮಲ್ಯಾಳ ಗ್ರಾಮದ ರಸ್ತೆ ಅಭಿವೃದ್ಧಿಗಾಗಿ ಸುಮಾರು ₹2 ಕೋಟಿ ವೆಚ್ಚದಲ್ಲಿ ಭೂಮಿ ಪೂಜೆ ನೆರವೇರಿಸಲಾಗಿದೆ. ಶೀಘ್ರದಲ್ಲಿ ನಿಮ್ಮೆಲ್ಲರ ಅಪೇಕ್ಷೆಯಂತೆ ದೇವರಹಿಪ್ಪರಗಿ ಪಟ್ಟಣದಲ್ಲಿ ಸುಮಾರು ₹2 ಕೋಟಿ ವೆಚ್ಚದ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗುವುದು. ಕುದುರಗುಂಡ ಯಲಗೊಡ ರಸ್ತೆ ಬರುವಂತ ದಿನಗಳಲ್ಲಿ ಪ್ರತಿ ಗ್ರಾಮ ಸೇರಿದಂತೆ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಅನುದಾನವನ್ನು ತಂದು ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದೆಂದರು.ಜೆಡಿಎಸ್ ತಾಲೂಕು ಅಧ್ಯಕ್ಷ ಸಾಯಿಬಣ್ಣ ಬಾಗೇವಾಡಿ ಹಾಗೂ ಡಿಎಸ್ಎಸ್ ಜಿಲ್ಲಾ ಸಂಚಾಲಕ ಹುಯೋಗಿ ತಳ್ಳೊಳ್ಳಿ ಮಾತನಾಡಿ, ಶಾಸಕರು ವಿರೋಧ ಪಕ್ಷದಲ್ಲಿ ಇದ್ದರೂ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತಂದು ಅಭಿವೃದ್ಧಿಪಡಿಸುತ್ತಿದ್ದಾರೆ. ಅವರ ಕಾರ್ಯ ಶ್ಲಾಘನೀಯ ಎಂದರು. ರಾಜಶೇಖರಯ್ಯ ಹಿರೇಮಠ ಸಾನ್ನಿಧ್ಯ ವಹಿಸಿದ್ದರು. ಈ ವೇಳೆ ಮುಖಂಡರಾದ ಶೇಖರಗೌಡ ಪಾಟೀಲ(ಕೋರವಾರ), ಪ್ರಭುಗೌಡ ಪಾಟೀಲ(ಡಂಬಳ), ಮಶಾಕಸಾಬ ಚೌದರಿ, ಚಂದ್ರಶೇಖರ ಅಸ್ಕಿ, ಬಸಲಿಂಗಪ್ಪ ಜಾಯಿ, ಉಮೇಶ ಇಂಗಳಗಿ, ಸೋಮಶೇಖರ ಹೊಸಮನಿ, ಸಂತೋಷ ಹಚ್ಯಾಳ, ಮಹಾಂತೇಶ ಕೊಕಟನೂರ, ಪರಶುರಾಮ ರಾಠೋಡ ಸೇರಿದಂತೆ ವಂದಾಲ ಹಾಗೂ ಯಲಗೋಡ ಗ್ರಾಮಗಳ ಪ್ರಮುಖರು, ಗ್ರಾಪಂ ಸದಸ್ಯರು ಉಪಸ್ಥಿತರಿದ್ದರು.