ಸಾರಾಂಶ
ಹಾವೇರಿ: ರಾಜ್ಯದಲ್ಲಿ ವ್ಯಾಪಾಕ ಮಳೆಯಿಂದ ಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿವೆ. ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿರುವುದರ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು, ಜಿಲ್ಲೆಯಲ್ಲಿ ಅಗತ್ಯ ಆರೋಗ್ಯ ಮುಂಜಾಗ್ರತೆ ವಹಿಸುವಂತೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಕೋವಿಡ್ ಮುಂಜಾಗ್ರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ತುರ್ತು ಆರೋಗ್ಯ ಚಟುವಟಿಕೆಗಳನ್ನು ಕೈಗೊಳ್ಳಬೇಕು. ಕೋವಿಡ್ನಂಥ ಸಾಂಕ್ರಾಮಿಕ ರೋಗಗಳ ಹತೋಟಿಗೆ ತರಲು ಅಗತ್ಯ ವೈದ್ಯಕೀಯ ವ್ಯವಸ್ಥೆಯನ್ನು ಈಗಿನಿಂದಲೇ ಮಾಡಿಕೊಳ್ಳಿ. ಕಲುಷಿತ ವಾತಾವರಣದಿಂದ ಜನರಿಗೆ ಕೆಮ್ಮು, ಜ್ವರ, ಶೀತದಂತ ಕಾಯಿಲೆಗಳು ಕೋವಿಡ್ ಪ್ರಾಥಮಿಕ ಲಕ್ಷಣಗಳಾಗಿದ್ದು, ಇವುಗಳ ನಿವಾರಣೆಗೆ ಔಷಧಿಗಳ ಸಂಗ್ರಹಣೆ ತುಂಬಾ ಅಗತ್ಯವಾಗಿದೆ. ಆಸ್ಪತ್ರೆಗೆ ಬರುವ ರೋಗಿಗಳಿಗೆ ಔಷಧಿಗಳ ಕೊರತೆಯಾಗಬಾರದು ಎಂದರು. ವೈದ್ಯರು ಯಾವುದನ್ನು ನಿರ್ಲಕ್ಷಿಸದೆ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಆಸ್ಪತ್ರೆಗಳಲ್ಲಿ ಅಗತ್ಯ ಬೆಡ್ಗಳ ವ್ಯವಸ್ಥೆ ಮಾಡಿಕೊಳ್ಳಬೇಕು. ಮಾಸ್ಕ್, ಗ್ಲೌಸ್, ವೆಂಟಿಲೇಟರ್, ಪಿಎಸ್ಎ ಪ್ಲಾಂಟ್ಸ್, ಆಕ್ಸಿಜನ್ ಟ್ಯಾಂಕ್, ಐಸೋಲೇಷನ್ ಸೆಂಟರ್ ಮೊದಲಾದವುಗಳನ್ನು ಪರಿಶೀಲಿಸಿ ತಯಾರಿ ಮಾಡಿಟ್ಟುಕೊಳ್ಳಬೇಕು. ಈಗಿನಿಂದಲೇ ಕಾರ್ಯಪ್ರವೃತ್ತರಾಗಿ ಕೆಲಸ ಮಾಡಿದರೆ ಮುಂದೆ ಆಗಬಹುದಾದ ಸಮಸ್ಯೆಗಳನ್ನು ತಪ್ಪಿಸಲು ಸಾಧ್ಯವಾಗುತ್ತದೆ ಎಂದರು. ಅಗತ್ಯ ಸಿಬ್ಬಂದಿ ನಿಯೋಜನೆ: ಜಿಲ್ಲಾ ಆಸ್ಪತ್ರೆ ಹಾಗೂ ಪ್ರತಿಯೊಂದು ತಾಲೂಕು ಆಸ್ಪತ್ರೆಯಲ್ಲಿ ಅಗತ್ಯ ಸಿಬ್ಬಂದಿಗಳನ್ನು ನಿಯೋಜನೆ ಮಾಡಿಟ್ಟುಕೊಳ್ಳಬೇಕು. ಸರ್ಕಾರ ನೀಡಿರುವ ಎಲ್ಲ ಆ್ಯಂಬುಲೆನ್ಸ್ಗಳಿಗೆ ಚಾಲಕರನ್ನು ನಿಯೋಜಿಸಬೇಕು. ಯಾವುದೇ ಆ್ಯಂಬುಲೆನ್ಸ್ಗಳು ಖಾಲಿ ನಿಂತು ಹಾಳಾಗಬಾರದು. ಅವುಗಳು ರೋಗಿಗಳ ಉಪಯೋಗಕ್ಕೆ ಬಳಕೆಯಾಗಬೇಕು. ಹಾಗೆಯೇ ಕೋವಿಡ್ನಂಥ ಸಾಂಕ್ರಾಮಿಕ ರೋಗಗಳನ್ನು ಪತ್ತೆಹಚ್ಚಲು ಆಶಾ ಕಾರ್ಯಕರ್ತೆಯರನ್ನು ಸಕ್ರಿಯವಾಗಿ ಬಳಸಿಕೊಳ್ಳಿ ಎಂದರು. ಸಾರ್ವಜನಿಕರಿಗೆ ಜಾಗೃತಿ: ಜಿಲ್ಲೆಯ ಸಾರ್ವಜನಿಕರಲ್ಲಿ ಸಾಂಕ್ರಾಮಿಕ ರೋಗಗಳ ಕುರಿತಾದ ಜಾಗೃತಿ ಅತಿ ಅವಶ್ಯಕವಾಗಿದೆ. ಆರೋಗ್ಯ ಜಾಥಾಗಳ ಮೂಲಕ ಸಾಂಕ್ರಾಮಿಕ ರೋಗಗಳ ಗಂಭೀರತೆ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕು. ಜನ ಜಾಗೃತರಾದರೆ ಮಾತ್ರ ಕೋವಿಡ್ನಂತಹ ಸಾಂಕ್ರಾಮಿಕ ರೋಗಗಳನ್ನು ಹತೋಟಿಗೆ ತರಲು ಸಾಧ್ಯವಾಗುತ್ತದೆ ಎಂದರು. ಜಿಲ್ಲಾ ಆರೋಗ್ಯಧಿಕಾರಿ ಡಾ. ರಾಜೇಶ್ ಸುರಗಿಹಳ್ಳಿ ಅವರು, ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ತಡೆಗೆ ತೆಗೆದುಕೊಂಡ ಅಗತ್ಯ ತಯಾರಿ ಕುರಿತು ಮಾಹಿತಿ ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹನಾಧಿಕಾರಿ ರುಚಿ ಬಿಂದಲ್, ಅಪರ ಜಿಲ್ಲಾಧಿಕಾರಿ ಡಾ. ಎಲ್. ನಾಗರಾಜ್, ಜಿಲ್ಲಾ ಶಸ್ತ್ರಚಿಕಿತ್ಸ ಡಾ. ಪಿ.ಆರ್. ಹಾವನೂರ, ಆರ್ಸಿಎಚ್ ಅಧಿಕಾರಿ ಡಾ. ಜಯಾನಂದ, ಡಾ. ಸರಿತಾ, ತಾಲೂಕು ವೈದ್ಯಾಧಿಕಾರಿಗಳು ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಇದ್ದರು.