ಸಾರಾಂಶ
ಅಣ್ಣಿಗೇರಿ: ಉಗ್ರಾಣದಿಂದ ನಾಪತ್ತೆಯಾದ ಸಾವಿರಾರು ಚೀಲ ಹೆಸರು ಮತ್ತು ಕಡಲೆಚೀಲಗಳನ್ನು ಪತ್ತೆ ಮಾಡಿದ್ದು, ಈ ಸಂಬಂಧ ಉಗ್ರಾಣದ ಅಧಿಕಾರಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
ಸೋಮವಾರ ಇಲ್ಲಿಯ ಉಗ್ರಾಣಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಬಳಿಕ ಪ್ರಕರಣವನ್ನು ತನಿಖೆ ನಡೆಸುವಂತೆ ಎಪಿಎಂಸಿ ಮುಂಭಾಗದಲ್ಲಿ ಮಹಿಳಾ ಮತ್ತು ಪುರುಷ ರೈತ ಸಂಘಟನೆ ಮತ್ತು ಹಸಿರು ಸೇನೆ ಪದಾಧಿಕಾರಿಗಳ ಕೈಗೊಂಡಿದ್ದ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು.ಪ್ರಕರಣ ದಾಖಲಾದ ಕೆಲವೇ ದಿನಗಳಲ್ಲಿ ಆರೋಪಿ ಅಧಿಕಾರಿಯನ್ನು ಬಂಧಿಸಲಾಗಿದ್ದು, ಆತನ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಾಪತ್ತೆಯಾದ 1889 ಹೆಸರು ಮತ್ತು ಕಡಲೆ ಚೀಲಗಳನ್ನು ಈಗಾಗಲೇ ಪತ್ತೆ ಮಾಡಲಾಗಿದ್ದು, ರೈತರ ಉಗ್ರಾಣದಲ್ಲಿ ಇಡುವ ವೇಳೆ ನೀಡಿದ ದಾಖಲೆಗಳನ್ನು ಪರಿಶೀಲಿಸಿ ಅವರಿಗೆ ಹಸ್ತಾಂತರಿಸಲಾಗುವುದು. ಮುಂದೆ ಈ ರೀತಿ ಆಗದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಉಗ್ರಾಣದ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಶಿವಾನಂದ ಕರಿಗಾರ ಮಾತನಾಡಿ, ಯಾವುದೇ ರಾಜಕೀಯ ಪಕ್ಷ ಇರಲಿ. ಮೊದಲು ರೈತರ ಸಂಕಷ್ಟ ಅರಿಯಲಿ. ಇನ್ನು ಮುಂದೆ ಇಂತಹ ಘಟನೆ ಸಂಭವಿಸಿದರೆ ಅದಕ್ಕೆ ಸರ್ಕಾರವೇ ಹೊಣೆ ಎಂದು ಎಚ್ಚರಿಸಿದರು.ಈ ಮಧ್ಯೆ ರೈತ ಸಂಘಟನೆಯವರು ಕೈಗೊಂಡಿದ್ದ ಧರಣಿ ಸತ್ಯಾಗ್ರಹವನ್ನು ಜಿಲ್ಲಾಧಿಕಾರಿಗಳ ಮಾಹಿತಿ ಹಿನ್ನೆಲೆಯಲ್ಲಿ ಕೈಬಿಟ್ಟರು. ಈ ವೇಳೆ ಶಾಸಕ ಎನ್.ಎಚ್. ಕೋನರಡ್ಡಿ, ಮಹಿಳಾ, ಪುರುಷ ಸಂಘಟನೆ ಅಧ್ಯಕ್ಷರು, ಸರ್ವ ಸದಸ್ಯರು ಮತ್ತು ಜಿಲ್ಲಾ ಪೊಲೀಸ್ ಇಲಾಖೆಯ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಪಾಲ್ಗೊಂಡಿದ್ದರು.