ಧರ್ಮ ಯುದ್ಧ ಆರಂಭಕ್ಕೂ ಮುನ್ನ ಮಂಜುನಾಥನ ದರ್ಶನ ಪಡೆದಿದ್ದೇನೆ: ಡಿಸಿಎಂ ಡಿಕೆಶಿ

| Published : Mar 27 2024, 01:00 AM IST

ಧರ್ಮ ಯುದ್ಧ ಆರಂಭಕ್ಕೂ ಮುನ್ನ ಮಂಜುನಾಥನ ದರ್ಶನ ಪಡೆದಿದ್ದೇನೆ: ಡಿಸಿಎಂ ಡಿಕೆಶಿ
Share this Article
  • FB
  • TW
  • Linkdin
  • Email

ಸಾರಾಂಶ

ನಾನು ಪ್ರತಿ ಬಾರಿ ಧರ್ಮ ಯುದ್ಧದ ಸಂದರ್ಭದಲ್ಲಿ ಮಂಜುನಾಥನ ದರ್ಶನ ಪಡೆಯುತ್ತೇನೆ. ಶ್ರೀ ಮಂಜುನಾಥ, ಗಂಗಾಧರ ಅಜ್ಜ ನನ್ನ ಬದುಕಿನಲ್ಲಿ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ ಎಂದು ಡಿಕೆಶಿ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ಈ ಬಾರಿಯ ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದೇನೆ ಎಂದರು.ನಾನು ಪ್ರತಿ ಬಾರಿ ಧರ್ಮ ಯುದ್ಧದ ಸಂದರ್ಭದಲ್ಲಿ ಮಂಜುನಾಥನ ದರ್ಶನ ಪಡೆಯುತ್ತೇನೆ. ಶ್ರೀ ಮಂಜುನಾಥ, ಗಂಗಾಧರ ಅಜ್ಜ ನನ್ನ ಬದುಕಿನಲ್ಲಿ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ ಎಂದರು.ಲೋಕಸಭೆ ಚುನಾವಣೆ ತಯಾರಿ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ನಾನೀಗ ಮಂಜುನಾಥನ ಸನ್ನಿಧಿಯಲ್ಲಿ ಇದ್ದೇನೆ. ಧರ್ಮಸ್ಥಳ ಹಾಗೂ ಮಂಜುನಾಥನ ಶಕ್ತಿಯನ್ನು ‘ಮಾತು ಬಿಡದ ಮಂಜುನಾಥ’ ಎಂದೇ ಬಣ್ಣಿಸುತ್ತಾರೆ. ಅದೇ ರೀತಿ ನಾವು ಕೂಡ ಚುನಾವಣೆಗೂ ಮುನ್ನ ಕೊಟ್ಟ ಮಾತನ್ನು ಬಿಡದೆ ಪಾಲಿಸಿದ್ದೇವೆ. ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ನುಡಿದಂತೆ ನಡೆದಿದ್ದೇವೆ, ಜನರ ಮಧ್ಯೆ ಹೋಗಿ ನಮಗೆ ಮತ್ತಷ್ಟು ಹೆಚ್ಚಿನ ಶಕ್ತಿ ಕೊಡಿ ಎಂದು ಮತ ಕೇಳುತ್ತೇವೆ. ಈ ದೇವರು ನಮಗೆ ನುಡಿದಂತೆ ನಡೆಯಲು ಶಕ್ತಿ ನೀಡಿರುವುದೇ ನಮ್ಮ ಭಾಗ್ಯ ಎಂದರು.ಮಹಿಳೆಯರು ಇಲ್ಲಿಗೆ ಉಚಿತವಾಗಿ ಬಸ್‌ನಲ್ಲಿ ಪ್ರಯಾಣ ಮಾಡಿ ಬರುತ್ತಿದ್ದಾರೆ. ಆ ಮೂಲಕ ತೀರ್ಥಯಾತ್ರೆ ಧರ್ಮಯಾತ್ರೆ ನಡೆಯುತ್ತಿದೆ. ಇದಕ್ಕೆ ಜನ ಕೊಟ್ಟ ಶಕ್ತಿ ಕಾರಣ. ನಾವು ಜನರ ಋಣ ತೀರಿಸಿದ್ದೇವೆ. ಜನರೂ ಕೂಡ ಉಪಕಾರ ಸ್ಮರಣೆ ಇಟ್ಟುಕೊಳ್ಳುವ ವಿಶ್ವಾಸವಿದೆ ಎಂದು ಡಿಕೆಶಿ ಹೇಳಿದರು.