ಕನ್ನಡಪ್ರಭ ವಾರ್ತೆ ಪಾವಗಡ

ಮಾಜಿ ಸಚಿವ ವೆಂಕಟರಮಣಪ್ಪ ವೈಕುಂಠ ಸಮಾರಾಧನೆ ಕಾರ್ಯಕ್ರಮ ಮುಖಂಡರು ಹಾಗೂ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಿ ಭಾವುಕತೆಯ ಕ್ಷಣಗಳಿಗೆ ಸಾಕ್ಷಿಯಾಯಿತು. ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಭಾಗವಹಿಸಿ ಆತ್ಮೀಯ ಸ್ನೇಹಿತನನ್ನು ನೆನೆದು ಕಣ್ಣೀರಿಟ್ಟರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಡಿಸಿಎಂ, ತುಂಗಭದ್ರಾ ಕುಡಿಯುವ ನೀರಿನ ಯೋಜನೆಗೆ 2700 ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ಸ್ಥಳೀಯ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಲಾಗುವುದು. ಪಾವಗಡ ಬಸ್ ನಿಲ್ದಾಣ ನಿರ್ಮಾಣ ಹಾಗೂ ಈಗಾಗಲೇ ಪರಿಶೀಲನೆ ನಡೆಸಲಾಗಿದೆ. 2027ರ ಒಳಗೆ ಬಳ್ಳಾರಿ–ರಾಯದುರ್ಗ–ತುಮಕೂರು ರೈಲ್ವೆ ಮಾರ್ಗ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು. 2007ರಲ್ಲಿ ರೈಲ್ವೆ ಸಚಿವರಾಗಿದ್ದ ಲಾಲು ಪ್ರಸಾದ್ ಯಾದವ್ ಅವಧಿಯಲ್ಲಿ ಈ ಯೋಜನೆಗೆ ಅನುಮೋದನೆ ದೊರೆತಿದ್ದು, ಅಂದಿನ ಶಾಸಕರು ಹಾಗೂ ಮುಖಂಡರ ಮನವಿಯಿಂದ ಪಿಂಕ್ ಬುಕ್‌ನಲ್ಲಿ ದಾಖಲೆಯಾಗಿತ್ತು ಎಂದು ಅವರು ಸ್ಮರಿಸಿದರು. ಆರಂಭದಲ್ಲಿ 98 ಕೋಟಿ ರೂ. ಮೀಸಲಿದ್ದರೂ ಭೂಸ್ವಾಧೀನ ವಿಳಂಬದಿಂದ ಯೋಜನೆ ಕುಂಠಿತಗೊಂಡಿತ್ತು ಈಗಾಗಲೇ ಬಳ್ಳಾರಿಯಿಂದ ಪಾವಗಡದವರೆಗೆ ಟ್ರ್ಯಾಕ್ ಅಳವಡಿಕೆ ಪೂರ್ಣಗೊಂಡಿದೆ. ತುಮಕೂರಿನವರೆಗೆ ಕಾಮಗಾರಿ ಬಾಕಿಯಿದೆ. ಮಧುಗಿರಿ ಮತ್ತು ಕೊರಟಗೆರೆ ಭಾಗಗಳಲ್ಲಿ ಭೂಸ್ವಾಧೀನ ಪೂರ್ಣಗೊಂಡಿದ್ದು,ಉಳಿದ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕರಿಗೆ ರೈಲು ಸೇವೆ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಬೆಸ್ಕಾಂ ನೌಕರರು ಎಸ್ಕಾಂಗಳ ಖಾಸಗೀಕರಣ ಪ್ರಸ್ತಾವನೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ಡಿಸಿಎಂಗೆ ಮನವಿ ಸಲ್ಲಿಸಿದರು. ಈ ವೇಳೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ಅಧ್ಯಕ್ಷ ತಿಮ್ಮಪ್ಪ ಮಾತನಾಡಿ, ಖಾಸಗೀಕರಣದಿಂದ ವಿದ್ಯುತ್ ದರ ಏರಿಕೆ, ಉದ್ಯೋಗ ಭದ್ರತೆ ಕುಗ್ಗುವಿಕೆ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸೇವಾ ಗುಣಮಟ್ಟ ಕುಸಿಯುವ ಭೀತಿ ಇದೆಯಿದೆ. ವಿದ್ಯುತ್ ಕ್ಷೇತ್ರವು ಸಾರ್ವಜನಿಕ ಸೇವೆಯ ಪ್ರಮುಖ ಅಂಗವಾಗಿದ್ದು, ಲಾಭಕೇಂದ್ರಿತ ಖಾಸಗಿ ಸಂಸ್ಥೆಗಳ ಹಸ್ತಕ್ಷೇಪದಿಂದ ಜನಸಾಮಾನ್ಯರಿಗೆ ತೊಂದರೆ ಉಂಟಾಗಬಹುದು. ಪ್ರಕೃತಿ ವಿಕೋಪಗಳಲ್ಲಿಯೂ ನಿರಂತರ ಸೇವೆ ನೀಡುತ್ತಿರುವ ನೌಕರರ ಪಾತ್ರವನ್ನು ಗಮನದಲ್ಲಿಟ್ಟುಕೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡುವುದಾಗಿ ತಿಳಿಸಿದರು.