ಬೆಳ್ತಂಗಡಿ: ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಕೇಂದ್ರ ಸರ್ಕಾರ ಬೆಲೆ ಏರಿಕೆ ವಿರುದ್ಧ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್‌ ಹಾಗೂ ಯುವ ಕಾಂಗ್ರೆಸ್ ವತಿಯಿಂದ ಬೆಳ್ತಂಗಡಿ ಬಸ್‌ ನಿಲ್ದಾಣದ ಬಳಿಯ ಮೂರು ಮಾರ್ಗ ಜಂಕ್ಷನ್ ಬಳಿ ಬೃಹತ್ ಪ್ರತಿಭಟನೆ ನಡೆಯಿತು.ಪ್ರತಿಭಟನೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್‌ ಶಿವರಾಂ ಮಾತನಾಡಿ, ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡುವ ಮೂಲಕ ಸಾಮಾನ್ಯ ಜನರ ಬದುಕಿನ ಜೊತೆ ಚೆಲ್ಲಾಟ ಆಡುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯಿಂದ ಲಕ್ಷಾಂತರ ವಿದ್ಯಾರ್ಥಿಗಳ ಕನಸನ್ನು ಹುಸಿ ಮಾಡಿದೆ. ಕೇಂದ್ರ ಸರ್ಕಾರ ಒಂದು ಪಂಚರ್ ಸರ್ಕಾರ ಎಂದು ಟೀಕಿಸಿದರು.

ಈ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ದಿನನಿತ್ಯ ಬಳಕೆಯ ಗ್ಯಾಸ್‌ ಬೆಲೆ ಏರಿಸಿದ ಮತ್ತು ನೀಟ್ ಪರೀಕ್ಷೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಗೆ ಕಾರಣವಾದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಅವರ ಪೋಟೋವನ್ನು ಬೆಂಕಿ ಹಚ್ಚಿ ಸುಡಲಾಯಿತು. ಬಳಿಕ ರಸ್ತೆ ತಡೆದು ಪ್ರತಿಭಟನೆ ಮಾಡಲಾಯಿತು. ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸತೀಶ್‌ ಕಾಶಿಪಟ್ಟ ಗ್ರಾಮೀಣ ಬ್ಲಾಕ್ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷ ನಾಗೇಶ್ ಕುಮಾ‌ರ್ ಗೌಡ, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾ‌ರ್ ಲಾಯಿಲ ಕೇಶವ ಪಿ. ಬೆಳಾಲು, ರಾಜ್ಯ ಅಲ್ಪಸಂಖ್ಯಾತ ಘಟಕದ ಪ್ರವೀಣ್ ಹಳ್ಳಿಮನೆ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಯೂತ್‌ ಕಾಂಗ್ರೆಸ್‌ ಅಧ್ಯಕ್ಷ ಹಕೀಮ್ ಕೊಕ್ಕಡ, ಬೆಳ್ತಂಗಡಿ ಬ್ಲಾಕ್ ಯುವ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಅಝ‌ರ್ ನಾವೂರು, ಅಶ್ರಫ್‌, ಗ್ಯಾರಂಟಿ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲಿಯಾನ್, ಮಹಿಳಾ ಘಟಕದ ಅಧ್ಯಕ್ಷೆ ನಮಿತಾ, ಜೀನತ್, ಶೋಭಾ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.