ಸಾರಾಂಶ
ದೊಡ್ಡಬಳ್ಳಾಪುರ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆಪ್ಟೆಂಬರ್ 22, 2025 ರಿಂದ ಅಕ್ಟೋಬರ್ 7, 2025 ರವರೆಗೆ ಕೈಗೊಳ್ಳುತ್ತಿದ್ದು ಜಿಲ್ಲೆಯಲ್ಲಿ ಸಮೀಕ್ಷೆ ಕಾರ್ಯ ಯಶಸ್ವಿಯಾಗಿ ನಡೆಸಲು ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಕೈಗೊಳ್ಳಲಾಗಿದೆ.
ಜನರ ಶೈಕ್ಷಣಿಕ ಮಟ್ಟ, ಆರ್ಥಿಕ ಸ್ಥಿತಿ, ಜಾತಿ, ಉಪಜಾತಿ, ಕೌಶಲ್ಯ ಅಗತ್ಯತೆಗಳು ಮತ್ತು ಇತರೆ ಸಾಮಾಜಿಕ ಅಂಶಗಳನ್ನು ದಾಖಲಿಸಿ, ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಆಧಾರವನ್ನು ಸೃಷ್ಟಿಸುವುದು. ಈ ದತ್ತಾಂಶ ಸಂಗ್ರಹಣೆಯು ರಾಜ್ಯದ ಅಭಿವೃದ್ಧಿಗೆ ಮತ್ತು ಸಮಾಜದ ಎಲ್ಲಾ ವರ್ಗಗಳಿಗೆ ಸಮಾನ ಅವಕಾಶಗಳನ್ನು ಒದಗಿಸುವುದು ಸಮೀಕ್ಷೆಯ ಮುಖ್ಯ ಉದ್ದೇಶವಾಗಿದೆ.ಸಮೀಕ್ಷೆಯಲ್ಲಿ ಸುಮಾರು 60 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಗಣತಿದಾರರು ಮೊಬೈಲ್ ಆಪ್ ಮೂಲಕ ಮನೆ-ಮನೆಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸುತ್ತಾರೆ. ಸಮೀಕ್ಷೆಯು ಪಡಿತರ ಚೀಟಿ ಮತ್ತು ಆಧಾರ್ ಸಂಖ್ಯೆಯ ಆಧಾರದಲ್ಲಿ ನಡೆಯಲಿದೆ. ಸಾರ್ವಜನಿಕರು ತಮ್ಮ ಮಾಹಿತಿಯನ್ನು ನಿಖರವಾಗಿ ಒದಗಿಸಬೇಕಾಗುತ್ತದೆ.
ಸಮೀಕ್ಷೆ ಕಾರ್ಯಕ್ಕೆ ಪೂರ್ವಭಾವಿಯಾಗಿ ಮನೆ ಪಟ್ಟಿ ಅಂದರೆ ಹೌಸ್ ಲಿಸ್ಟಿಂಗ್ ಎಕ್ಸರ್ಸೈಜ್ ಮಾಡಲಾಗುತ್ತಿದೆ. ಜೊತೆಗೆ ಆಯೋಗದ ಸಿಬ್ಬಂದಿಗಳು ಜಿಲ್ಲೆಯ ಪ್ರತಿ ಮನೆಗೆ ಭೇಟಿ ನೀಡಿ, ಸ್ಟಿಕ್ಕರ್ ಅಂಟಿಸುತ್ತಿದ್ದಾರೆ.ಜಿಲ್ಲಾಮಟ್ಟದಲ್ಲಿ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಮನ್ವಯ ಸಮಿತಿ ರಚಿಸಲಾಗಿದ್ದು ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕಾಲಕಾಲಕ್ಕೆ ಸಭೆ ನಡೆಸಿ ಸಮೀಕ್ಷೆಯ ರೂಪುರೇಷೆಗಳ ಬಗ್ಗೆ ಚರ್ಚಿಸಲಾಗುತ್ತಿದೆ.
ಜಿಲ್ಲೆಯಲ್ಲಿ 3.78.000 ಕುಟುಂಬಗಳು:ದೇವನಹಳ್ಳಿಯಲ್ಲಿ 67,547 ಕುಟುಂಬಗಳು, ದೊಡ್ಡಬಳ್ಳಾಪುರ ತಾಲೂಕಿನಲ್ಲಿ 1,03,903 ಕುಟುಂಬಗಳು. ಹೊಸಕೋಟೆ ತಾಲೂಕಿನಲ್ಲಿ 88,392 ಕುಟುಂಬಗಳು ಹಾಗೂ ನೆಲಮಂಗಲ ತಾಲೂಕಿನಲ್ಲಿ 79,943 ಕುಟುಂಬಗಳಿದೆ. ಒಟ್ಟಾರೆ ಜಿಲ್ಲೆಯ ನಾಲ್ಕು ತಾಲೂಕುಗಳಿಂದ 3,34,785 ಕುಟುಂಬಗಳ ಸಮೀಕ್ಷೆ ನಡೆಯಲಿದೆ.
ಸಮೀಕ್ಷೆಗೆ 2520 ಗಣತಿದಾರರ ಬಳಕೆ:ಜಿಲ್ಲೆಯಾದ್ಯಂತ ಸಮೀಕ್ಷೆ ಕೈಗೊಳ್ಳಲು 2520 ಗಣತೀದಾರರನ್ನು ನೇಮಿಸಲಾಗಿದೆ. ಜೊತೆಗೆ 55 ಮಾಸ್ಟರ್ ಟ್ರೈನರ್ಗಳು,194 ಮೇಲ್ವಿಚಾರಕರನ್ನು ನೇಮಿಸಲಾಗಿದೆ. ‘ಮಾಸ್ಟರ್ ಟ್ರೈನಿಂಗ್ ಪಡೆದವರು ಗಣತಿದಾರರಿಗೆ ತರಬೇತಿ ನೀಡಲಿದ್ದಾರೆ. ಸಮೀಕ್ಷೆಯಲ್ಲಿ ಗಣತೀದಾರರೊಂದಿಗೆ ಆಶಾ ಕಾರ್ಯಕರ್ತೆಯರ, ಎನ್.ಎಸ್.ಎಸ್, ಎನ್.ಸಿ.ಸಿ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
150 ಮನೆಗಳ ಬ್ಲಾಕ್ ರಚನೆ:‘ಸಮೀಕ್ಷೆ ಸಲುವಾಗಿ ತಲಾ 150 ಮನೆಗಳನ್ನು ಒಂದು ಬ್ಲಾಕ್ ಆಗಿ ರಚಿಸಲಾಗಿದೆ. ಈ ಬ್ಲಾಕ್ ಗಳಲ್ಲಿ ಒಬ್ಬ ಗಣತಿದಾರನನ್ನು (ಎನ್ಯೂಮರೇಟರ್) ನಿಯೋಜಿಸಲಾಗುವುದು. ಅವರು ಸಮೀಕ್ಷೆ ಬಗ್ಗೆ ಪ್ರತಿ ಮನೆಗೆ ತೆರಳಿ 60 ಪ್ರಶ್ನೆಗಳನ್ನು ಆ್ಯಪ್ ಮೂಲಕ ಕೇಳುವರು. ಗಣತಿದಾರರ ಮೇಲೆ ಮೇಲ್ವಿಚಾರಕರು ಕಾರ್ಯನಿರ್ವಹಿಸುತ್ತಾರೆ.
ಸಹಾಯವಾಣಿ ಸಂಪರ್ಕ:ಸಮೀಕ್ಷೆಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿ, ಗೊಂದಲಗಳಿದ್ದಲ್ಲಿ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ರಾಜ್ಯ ಸಹಾಯವಾಣಿ ಸಂಖ್ಯೆ 8050770007 ಇಲ್ಲಿಗೆ ಕರೆ ಮಾಡಬಹುದು.
ಕೋಟ್...................ಜಿಲ್ಲೆಯ ಪ್ರತಿ ಮನೆಗೆ ಆಯೋಗದ ಸಿಬ್ಬಂದಿಗಳು ಭೇಟಿ ನೀಡಿ ಸ್ಟಿಕ್ಕರ್ ಅಂಟಿಸಿದ ಬಳಿಕ ಗಣತಿದಾರರು ಮನೆ ಮನೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದ್ದಾರೆ. ಈ ವೇಳೆ ಗಣತಿದಾರರಿಗೆ ಅಗತ್ಯ ದಾಖಲೆಗಳ ಜೊತೆಗೆ ಸೂಕ್ತ ಮಾಹಿತಿ ಒದಗಿಸಿ ಸಹಕರಿಸುವ ಮೂಲಕ ಈ ಸಮೀಕ್ಷೆಯನ್ನು ಯಶಸ್ವಿಗೊಳಿಸಬೇಕಿದೆ.
-ಎ.ಬಿ.ಬಸವರಾಜು, ಜಿಲ್ಲಾಧಿಕಾರಿ, ಬೆಂ.ಗ್ರಾ ಜಿಲ್ಲೆ(ಫೋಟೋ ಮಗ್ಶಾಟ್ ಮಾತ್ರ ಕೋಟ್ಗೆ ಬಳಸಿ)