ಬೆಳಗಾವಿ : ಅತ್ತ ಮಹಾರಾಷ್ಟ್ರ ಸರ್ಕಾರವು ಬೆಳಗಾವಿ ಗಡಿ ವಿವಾದದ ಕಾನೂನಾತ್ಮಕ ಹೋರಾಟವನ್ನು ಸುಪ್ರೀಂಕೋರ್ಟ್ನಲ್ಲಿ ತೀವವ್ರಗೊಳಿಸಿರುವ ಬೆನ್ನಲ್ಲೇ ರಾಜ್ಯದ ಹಿತ ಕಾಯಲು ನಾವು ಸಿದ್ಧ. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದಲ್ಲಿ ರಾಜ್ಯದ ಹಿತಾಸಕ್ತಿಯನ್ನು ಯಾವುದೇ ಕಾರಣಕ್ಕೂ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಸರ್ವಪಕ್ಷ ಸಭೆ ನಡೆಸಿರುವ ಮಾಹಿತಿ ಇದೆ
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ಸರ್ವಪಕ್ಷ ಸಭೆ ನಡೆಸಿರುವ ಮಾಹಿತಿ ಇದೆ. ಈ ಕುರಿತು ಸಂಪೂರ್ಣ ಮಾಹಿತಿ ತರಿಸಿಕೊಳ್ಳಲಾಗುವುದು. ಇದು ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ವಿಷಯ. ಆದ್ದರಿಂದ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಬೆಂಗಳೂರಿನಲ್ಲಿ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.
ಕನ್ನಡಪರ ಸಂಘಟನೆಗಳು ನನಗೆ ಮನವಿ ಪತ್ರ ಸಲ್ಲಿಸಿವೆ
‘ಈ ಸಂಬಂಧ ಕನ್ನಡಪರ ಸಂಘಟನೆಗಳು ನನಗೆ ಮನವಿ ಪತ್ರ ಸಲ್ಲಿಸಿವೆ. ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಬಾಕಿ ಇರುವ ಎಲ್ಲ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಕಾನೂನುಬದ್ಧವಾಗಿ ರಾಜ್ಯದ ಪರವಾದ ವಾದಗಳನ್ನು ಮಂಡಿಸಿ ಕರ್ನಾಟಕದ ಹಿತಾಸಕ್ತಿಯನ್ನು ಸಮರ್ಥವಾಗಿ ಕಾಪಾಡಲಾಗುವುದು‘ ಎಂದು ಅವರು ಹೇಳಿದರು.
ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ನಿರ್ಣಯ ಅಂಗೀಕರಿಸುವಂತೆ ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಹೋರಾಟದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಮಹಾಜನ ಆಯೋಗದ ವರದಿ ಅಂತಿಮವಾಗಿದೆ. ಈ ವರದಿಯ ವಿಷಯವನ್ನು ಪರಿಶೀಲಿಸಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.
‘ಈಗಾಗಲೇ ಸಚಿವ ಎಂ.ಬಿ.ಪಾಟೀಲ, ಮಾಜಿ ಸಚಿವ ಎಚ್.ಕೆ.ಪಾಟೀಲ ಅವರೊಂದಿಗೆ ಈ ವಿಷಯವಾಗಿ ಮಾತುಕತೆ ನಡೆಸಿದ್ದೇನೆ. ಅಲ್ಲದೆ ರಾಜ್ಯವು ಈಗಾಗಲೇ ಮಹಾಜನ ವರದಿಯನ್ನು ಅಂತಿಮ ಎಂದು ತಿಳಿಸಿದೆ. ಇದರಲ್ಲಿ ಯಾವುದೇ ಗೊಂದಲವಿಲ್ಲ. ಕೇವಲ ಸಭೆಯೇ ಅಂತಿಮವಲ್ಲ. ನಾವು ಸುಪ್ರೀಂ ಕೋರ್ಟ್ನಲ್ಲಿರುವ ಬೆಳಗಾವಿ ಗಡಿ ವಿವಾದ ಪ್ರಕರಣದತ್ತ ಗಮನ ಹರಿಸುಸುತ್ತೇವೆ’ ಎಂದು ಹೇಳಿದರು.
ಬುಧವಾರ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಸಂಬಂಧ ಈಗಾಗಲೇ ಸುಪ್ರೀಂಕೋರ್ಟ್ನಲ್ಲಿ ನಡೆಯುತ್ತಿರುವ ಪ್ರಕರಣದ ತ್ವರಿತ ವಿಚಾರಣೆಗಾಗಿ ತಜ್ಞರ ನೇಮಕ, ಬೆಳಗಾವಿಯಲ್ಲಿನ ಮರಾಠಿ ಭಾಷಿಕರ ಮೇಲಿನ ಪ್ರಕರಣದಲ್ಲಿ ಅವರಿಗೆ ಕಾನೂನು ಹಾಗೂ ಹಣಕಾಸಿನ ನೆರವು ನೀಡುವುದು, ರಾಷ್ಟ್ರೀಯ ಭಾಷಾ ಅಲ್ಪಸಂಖ್ಯಾತರ ಆಯೋಗಕ್ಕೆ ದೂರು ನೀಡಲು ನಿರ್ಧರಿಸಿದ್ದರು.
