ಬೇಲ್‌ ರದ್ದು: ವಿನಯ್‌ ಕುಲಕರ್ಣಿಗೆ ಬಂಧನ ಭೀತಿ - ಸುಪ್ರೀಂ ಕೋರ್ಟ್‌ ಆದೇಶ

| N/A | Published : Jun 07 2025, 07:57 AM IST

Vinay kulkarni

ಸಾರಾಂಶ

2016ರಲ್ಲಿ ಧಾರವಾಡದಲ್ಲಿ ನಡೆದ ಬಿಜೆಪಿ ನಾಯಕ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ನ ಧಾರವಾಡ ಗ್ರಾಮಾಂತರ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.

 ನವದೆಹಲಿ/ಧಾರವಾಡ: 2016ರಲ್ಲಿ ಧಾರವಾಡದಲ್ಲಿ ನಡೆದ ಬಿಜೆಪಿ ನಾಯಕ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‌ನ ಧಾರವಾಡ ಗ್ರಾಮಾಂತರ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದ ಅವರಿಗೆ ಮತ್ತೆ ಬಂಧನ ಭೀತಿ ಶುರುವಾಗಿದೆ.

2020ರಲ್ಲಿ ಬಂಧಿಸಲ್ಪಟ್ಟು 2021ರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಕುಲಕರ್ಣಿ ಅವರ ಮೇಲೆ ಸಾಕ್ಷಿಗಳ ಮೇಲೆ ಪ್ರಭಾವ ಬೀರಿದ ಆರೋಪ ಹೊರಿಸಲಾಗಿತ್ತು. ಜಾಮೀನು ಷರತ್ತುಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ ಕರ್ನಾಟಕ ಸರ್ಕಾರ ಜಾಮೀನು ರದ್ದುಗೊಳಿಸುವಂತೆ ಕೋರಿತ್ತು. ನ್ಯಾಯಾಲಯವು ಮನವಿಯನ್ನು ಸ್ವೀಕರಿಸಿ ಅವರ ಜಾಮೀನನ್ನು ರದ್ದುಗೊಳಿಸಿದೆ.

2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಪಡೆದು ಕ್ಷೇತ್ರದ ಹೊರಗಿದ್ದರೂ ಗೆಲುವು ಸಾಧಿಸುವ ಮೂಲಕ ವಿನಯ ಕುಲಕರ್ಣಿ ಇತಿಹಾಸ ನಿರ್ಮಿಸಿದ್ದರು. ಎರಡು ವರ್ಷಗಳ ಕಾಲ ಕ್ಷೇತ್ರದ ಹೊರಗಿದ್ದುಕೊಂಡೇ ಆಡಳಿತ ಮಾಡಿದ್ದ ಅವರು, ಇದೀಗ ಜಾಮೀನು ರದ್ದಾಗಿರುವ ಹಿನ್ನೆಲೆಯಲ್ಲಿ ಮತ್ತೆ ಜೈಲು ಪಾಲಾಗಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಬೆಂಬಲಿಗರು ಹಾಗೂ ಕಾರ್ಯಕರ್ತರು ಚಿಂತೆಗೀಡು ಆಗಿದ್ದಾರೆ.

2016ರಲ್ಲಿ ಬಿಜೆಪಿ ಜಿಪಂ ಸದಸ್ಯ ಯೋಗೇಶ್ ಗೌಡ ಹತ್ಯೆಯಲ್ಲಿ ವಿನಯ ಕುಲಕರ್ಣಿ ಪಾತ್ರ ಇದೆ ಎಂದು ಆರೋಪಿಸಲಾಗಿತ್ತು. ಆಗ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದರು. ನಂತರ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚುನಾವಣಾ ರ್‍ಯಾಲಿಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ವಿನಯ್ ಕುಲಕರ್ಣಿಯನ್ನು ಜೈಲಿಗೆ ಕಳುಹಿಸುವುದಾಗಿ ಪ್ರತಿಜ್ಞೆ ಮಾಡಿದ್ದರು.

ನಂತರ ಬಂದ ಬಿಜೆಪಿ ಸರ್ಕಾರ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿತು. ತನಿಖೆ ನಂತರ ವಿನಯ್ ಕುಲಕರ್ಣಿಯನ್ನು ಬಂಧಿಸಲಾಗಿತ್ತು. ಅವರು 9 ತಿಂಗಳಿಗಿಂತ ಹೆಚ್ಚು ಕಾಲ ಜೈಲಿನಲ್ಲಿ ಕಳೆದು ಜಾಮೀನು ಪಡೆದಿದ್ದರು. ಇದೀಗ ಜಾಮೀನು ರದ್ದಾಗಿದ್ದು ವಿನಯ ಕುಲಕರ್ಣಿ ಅವರ ಮುಂದಿನ ಹೆಜ್ಜೆ, ರಾಜಕೀಯ ಭವಿಷ್ಯವೇನಾಗಲಿದೆ ಕಾದು ನೋಡಬೇಕಿದೆ.

Read more Articles on