ಕೆಂಗೇರಿ ಹೋಬಳಿಯಲ್ಲಿ ಭೂ ಸ್ವಾಧೀನಕ್ಕೆ ಬಿಡಿಎ ಹೊರಡಿಸಿದ್ದ ಅಧಿಸೂಚನೆ ರದ್ದು

| N/A | Published : May 30 2025, 08:29 AM IST

 Rajasthan High Court for caste word

ಸಾರಾಂಶ

ನಗರದ ಬನಶಂಕರಿ 6ನೇ ಹಂತದ ಬಡಾವಣೆ ಅಭಿವೃದ್ಧಿಗಾಗಿ ಬೆಂಗಳೂರು ದಕ್ಷಿಣ ತಾಲೂಕಿನ ಕೆಂಗೇರಿ ಹೋಬಳಿಯ ಹೆಮ್ಮಿಗೆಪುರ, ಗಾಣಕಲ್ಲು ಮತ್ತಿತರ ಗ್ರಾಮಗಳಲ್ಲಿನ ಭೂ ಸ್ವಾಧೀನಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್‌ ರದ್ದುಪಡಿಸಿದೆ.

  ಬೆಂಗಳೂರು : ನಗರದ ಬನಶಂಕರಿ 6ನೇ ಹಂತದ ಬಡಾವಣೆ ಅಭಿವೃದ್ಧಿಗಾಗಿ ಬೆಂಗಳೂರು ದಕ್ಷಿಣ ತಾಲೂಕಿನ ಕೆಂಗೇರಿ ಹೋಬಳಿಯ ಹೆಮ್ಮಿಗೆಪುರ, ಗಾಣಕಲ್ಲು ಮತ್ತಿತರ ಗ್ರಾಮಗಳಲ್ಲಿನ ಭೂ ಸ್ವಾಧೀನಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹೊರಡಿಸಿದ್ದ ಅಧಿಸೂಚನೆಯನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಭೂ ಸ್ವಾಧೀನ ಅಧಿಸೂಚನೆ ರದ್ದು ಕೋರಿ ಎಚ್‌.ನಾಗರಾಜಯ್ಯ ಮತ್ತಿತರರು ಸಲ್ಲಿಸಿದ್ದ ತಕರಾರು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್‌. ಇಂದಿರೇಶ್‌ ಅವರ ಪೀಠ, ಅಧಿಸೂಚನೆ ಹೊರಡಿಸಿ 24 ವರ್ಷ ಕಳೆದರೂ ಭೂಮಿ ಸ್ವಾಧೀನಪಡಿಸಿಕೊಂಡಿಲ್ಲ. ಇದೀಗ ಭೂ ಸ್ವಾಧೀನಕ್ಕೆ ಮುಂದಾಗಿರುವುದು ಕಾನೂನು ಬಾಹಿರವಾಗಿದೆ ಎಂದು ಆದೇಶಿಸಿದೆ. ಇದರಿಂದ ಹೆಮ್ಮಿಗೆಪುರ, ಗಾಣಕಲ್ಲು ಮತ್ತಿತರ ಗ್ರಾಮಗಳ ಸುಮಾರು 350 ನಿವೇಶನಗಳ ಭೂ ಮಾಲೀಕರಿಗೆ ದೊಡ್ಡ ರಿಲೀಫ್‌ ಸಿಕ್ಕಿದೆ.

ಆದೇಶದ ವಿವರ

ಬಡಾವಣೆ ನಿರ್ಮಾಣಕ್ಕೆ ಬಿಡಿಎ 2,138 ಎಕರೆ ಭೂ ಸ್ವಾಧೀನಕ್ಕೆ ಉದ್ದೇಶಿಸಿತ್ತು. ಆದರೆ, ಹೈಕೋರ್ಟ್‌ನ ಹಿಂದಿನ ಆದೇಶದಂತೆ ಬಹುತೇಕ ಭೂಮಿಯನ್ನು ಭೂ ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಲಾಗಿದೆ. ಹಾಗೆಯೇ ಈವರೆಗೂ ಎಷ್ಟು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂಬ ಬಗ್ಗೆ ಪೂರಕ ದಾಖಲೆಗಳನ್ನು ಬಿಡಿಎ ಸಲ್ಲಿಸಿಲ್ಲ. 24 ವರ್ಷಗಳು ಕಳೆದರೂ ಸಹ ಭೂಮಿಯನ್ನು ತನ್ನ ಸ್ವಾಧೀನಕ್ಕೆ ತೆಗೆದುಕೊಂಡಿಲ್ಲ. ಆದ್ದರಿಂದ ಬಡಾವಣೆ ಅಭಿವೃದ್ಧಿ ಯೋಜನೆಯನ್ನು ಬಹುತೇಕ ಅನುಷ್ಠಾನಗೊಳಿಸಲಾಗಿದೆ ಎಂಬ ಸರ್ಕಾರ ಹಾಗೂ ಬಿಡಿಎ ವಾದವನ್ನು ಒಪ್ಪಲಾಗದು ಎಂದು ಪೀಠ ಹೇಳಿದೆ.

ಅಲ್ಲದೆ, ಇದೇ ಬಡಾವಣೆಯ ಅಭಿವೃದ್ಧಿಗಾಗಿ ಕೆಲವು ಭೂಮಿ ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ಇದೇ ನ್ಯಾಯಾಲಯ ರದ್ದುಪಡಿಸಿದೆ. ಹೀಗಿದ್ದರೂ ಕೆಲ ರೈತರ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಕ್ರಿಯೆ ಮುಂದುವರಿಸಿರುವುದು ಕಾನೂನು ಕಾನೂನು ಬಾಹಿರವಾಗಿದೆ. ಹಾಗಾಗಿ, ಬಡಾವಣೆಯ ಒಂದು ಭಾಗದ ಸ್ವಾಧೀನ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗುತ್ತಿದೆ ಎಂದು ಪೀಠ ಆದೇಶದಲ್ಲಿ ವಿವರಿಸಿದೆ.

ಭೂ ಮಾಲೀಕರು ಹಾಗೂ ಅರ್ಜಿದಾರರಾದ ನಾಗರಾಜಯ್ಯ ಮತ್ತಿತರರು 2002ರ ಜ.23ರಂದು ತಮ್ಮ ಭೂಮಿಯನ್ನು ಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡುವಂತೆ ಕೋರಿದ್ದರು. ಭೂ ಸ್ವಾಧೀನ ಪ್ರಕ್ರಿಯೆ ವಾಪಸ್‌ ಪಡೆಯುವಂತೆ ಮುಖ್ಯಮಂತ್ರಿಗಳು 2010ರ ಡಿ.15ರಂದು ಬಿಡಿಎಗೆ ಸೂಚಿಸಿದ್ದರು. ನಂತರ 2022ರ ಜೂ.22ರಂದು ಅರ್ಜಿದಾರರು ಬಿಡಿಎಗೆ ಮತ್ತೊಂದು ಮನವಿ ಸಲ್ಲಿಸಿದ್ದರು. ಅದೂ ಸಹ ಬಿಡಿಎ ಪರಿಶೀಲನೆಯಲ್ಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಸ್ವಾಧೀನ ಪ್ರಕ್ರಿಯೆ ಆರಂಭಿಸಿ 24 ವರ್ಷ ಕಳೆದರೂ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿಲ್ಲ. ಬಹುತೇಕ ಭೂಮಿಯನ್ನು ಸ್ವಾಧೀನದಿಂದ ಕೈಡಲಾಗಿದೆ. ಕೆಲವು ಭೂಮಿಗೆ ಸಂಬಂಧಿಸಿದಂತೆ ಮಾತ್ರ ಪ್ರಕ್ರಿಯೆ ಮುಂದುವರಿಸಲಾಗಿದೆ. ಇದು ಕಾನೂನು ಬಾಹಿರ ಮತ್ತು ತಾರತಮ್ಯ ನೀತಿಯಾಗಿದ್ದು, ಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಬೇಕು ಎಂದು ಕೋರಿದ್ದರು.

ಈ ವಾದ ಆಕ್ಷೇಪಿಸಿದ್ದ ಬಿಡಿಎ, ಬಡಾವಣೆ ಅಭಿವೃದ್ಧಿ ಯೋಜನೆಯನ್ನು ಬಹುತೇಕ ಅನುಷ್ಠಾನಗೊಳಿಸಲಾಗಿದೆ. ಹಾಗಾಗಿ ಭೂ ಸ್ವಾಧೀನ ಪ್ರಕ್ರಿಯೆ ಮುಂದುವರಿಸಲು ಅವಕಾಶ ನೀಡಬೇಕು ಎಂದು ಕೋರಿದ್ದರು.

Read more Articles on