34863 ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸೂಚನೆ - ಯುಪಿಎಸ್ಸಿ ಮಾದರಿಯಲ್ಲಿ ರಾಜ್ಯದ ನೇಮಕಾತಿ ಪ್ರಾಧಿಕಾರಗಳಲ್ಲಿ ಸುಧಾರಣೆ

| Published : Oct 08 2024, 11:17 AM IST

Siddaramaiah and DK Shivakumar
34863 ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸೂಚನೆ - ಯುಪಿಎಸ್ಸಿ ಮಾದರಿಯಲ್ಲಿ ರಾಜ್ಯದ ನೇಮಕಾತಿ ಪ್ರಾಧಿಕಾರಗಳಲ್ಲಿ ಸುಧಾರಣೆ
Share this Article
  • FB
  • TW
  • Linkdin
  • Email

ಸಾರಾಂಶ

ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಮಾದರಿಯಲ್ಲಿ ರಾಜ್ಯದ ನೇಮಕಾತಿ ಪ್ರಾಧಿಕಾರಗಳಲ್ಲಿ ಸಮಗ್ರ ಸುಧಾರಣೆ ತಂದು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ಭರ್ತಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೆಂಗಳೂರು : ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್ಸಿ) ಮಾದರಿಯಲ್ಲಿ ರಾಜ್ಯದ ನೇಮಕಾತಿ ಪ್ರಾಧಿಕಾರಗಳಲ್ಲಿ ಸಮಗ್ರ ಸುಧಾರಣೆ ತಂದು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34,863 ಹುದ್ದೆಗಳನ್ನು ಭರ್ತಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸೋಮವಾರ ಗೃಹಕಚೇರಿ ಕೃಷ್ಣಾದಲ್ಲಿ ಸರ್ಕಾರದ ಹಂತದಲ್ಲಿ ವಿವಿಧ ಇಲಾಖೆಗಳ ನೇಮಕಾತಿಗಳ ಬಗ್ಗೆ ಅವರು ಪ್ರಗತಿ ಪರಿಶೀಲನೆ ನಡೆಸಿದರು.

ಕಳೆದ ವಾರ ಸರ್ಕಾರದ ಮುಖ್ಯಕಾರ್ಯದರ್ಶಿ ಅವರ ಅಧ್ಯಕ್ಷತೆಯಲ್ಲಿ ನಡೆದ ನೇಮಕಾತಿ ಪ್ರಾಧಿಕಾರಗಳ ಸಭೆಯಲ್ಲಿ ಕೈಗೊಂಡಿರುವ ಶಿಫಾರಸುಗಳನ್ನು ಜಾರಿಗೊಳಿಸಬೇಕು. ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 34863 ಹುದ್ದೆಗಳನ್ನು ತುಂಬಲು ಕಾಲ ಮಿತಿಯನ್ನು ನಿಗದಿಪಡಿಸಿಕೊಂಡು ನೇಮಕಾತಿ ಪ್ರಕ್ರಿಯೆ ನಡೆಸಬೇಕು. ಅಗತ್ಯ ಸೇವೆಗಳ ಇಲಾಖೆಗಳಲ್ಲಿ ನೇಮಕಾತಿಗೆ ಆದ್ಯತೆ ನೀಡಬೇಕೆಂದು ಸ್ಪಷ್ಟ ಸೂಚಿಸಿದರು.

ಯುಪಿಎಸ್ಸಿಯಲ್ಲಿ ಕೇವಲ ಗ್ರೂಪ್‌ ಎ ಮತ್ತು ಗ್ರೂಪ್‌ ಬಿ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಇದೇ ರೀತಿ ಕೆಪಿಎಸ್‌ಸಿ ಕೇವಲ ಗ್ರೂಪ್‌ ಎ ಮತ್ತು ಬಿ ಮಾತ್ರ ನೇಮಕಾತಿ ಪ್ರಕ್ರಿಯೆ ನಡೆಸಿ, ಗ್ರೂಪ್‌ ‘ಸಿ’ಯಂತಹ ಬೇರೆ ನೇಮಕಾತಿಗಳನ್ನು ಕೆಇಎ ಮಾಡುವ ಕುರಿತು ಚರ್ಚೆ ನಡೆಸಲಾಗಿದೆ. 371ಜೆ ಗೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು 2023ರಲ್ಲಿ ಹೊರಡಿಸಿರುವ ಸುತ್ತೋಲೆಯನ್ನು ಅನುಸರಿಸುವ ಕುರಿತು ಕ್ರಮ ಕೈಗೊಳ್ಳುವಂತೆ ಸಿದ್ದರಾಮಯ್ಯ ಸೂಚನೆ ನೀಡಿದರು.

ಮೊದಲು ಲಿಖಿತ ಪರೀಕ್ಷೆ:

ಪಿಎಸ್‌ಐ ನೇಮಕಾತಿಯಲ್ಲಿ ದೈಹಿಕ ಪರೀಕ್ಷೆಯನ್ನು ಮೊದಲು ನಡೆಸಲಾಗುತ್ತಿದ್ದು, ಅಬಕಾರಿ ಇಲಾಖೆ ನೇಮಕಾತಿಯಲ್ಲಿ ಲಿಖಿತ ಪರೀಕ್ಷೆಯನ್ನು ಮೊದಲು ಮಾಡಲಾಗುತ್ತದೆ. ಅಬಕಾರಿ ಇಲಾಖೆ ಮಾದರಿಯನ್ನು ಪಿಎಸ್‌ಐ ನೇಮಕಾತಿಯಲ್ಲೂ ಅನುಸರಿಸುವ ಕುರಿತು ಪರಿಶೀಲಿಸಬೇಕು. ಜೊತೆಗೆ ರಾಜ್ಯದಲ್ಲಿ 41 ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿಯಾಗದ ಕಾರಣ ನೇಮಕಾತಿ ವಿಳಂಬವಾಗುತ್ತಿದ್ದು ಎಲ್ಲಾ ಇಲಾಖೆಗಳಿಗೆ ಅನುಕೂಲವಾಗುವಂತೆ ಮಾದರಿ ಸಿ ಅಂಡ್‌ ಆರ್‌ ಸಿದ್ಧಪಡಿಸಲು ಸೂಚನೆ ನೀಡಿದರು.

ನೇಮಕಾತಿ ಕ್ಯಾಲೆಂಡರ್‌ ಸಿದ್ಧಪಡಿಸಿ:

ನೇಮಕಾತಿ ಸಂಬಂಧ ವಾರ್ಷಿಕ ಕ್ಯಾಲೆಂಡ್‌ ಸಿದ್ಧಪಡಿಸಿಕೊಂಡು ಆರ್ಥಿಕ ವರ್ಷದ ಆರಂಭದಲ್ಲಿ ಆಯಾ ಇಲಾಖೆಗಳು ನೇಮಕಾತಿಗೆ ಖಾಲಿಯಿರುವ ಹುದ್ದೆಗಳ ಕುರಿತು ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಬೇಕು. ಕಾಲಮಿತಿಯಲ್ಲಿ ಅನುಮೋದನೆ ಪಡೆದು ನೇಮಕಾತಿ ಪೂರ್ಣಗೊಳಿಸಬೇಕು. ಕೇರಳ ಮಾದರಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸುವ ಬಗ್ಗೆ ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕೆಂದು ತಿಳಿಸಿದರು.