ಬೆಂಗಳೂರು : ಪರಿಶಿಷ್ಟ ಜಾತಿಗೆ ಸೇರಿದ ಸಚಿವರು ಹಾಗೂ ಕಾಂಗ್ರೆಸ್‌ ಶಾಸಕರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಬಜೆಟ್‌ ಪೂರ್ವಭಾವಿ ಸಭೆ ನಡೆಸಲಿದ್ದಾರೆ.

ಈ ವೇಳೆ ಎಸ್ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿಗಳಿಗೆ ಬಳಸದಂತೆ ಹಾಗೂ ಪರಿಶಿಷ್ಟ ಜಾತಿ ಜನರ ಅಭಿವೃದ್ಧಿಗೆ ಪ್ರತ್ಯೇಕ ಅನುದಾನ ಒದಗಿಸುವಂತೆ ಶಾಸಕರು ಮನವಿ ಮಾಡುವ ಸಾಧ್ಯತೆಯಿದೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ 2026-27ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ 2026-27ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ಹಮ್ಮಿಕೊಂಡಿದ್ದಾರೆ. 2025-26ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ 42,000 ಕೋಟಿ ರು. ಅನುದಾನ ಮೀಸಲಿಡಲಾಗಿತ್ತು. ಆದರೆ, ಇದರಲ್ಲಿ ಬಹುಪಾಲು ಹಣವನ್ನು ಪಂಚ ಗ್ಯಾರಂಟಿಗಳಿಗೆ ಬಳಕೆ ಮಾಡಿಕೊಳ್ಳಲಾಗಿದೆ.


ಇದರಿಂದ ಪರಿಶಿಷ್ಟರಿಗೆ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಸಿಗಬೇಕೆಂಬ ದೂರದೃಷ್ಟಿಯಿಂದ ನೀವು ತಂದಿರುವ ಎಸ್ಸಿಪಿ-ಟಿಎಸ್ಪಿ ಕಾಯ್ದೆ ಉದ್ದೇಶ ಈಡೇರದಂತಾಗುತ್ತಿದೆ ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡುವ ಸಾಧ್ಯತೆಯಿದೆ.

ಎಸ್ಸಿಪಿ-ಟಿಎಸ್‌ಪಿ ಹಣ ಅನ್ಯ ಉದ್ದೇಶಕ್ಕೆ

ಎಸ್ಸಿಪಿ-ಟಿಎಸ್‌ಪಿ ಹಣ ಅನ್ಯ ಉದ್ದೇಶಕ್ಕೆ ಬಳಕೆ ಮಾಡಿರುವ ಬಗ್ಗೆ ಬಿಜೆಪಿಯು ಧ್ವನಿ ಎತ್ತಿದೆ. 14,000 ಕೋಟಿ ರು.ಗಳಷ್ಟು ಹಣ ಗ್ಯಾರಂಟಿಗಳಿಗೆ ಬಳಕೆಯಾಗಿದೆ. ಇದು ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಕಾರಾತ್ಮಕ ಪರಿಣಾಮ ಬೀರಬಹುದು. ಹೀಗಾಗಿ ಈ ಬಜೆಟ್‌ನಲ್ಲಿ ಇದನ್ನು ಸರಿಪಡಿಸಿ ದಲಿತರಿಗೆ ನ್ಯಾಯ ಒದಗಿಸುವಂತೆ ಮನವಿ ಮಾಡಲಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಇತ್ತೀಚೆಗೆ ಡಾ.ಜಿ.ಪರಮೇಶ್ವರ್‌ ಅಧ್ಯಕ್ಷತೆಯಲ್ಲಿ ಸಭೆ ನಡೆಸಿದ್ದು, 30ಕ್ಕೂ ಹೆಚ್ಚು ಮಂದಿ ಸಚಿವರು, ಶಾಸಕರು ಭಾಗವಹಿಸಿದ್ದರು. ಈ ವೇಳೆ ಎಸ್ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿಗಳಿಗೆ ಬಳಕೆಯಾಗದಂತೆ ತಡೆಯಬೇಕು ಎಂಬ ನಿರ್ಧಾರ ಕೈಗೊಂಡಿದ್ದಾರೆ.

ಸೋಮವಾರ ಬೆಳಗ್ಗೆಯೂ ಪೂರ್ವಭಾವಿ ಚರ್ಚೆ ನಡೆಸಿ ಪರಮೇಶ್ವರ್‌ ನೇತೃತ್ವದಲ್ಲಿ ಚರ್ಚೆ ನಡೆಸಲಿದ್ದಾರೆ. ಬಳಿಕ ಸಂಜೆ ನಡೆಯಲಿರುವ ಮುಖ್ಯಮಂತ್ರಿಗಳ ನೇತೃತ್ವದ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ನೇತೃತ್ವದ ಪರಿಶಿಷ್ಟ ಜಾತಿಗೆ ಸೇರಿದ ಶಾಸಕರ ಸಭೆ ತೀವ್ರ ಕುತೂಹಲ ಕೆರಳಿಸಿದೆ.