ಪಾಲಿಕೆಗೆ ರಸ್ತೆಗುಂಡಿ ಮುಚ್ಚಲು 15 ದಿನ ಗಡುವು ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

| Published : Sep 02 2024, 09:52 AM IST

sn DK Shivakumar

ಸಾರಾಂಶ

ಮುಂದಿನ 15 ದಿನದಲ್ಲಿ ರಾಜಧಾನಿ ಬೆಂಗಳೂರಿನ ರಸ್ತೆಗಳನ್ನು ಗುಂಡಿ ಮುಕ್ತಗೊಳಿಸಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು : ಮುಂದಿನ 15 ದಿನದಲ್ಲಿ ರಾಜಧಾನಿ ಬೆಂಗಳೂರಿನ ರಸ್ತೆಗಳನ್ನು ಗುಂಡಿ ಮುಕ್ತಗೊಳಿಸಬೇಕೆಂದು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಸುರಿದ ಮಳೆಯಿಂದ ರಸ್ತೆ ಗುಂಡಿಗಳ ಸಂಖ್ಯೆ ಹೆಚ್ಚಾಗಿದ್ದು, ಈ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿವೆ. ಈ ಬಗ್ಗೆ ತುರ್ತು ಗಮನ ಹರಿಸಬೇಕು. ಈಗಾಗಲೇ ‘ರಸ್ತೆ ಗುಂಡಿ ಗಮನ’ ಆ್ಯಪ್‌ ಮೂಲಕ ಸಾರ್ವಜನಿಕರು ರಸ್ತೆ ಗುಂಡಿಗಳ ಫೋಟೋ ತೆಗೆದು ಅಪ್ ಲೋಡ್ ಮಾಡುವ ವ್ಯವಸ್ಥೆ ಮಾಡಲಾಗಿದೆ. ನಗರದ ಅನೇಕ ಕಡೆ ರಸ್ತೆ ಹಾಳಾಗಿರುವುದರ ಬಗ್ಗೆ ಸಹ ದೂರುಗಳು ಬರುತ್ತಿವೆ. ಮಳೆಗಾಲದ ಕಾರಣಕ್ಕೂ ರಸ್ತೆ ಗುಂಡಿಗಳು ಬೀಳುತ್ತಿರಬಹುದು. ಇದರ ಬಗ್ಗೆಯೂ ಬಿಬಿಎಂಪಿ ಆಯುಕ್ತರು ಹೆಚ್ಚು ಗಮನ ಹರಿಸಬೇಕು ಎಂದು ಡಿ.ಕೆ.ಶಿವಕುಮಾರ್‌ ಸೂಚಿಸಿದ್ದಾರೆ.

ರಸ್ತೆ ಗುಂಡಿಗಳನ್ನು ಮುಚ್ಚಲು ಗಡುವು ನೀಡಿರುವ 15 ದಿನಗಳ ನಂತರ ಇಡೀ ಬೆಂಗಳೂರು ನಗರವನ್ನು ಪ್ರದಕ್ಷಿಣೆ ಹಾಕಿ ಪ್ರತಿ ರಸ್ತೆಗಳನ್ನು ಪರಿಶೀಲನೆ ಮಾಡುತ್ತೇನೆ. ಅಷ್ಟರಲ್ಲಿ ಕೆಲಸ ಮುಗಿಸಿರಬೇಕು ಎಂದು ತಿಳಿಸಿದ್ದಾರೆ.