ಸಾರಾಂಶ
ವಿವಿಧ ಬೇಡಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಜೂ.24 ರಿಂದ ಮನೆ ಮನೆಯಿಂದ ಕಸ ಸಂಗ್ರಹಣೆ ಸ್ಥಗಿತಗೊಳಿಸಿ ಉಪವಾಸ ಸತ್ಯಾಗ್ರಹ ಆರಂಭಿಸಲು ಕಸ ಸಂಗ್ರಹಿಸುವ ಆಟೋ ಚಾಲಕರು ಮತ್ತು ಸಹಾಯಕರು ತೀರ್ಮಾನಿಸಿದ್ದಾರೆ.
ಬೆಂಗಳೂರು : ಕಸ ಸಂಗ್ರಹಿಸುವ ಆಟೋ ಚಾಲಕರು, ಸಹಾಯಕರನ್ನು ನೇರ ವೇತನ ಪಾವತಿಯಡಿ ನೇಮಕ ಮಾಡಿಕೊಳ್ಳಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಜೂ.24 ರಿಂದ ಮನೆ ಮನೆಯಿಂದ ಕಸ ಸಂಗ್ರಹಣೆ ಸ್ಥಗಿತಗೊಳಿಸಿ ಉಪವಾಸ ಸತ್ಯಾಗ್ರಹ ಆರಂಭಿಸಲು ಕಸ ಸಂಗ್ರಹಿಸುವ ಆಟೋ ಚಾಲಕರು ಮತ್ತು ಸಹಾಯಕರು ತೀರ್ಮಾನಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಗರದಲ್ಲಿ ಮನೆ ಮನೆಯಿಂದ ತ್ಯಾಜ್ಯ ಸಂಗ್ರಹಿಸುವ ಆಟೋ ಚಾಲಕರು ಮತ್ತು ಸಹಾಯಕರನ್ನು ನೇರ ವೇತನ ಪಾವತಿಗೆ ನೇಮಕ ಮಾಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದ್ದರು. ಆದರೆ, ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಕಂಪನಿ ನಗರದ ಕಸ ಸಂಗ್ರಹಣೆ ಮತ್ತು ವಿಲೇವಾರಿಗೆ ವಾರ್ಷಿಕ ಸುಮಾರು 530 ಕೋಟಿ ರು. ವೆಚ್ಚದಲ್ಲಿ ಟೆಂಡರ್ ಆಹ್ವಾನಿಸಲಾಗಿದೆ. ಈ ಮೂಲಕ ಮತ್ತೆ ಕಸದ ಆಟೋ, ಕಾಂಪ್ಯಾಕ್ಟರ್ ಚಾಲಕರು ಮತ್ತು ಸಹಾಯಕರನ್ನು ಗುತ್ತಿಗೆದಾರರ ಕೈಕೆಳಗೆ ತಳ್ಳುವ ಕೆಲಸ ಮಾಡಲಾಗುತ್ತಿದೆ. ಕೂಡಲೇ ಈ ಗುತ್ತಿಗೆ ರದ್ದು ಪಡಿಸಬೇಕು. ಕಸ ವಿಲೇವಾರಿಗೆ ಟೆಂಡರ್ ನಡೆಸಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.
ಜೂನ್ 24 ರಂದು ನಗರದಲ್ಲಿ ಮನೆ ಮನೆಯಿಂದ ಕಸ ಸಂಗ್ರಹಿಸುವ ಕಾರ್ಯ ಸ್ಥಗಿತಗೊಳಿಸಲಾಗುತ್ತಿದೆ. ಪ್ರತಿಭಟನೆಗೆ ರಾಜ್ಯದ ವಿವಿಧ ನಗರದಲ್ಲಿ ಕಸ ಸಂಗ್ರಹಿಸುವ ಆಟೋ ಚಾಲಕರು ಮತ್ತು ಸಹಾಯಕರು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ಸಂರಕ್ಷಣಾ ಟ್ರೇಡ್ ಯೂನಿಯನ್ ಅಧ್ಯಕ್ಷ ತ್ಯಾಗರಾಜ್ ಮಾಹಿತಿ ನೀಡಿದ್ದಾರೆ.