ನಗರದ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಸೆಂಟರ್‌ನಲ್ಲಿ ಅವಧಿ ಮೀರಿದ ಔಷಧಿಗಳು ಪತ್ತೆಯಾಗಿರುವ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ.ಲೋಕಾಯುಕ್ತ ಸಂಸ್ಥೆಯ ಜಿಲ್ಲಾ ನ್ಯಾಯಾಧೀಶರ ನೇತೃತ್ವದ ಲೋಕಾಯುಕ್ತ ಪೊಲೀಸರ ವಿಶೇಷ ತಂಡವು ಆಸ್ಪತ್ರೆಗೆ ಅನಿರೀಕ್ಷಿತ ನೀಡಿ ತಪಾಸಣೆ

ಬೆಂಗಳೂರು : ನಗರದ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಸೆಂಟರ್‌ನಲ್ಲಿ ಅವಧಿ ಮೀರಿದ ಔಷಧಿಗಳು ಪತ್ತೆಯಾಗಿರುವ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ.

ಲೋಕಾಯುಕ್ತ ಸಂಸ್ಥೆಯ ಜಿಲ್ಲಾ ನ್ಯಾಯಾಧೀಶರ ನೇತೃತ್ವದ ಲೋಕಾಯುಕ್ತ ಪೊಲೀಸರ ವಿಶೇಷ ತಂಡವು ಆಸ್ಪತ್ರೆಗೆ ಅನಿರೀಕ್ಷಿತ ನೀಡಿ ತಪಾಸಣೆ ನಡೆಸಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್‌ ಅವರಿಗೆ ಸಲ್ಲಿಸಿರುವ ತನಿಖಾ ವರದಿಯಲ್ಲಿ ಈ ಆತಂಕಕಾರಿ ವಿಚಾರ ಬಯಲಾಗಿದೆ.

ವಿಕ್ಟೋರಿಯಾ ಆಸ್ಪತ್ರೆಗಳ ಸೌಲಭ್ಯಗಳ ಕೊರತೆ, ಲೋಷದೋಷಗಳು ಹಾಗೂ ಖಾಸಗಿ ಆ್ಯಂಬುಲೆನ್ಸ್‌ ಚಾಲಕರು ಮತ್ತು ಮಧ್ಯವರ್ತಿಗಳ ಹಾವಳಿ ಬಗ್ಗೆ ಬಂದ ದೂರುಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌.ಪಾಟೀಲ್‌ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲು ಸೂಚಿಸಿದ್ದರು. ಅದರಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ, ಸಂಬಂಧಿತ ಅಧಿಕಾರಿಗಳಿಗೆ ಸ್ಪಷ್ಟನೆ ಕೇಳಿ ನೋಟಿಸ್‌ ನೀಡಲಾಗಿತ್ತು.

ಈ ಪ್ರಕರಣ ಸಂಬಂಧ ಕಳೆದ ಫೆ.6ರಂದು ನಡೆದ ವಿಚಾರಣೆ ವೇಳೆ ವಿಕ್ಟೋರಿಯಾ ಟ್ರಾಮಾ ಮತ್ತು ತುರ್ತು ಚಿಕಿತ್ಸಾ ಕೇಂದ್ರ ವಿಶೇಷಾಧಿಕಾರಿ ಡಾ.ಅಸೀಮಾ ಬಾನು, ‘ಈ ಖಾಸಗಿ ಆ್ಯಂಬುಲೆನ್ಸ್‌ ಹಾಗೂ ಮಧ್ಯವರ್ತಿಗಳ ಸಮಸ್ಯೆ ನಿಯಂತ್ರಣ ಕಷ್ಟವಾಗಿದೆ. ಆಸ್ಪತ್ರೆಯಲ್ಲಿ ಹಾಸಿಗೆಗಳ ಕೊರತೆಯಿದೆ. ಹೀಗಾಗಿ ಮಧ್ಯವರ್ತಿಗಳು ಹಾಗೂ ಆ್ಯಂಬುಲೆನ್ಸ್ ಸಿಬ್ಬಂದಿ ರೋಗಿಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ. ಅಂತೆಯೆ ಅವರು, ವೈದ್ಯರು ಮತ್ತು ಆಸ್ಪತ್ರೆಯ ಅಧಿಕಾರಿಗಳ ಮೇಲೆ ದಾಳಿ ನಡೆಸಿರುವ ಘಟನೆಗಳೂ ಜರುಗಿವೆ’ ಎಂದು ಹೇಳಿದ್ದರು.

ಈ ನಡುವೆ ಪರಿಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಲೋಕಾಯುಕ್ತ ಸಂಸ್ಥೆಯ ಜಿಲ್ಲಾ ನ್ಯಾಯಾಧೀಶರ ನೇತೃತ್ವದಲ್ಲಿ ಲೋಕಾಯುಕ್ತ ಪೊಲೀಸರ ವಿಶೇಷ ತಂಡ ರಚಿಸಲಾಗಿತ್ತು. ಲೋಕಾಯುಕ್ತರ ಸೂಚನೆ ಮೇರೆಗೆ ಈ ವಿಶೇಷ ತಂಡವು ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ ತಪಾಸಣೆ ಮಾಡಿದಾಗ ಹಲವು ಲೋಪದೋಷಗಳು ಬೆಳಕಿಗೆ ಬಂದಿವೆ.

ವೆಂಟಿಲೇಟರ್‌ಗಳು ಕೆಲಸ ಮಾಡ್ತಿಲ್ಲ:

ಆಸ್ಪತ್ರೆಯ ಸಿಐಯುನಲ್ಲಿ ಅವಧಿ ಮೀರಿದ ಔಷಧಿಗಳ ಪತ್ತೆಯ ಜೊತೆಗೆ ಸಿಐಯು ಘಟಕದಲ್ಲಿನ ಆರು ಹಾಸಿಗೆಗಳು ಖಾಲಿ ಇದ್ದರೂ ಖಾಲಿ ಇಲ್ಲ ಎಂದು ರೋಗಿಗಳನ್ನು ವಾಪಾಸ್‌ ಕಳುಹಿಸಿರುವುದು ತನಿಖಾ ವರದಿಯಲ್ಲಿ ಬೆಳಕಿಗೆ ಬಂದಿದೆ. ವಿಚಾರಣೆ ವೇಳೆ ಆಸ್ಪತ್ರೆಯ ಟ್ರಾಮಾ ಕೇಂದ್ರದ ವಿಶೇಷಾಧಿಕಾರಿ ಡಾ.ಅಸೀಮಾ ಬಾನು, ‘ಸಿಐಯುನಲ್ಲಿನ ಆರು ಹಾಸಿಗೆಗಳ ವೆಂಟಿಲೇಟರ್‌ಗಳು ಕೆಲಸ ಮಾಡುತ್ತಿಲ್ಲ. ಹೀಗಾಗಿ ರೋಗಿಗಳನ್ನು ವಾಪಾಸ್‌ ಕಳುಹಿಸಲಾಗಿದೆ’ ಎಂದು ಹೇಳಿದ್ದಾರೆ.

ಅವಧಿ ಮೀರಿದ ಔಷಧಿ ಬಗ್ಗೆ ಗಂಭೀರ ಪರಿಗಣನೆ:

ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌.ಪಾಟೀಲ್‌ ಅವರು, ರಾಜ್ಯ ಸರ್ಕಾರವು ಖಾಸಗಿ ಆ್ಯಂಬುಲೆನ್ಸ್‌ಗಳ ನಿಯಂತ್ರಿಸಲು ಹಾಗೂ ಪ್ರೀಪೇಯ್ಡ್‌ ಆ್ಯಂಬುಲೆನ್ಸ್‌ ಸೇವೆ ಆರಂಭಿಸಲು ಕ್ರಮ ಕೈಗೊಳ್ಳಬೇಕು. ಈ ಸಂಬಂಧ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡುವಂತೆ ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ನಿರ್ದೇಶಕರಿಗೆ ಸೂಚಿಸಿದ್ದಾರೆ. ಸಿಐಯು ಘಟಕದಲ್ಲಿ ಅವಧಿ ಮೀರಿದ ಔಷಧಿಗಳ ಬಳಕೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಏ.27ಕ್ಕೆ ಮುಂದೂಡಿದ್ದಾರೆ ಎಂದು ಲೋಕಾಯುಕ್ತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.