ಮಳೆಹಾನಿ: ತುರ್ತು ಪರಿಹಾರಕ್ಕೆ 1000 ಕೋಟಿ ಕೊಡಿ: ಅಶೋಕ್‌

| N/A | Published : May 29 2025, 08:08 AM IST

R Ashoka

ಸಾರಾಂಶ

ಮಳೆಪೀಡಿತ ಪ್ರದೇಶಗಳಲ್ಲಿ ಭೂ ಕುಸಿತ ಹಾಗೂ ಹಾನಿಗೊಳಗಾಗದವರಿಗೆ ತುರ್ತು ಪರಿಹಾರಕ್ಕೆ ತಕ್ಷಣ ಒಂದು ಸಾವಿರ ಕೋಟಿ ರು. ಅನುದಾನ ಬಿಡುಗಡೆಗೊಳಿಸಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.

 ಬೆಂಗಳೂರು : ಮಳೆಪೀಡಿತ ಪ್ರದೇಶಗಳಲ್ಲಿ ಭೂ ಕುಸಿತ ಹಾಗೂ ಹಾನಿಗೊಳಗಾಗದವರಿಗೆ ತುರ್ತು ಪರಿಹಾರಕ್ಕೆ ತಕ್ಷಣ ಒಂದು ಸಾವಿರ ಕೋಟಿ ರು. ಅನುದಾನ ಬಿಡುಗಡೆಗೊಳಿಸಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.

ಈ ಸಂಬಂಧ ಅವರು ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಕಳೆದ ಐವತ್ತು ವರ್ಷಗಳ ನಂತರ ಈ ವರ್ಷ ಮುಂಗಾರು ಹದಿನೈದು ದಿನ ಮುಂಚಿತವಾಗಿ ರಾಜ್ಯವನ್ನು ಪ್ರವೇಶಿಸಿದೆ. ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಭಾರಿ ಬಿರುಗಾಳಿ, ಮಳೆ ಆಗಿದೆ. ಇದರಿಂದಾಗಿ ಸರ್ಕಾರಿ ಮತ್ತು ಸಾರ್ವಜನಿಕ ಆಸ್ತಿ ಮಾತ್ರವಲ್ಲದೆ ರೈತರು ಬೆಳೆದ ಹಣ್ಣು ಹಾಗೂ ತರಕಾರಿ ಸೇರಿ ಹಲವು ಬೆಳೆಗಳು ನಾಶವಾಗಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಮಲೆನಾಡು ಭಾಗದಲ್ಲಿ ಅಲ್ಲಲ್ಲಿ ಭೂ ಕುಸಿತ ಸಂಭವಿಸಿದೆ ಎಂದು ತಿಳಿಸಿದ್ದಾರೆ.

ಹಾಸನ ಜಿಲ್ಲೆಯ ಪ್ರವಾಸ ನಡೆಸಿ ಮಳೆ ಹಾನಿ ಮತ್ತು ಭೂ ಕುಸಿತ ಸಂಭವಿಸಿದ್ದ ಸಕಲೇಶಪುರ ತಾಲೂಕಿನ ಅನೇಕ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಇಷ್ಟೆಲ್ಲ ಪ್ರಕೃತಿ ವಿಕೋಪ ಸಂಭವಿಸಿ ಸಂತ್ರಸ್ತರು ಕಣ್ಣೀರು ಹಾಕುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳು ಸಂತ್ರಸ್ತರ ಬಳಿಗೆ ಹೋಗಿಯೇ ಇಲ್ಲ ಎಂದು ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read more Articles on