ಜನಿವಾರ ತೆಗಯದ ವಿದ್ಯಾರ್ಥಿಗೆ ಉಚಿತ ಬಿಇ ಸೀಟು : ಮನೆಗೆ ಸಚಿವ ಈಶ್ವರ ಖಂಡ್ರೆ ಭೇಟಿ

| N/A | Published : Apr 21 2025, 09:34 AM IST

Eshwar Khandre

ಸಾರಾಂಶ

ಜನಿವಾರ ತೆಗೆಯದ ಕಾರಣಕ್ಕೆ ಸಿಇಟಿ ಗಣಿತ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿ ಸುಚಿವ್ರತ್‌ ಕುಲಕರ್ಣಿಗೆ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಪ್ರವೇಶ ನೀಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ.

ಬೀದರ್‌ : ಜನಿವಾರ ತೆಗೆಯದ ಕಾರಣಕ್ಕೆ ಸಿಇಟಿ ಗಣಿತ ಪರೀಕ್ಷೆ ಬರೆಯಲು ಸಾಧ್ಯವಾಗದ ವಿದ್ಯಾರ್ಥಿ ಸುಚಿವ್ರತ್‌ ಕುಲಕರ್ಣಿಗೆ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಪ್ರವೇಶ ನೀಡುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದ್ದಾರೆ.

ಭಾನುವಾರ ಬೆಳಗ್ಗೆ ಸಚಿವ ರಹೀಮ್‌ ಖಾನ್‌ ಜೊತೆಯಲ್ಲಿ ಅವರು ವಿದ್ಯಾರ್ಥಿ ಸುಚಿವ್ರತ್‌ ಮನೆಗೆ ಭೇಟಿ ನೀಡಿ, ವಿದ್ಯಾರ್ಥಿ ಹಾಗೂ ಕುಟುಂಬದ ಸದಸ್ಯರಿಗೆ ಆತ್ಮಸ್ಥೈರ್ಯ ತುಂಬಿದರು. ಖಾಸಗಿ ಕಾಲೇಜಿನ ಸಿಬ್ಬಂದಿಯಿಂದ ಇಂತಹ ಲೋಪವಾಗಿದೆ. ಇದು ನೋವಿನ ಸಂಗತಿ. ಇನ್ನು ಮುಂದೆ ಇಂತಹ ಘಟನೆ ಮರುಕಳಿಸದಂತೆ ಎಚ್ಚರ ವಹಿಸಲು ಸೂಚಿಸಲಾಗಿದೆ. ಈ ಬಗ್ಗೆ ನನ್ನ ಗಮನಕ್ಕೆ ಬಂದ ಕೂಡಲೇ ತನಿಖೆ ನಡೆಸಿ 24 ಗಂಟೆಯೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದೆ. ವರದಿ ಆಧಾರದ ಮೇಲೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದರು.

ವಿದ್ಯಾರ್ಥಿಯ ಶೈಕ್ಷಣಿಕ ಭವಿಷ್ಯಕ್ಕೆ ತೊಂದರೆ ಆಗಬಾರದು ಎನ್ನುವುದು ನಮ್ಮೆಲ್ಲರ ಭಾವನೆ. ಹೀಗಾಗಿ, ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ಉಚಿತ ಸೀಟ್‌ ನೀಡುವುದಾಗಿ ಭರವಸೆ ನೀಡಿದರು. ಸುಚಿವ್ರತ್‌ಗೆ ಪ್ರತ್ಯೇಕವಾಗಿ ಪರೀಕ್ಷೆ ನಡೆಸಲು ಅವಕಾಶವಿದೆಯೇ ಎಂಬ ಸಾಧ್ಯತೆಗಳ ಬಗ್ಗೆ ಪರಿಶೀಲಿಸಲಾಗುತ್ತಿದ್ದು, ಈ ಬಗ್ಗೆ ಉನ್ನತ ಶಿಕ್ಷಣ ಸಚಿವರೊಂದಿಗೆ ಮಾತನಾಡಲಾಗುವುದು. ವಿದ್ಯಾರ್ಥಿಗೆ ಕಾಮಡ್-ಕೆ ಪರೀಕ್ಷೆ ಬರೆಯಲು ಅವಕಾಶವಿದೆ. ಆ ಸೀಟು ಲಭಿಸಿದರೂ ನೆರವು ನೀಡಲಾಗುವುದು, ಸರ್ಕಾರ ನೊಂದ ವಿದ್ಯಾರ್ಥಿ ಮತ್ತು ಕುಟುಂಬದ ಸದಸ್ಯರೊಂದಿಗಿದೆ ಎಂದರು.