ವಿಧಾನಸೌಧ, ವಿಕಾಸಸೌಧ ಸೇರಿ ಸರ್ಕಾರದ ಎಲ್ಲಾ ಕಚೇರಿಗಳಲ್ಲಿ ನೀರು ಮತ್ತು ವಿದ್ಯುತ್ ಬಳಕೆಯಲ್ಲಿ ಕಟ್ಟುನಿಟ್ಟಿನ ಮಿತವ್ಯಯ ಸಾಧಿಸಲು ಹಾಗೂ ಅನಗತ್ಯ ಪೋಲು ತಡೆಗಟ್ಟಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ನಿರ್ದೇಶನ ನೀಡಿದ್ದಾರೆ.
ಬೆಂಗಳೂರು : ವಿಧಾನಸೌಧ, ವಿಕಾಸಸೌಧ ಸೇರಿ ಸರ್ಕಾರದ ಎಲ್ಲಾ ಕಚೇರಿಗಳಲ್ಲಿ ನೀರು ಮತ್ತು ವಿದ್ಯುತ್ ಬಳಕೆಯಲ್ಲಿ ಕಟ್ಟುನಿಟ್ಟಿನ ಮಿತವ್ಯಯ ಸಾಧಿಸಲು ಹಾಗೂ ಅನಗತ್ಯ ಪೋಲು ತಡೆಗಟ್ಟಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ನಿರ್ದೇಶನ ನೀಡಿದ್ದಾರೆ.
ಎಲ್ನಿನೊದಿಂದ ರಾಜ್ಯದಲ್ಲಿ ಮಳೆ ಕೊರತೆ ಉಂಟಾಗುತ್ತಿದ್ದು, ಇಂಥ ಪರಿಸ್ಥಿತಿಯಲ್ಲಿ ವಿದ್ಯುತ್ ಮತ್ತು ನೀರಿನಂತಹ ಅತ್ಯಮೂಲ್ಯ ಸಂಪನ್ಮೂಲ ಅಪವ್ಯಯ ಮಾಡಬಾರದು.
ಸರ್ಕಾರಿ ಕಚೇರಿಗಳಲ್ಲಿ ಕಚೇರಿ ಸಮಯ ಮುಗಿದ ನಂತರವೂ ವಿದ್ಯುತ್ ದೀಪ, ಫ್ಯಾನ್, ಕಂಪ್ಯೂಟರ್ ಹಾಗೂ ಹವಾನಿಯಂತ್ರಣದಂಥ (ಎಸಿ) ವಿದ್ಯುತ್ ಉಪಕರಣಗಳನ್ನು ಆಫ್ ಮಾಡದೆ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ನಿರ್ದೇಶನ ನೀಡುತ್ತಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಮುಖ ನಿರ್ದೇಶನಗಳೇನು?:
ಕಚೇರಿಗಳಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ನೈಸರ್ಗಿಕ ಬೆಳಕು ಬಳಸಬೇಕು. ಕಚೇರಿಗಳ ಕಿಟಕಿಗಳನ್ನು ಪೂರ್ತಿ ತೆರೆದಿಟ್ಟು, ಅಗತ್ಯವಿದ್ದಾಗ ಮಾತ್ರ ದೀಪ ಮತ್ತು ಫ್ಯಾನ್ಗಳನ್ನು ಆನ್ ಮಾಡಬೇಕು.
ಸಂಜೆ 6ರ ನಂತರ ಕಠಿಣ ನಿಗಾ:
ವಿಧಾನಸೌಧ, ವಿಕಾಸಸೌಧದ ಪ್ರತಿ ಮಹಡಿಯ ಕಾವಲುಗಾರರು ಮತ್ತು ಭದ್ರತಾ ಸಿಬ್ಬಂದಿ ಸಂಜೆ 6 ಗಂಟೆ ನಂತರ ಅನಗತ್ಯ ವಿದ್ಯುತ್ ದೀಪಗಳನ್ನು ನಂದಿಸಲಾಗಿದೆಯೇ ಎಂದು ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು.
ಕಡ್ಡಾಯವಾಗಿ ಸ್ವಿಚ್ ಆಫ್ ಮಾಡಬೇಕು:
ಸಚಿವರು ಮತ್ತು ಅಧಿಕಾರಿಗಳು ಕೊಠಡಿಯಲ್ಲಿ ಇಲ್ಲದ ಸಮಯದಲ್ಲಿ ಹಾಗೂ ಕಚೇರಿ ವೇಳೆ ಮುಕ್ತಾಯವಾದ ನಂತರ ವಿದ್ಯುತ್ ಸಂಪರ್ಕದ ಎಲ್ಲಾ ಸ್ವಿಚ್ಗಳನ್ನು ಕಡ್ಡಾಯವಾಗಿ ಆಫ್ ಮಾಡಬೇಕು. ಕಚೇರಿಗೆ ಬೀಗ ಹಾಕುವ ಮುನ್ನ ಇದನ್ನು ಖಚಿತಪಡಿಸಿಕೊಳ್ಳುವ ಜವಾಬ್ದಾರಿ ಆಪ್ತ ಕಾರ್ಯದರ್ಶಿಗಳು ಮತ್ತು ಭದ್ರತಾ ಸಿಬ್ಬಂದಿಯದ್ದಾಗಿರುತ್ತದೆ.
ಎಸಿ 24-26°C ತಾಪಮಾನದಲ್ಲಿರಬೇಕು:
ಅಧಿಕಾರಿಗಳ ಕಚೇರಿಗಳಲ್ಲಿನ ಏರ್ ಕಂಡಿಷನರ್ಗಳನ್ನು (ಎಸಿ) ಕಡ್ಡಾಯವಾಗಿ 24-26°C ತಾಪಮಾನದಲ್ಲೇ ಬಳಸಬೇಕು. ಸಾಂಪ್ರದಾಯಿಕ ದೀಪಗಳ ಬದಲಿಗೆ ಎಲ್ಇಡಿ ಅಳವಡಿಸಬೇಕು. ಕಾರಿಡಾರ್, ವಿಶ್ರಾಂತಿ ಕೊಠಡಿ ಮತ್ತು ಸಭಾಂಗಣಗಳಲ್ಲಿ ಚಲನಶೀಲ ಸಂವೇದಕಗಳನ್ನು (ಮೋಷನ್ ಸೆನ್ಸಾರ್ಸ್) ಅಳವಡಿಸಬೇಕು ಎಂದು ಶಾಲಿನಿ ರಜನೀಶ್ ತಿಳಿಸಿದ್ದಾರೆ.
ನೀರು ಪೋಲು ಮಾಡಬಾರದು:
ಶೌಚಾಲಯ ಹಾಗೂ ಕಚೇರಿಗಳಲ್ಲಿ ಅಗತ್ಯವಿಲ್ಲದಾಗ ನಲ್ಲಿಗಳನ್ನು ಕಡ್ಡಾಯವಾಗಿ ಬಂದ್ ಮಾಡಬೇಕು. ನೀರಿನ ಹರಿವು ಕಡಿಮೆ ಮಾಡಲು ವಾಟರ್ ಏರೇಟರ್ಗಳನ್ನು ಅಳವಡಿಸಬೇಕು. ನಲ್ಲಿಗಳಲ್ಲಿ ಸೋರಿಕೆಯಿದ್ದರೆ ತಕ್ಷಣ ಲೋಕೋಪಯೋಗಿ ಇಲಾಖೆ ಗಮನಕ್ಕೆ ತರಬೇಕು ಎಂದು ನಿರ್ದೇಶನ ನೀಡಲಾಗಿದೆ.
