ಕೆಪಿಎಸ್ಸಿ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ ಬೆನ್ನಲ್ಲೇ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆಯಾಗಿದ್ದಾರೆ ಎಂದು ಬಿಂಬಿಸಲಾಗಿತ್ತು.
ಬೆಂಗಳೂರು : ಕೆಪಿಎಸ್ಸಿ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ ಬೆನ್ನಲ್ಲೇ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢವಾಗಿ ನಾಪತ್ತೆಯಾಗಿದ್ದಾರೆ ಎಂದು ಬಿಂಬಿಸಲಾಗಿತ್ತು. ಆದರೆ ಜ್ಞಾನೇಂದ್ರ ಕುಮಾರ್ ಸಂಪರ್ಕಕ್ಕೆ ಸಿಕ್ಕಿದ್ದು, ಸುರಕ್ಷಿತವಾಗಿದ್ದಾರೆ ಅವರು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ ಸಂಬಂಧ ಇ.ಡಿ. ದಾಳಿ ಬೆನ್ನಲ್ಲೇ ಸೂಕ್ಷ್ಮ ಹಾಗೂ ಸಣ್ಣ ಉದ್ಯಮ (ಎಂಎಸ್ಎಂಇ) ವ್ಯವಸ್ಥಾಪಕ ನಿರ್ದೇಶಕ ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿದ್ದಾರೆ ಎನ್ನಲಾದ ವಿಚಾರ ಶನಿವಾರ ಇಡೀ ದಿನ ಹೈಡ್ರಾಮಕ್ಕೆ ಕಾರಣವಾಯಿತು.
ಪರೀಕ್ಷಾ ನಿಯಂತ್ರಕರಾಗಿದ್ದರು:
ಪಶುವೈದ್ಯಾಧಿಕಾರಿ ಪರೀಕ್ಷೆ ನಡೆದ ವೇಳೆ ಜ್ಞಾನೇಂದ್ರ ಕುಮಾರ್ ಕೆಪಿಎಸ್ಸಿ ಪರೀಕ್ಷಾ ನಿಯಂತ್ರಕರಾಗಿದ್ದರು. ಹೀಗಾಗಿ ಇ.ಡಿ ಮತ್ತು ಸಿಐಡಿ ಅಧಿಕಾರಿಗಳು ಅವರ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಇದರಿಂದಾಗಿ ಜ್ಞಾನೇಂದ್ರ ಕುಮಾರ್ ಮೂರು ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡು ರಾಜ್ಯ ತೊರೆದಿದ್ದಾರೆ ಎಂಬ ವದಂತಿ ಹರಿದಾಡತೊಡಗಿತ್ತು.
ಈ ಮಧ್ಯೆ ಶನಿವಾರ ರಾತ್ರಿ ವೇಳೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ, ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಜ್ಞಾನೇಂದ್ರ ಕುಮಾರ್ ಮಾತನಾಡಿದ್ದಾರೆ. ಕುಟುಂಬದಲ್ಲಿ ಎದುರಾದ ತುರ್ತು ಪರಿಸ್ಥಿತಿಯಿಂದಾಗಿ ರಜೆ ಪಡೆದು ತರಾತುರಿಯಲ್ಲಿ ಸ್ವಂತ ಊರಿಗೆ ಪ್ರಯಾಣ ಬೆಳೆಸಿದ್ದಾಗಿ ಹೇಳಿಕೊಂಡಿದ್ದಾರೆ. ನಾನು ಸುರಕ್ಷಿತವಾಗಿದ್ದೇನೆ ಎಂದೂ ತಿಳಿಸಿರುವುದಾಗಿ ಖರ್ಗೆ ಪೋಸ್ಟ್ನಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ನಾಪತ್ತೆ ಆಗಿರುವ ವದಂತಿಗೆ ತೆರೆ ಎಳೆದರು.
ಐಎಎಸ್ ಅಧಿಕಾರಿ ನಾಪತ್ತೆಯಾಗಿಲ್ಲ: ಪ್ರಿಯಾಂಕ್ ಖರ್ಗೆ
‘ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಆಗಿಲ್ಲ. ಅವರ ತಂದೆಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಅವರನ್ನು ನೋಡಲು ಊರಿಗೆ ಹೋಗಿದ್ದಾರೆ. ಈ ಬಗ್ಗೆ ತಮ್ಮ ಮೇಲಧಿಕಾರಿಗೆ ಮಾಹಿತಿ ನೀಡಿದ್ದಾರೆ’ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟಪಡಿಸಿದ್ದಾರೆ.
ಪಶುವೈದ್ಯಧಾರಿ ಪರೀಕ್ಷೆ ಅಕ್ರಮ ಸಂಬಂಧ ಕೆಪಿಎಸ್ಸಿ ಕಚೇರಿ ಸೇರಿ ಹಲವು ಕಡೆ ಇ.ಡಿ. ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಪರೀಕ್ಷೆ ಕಂಟ್ರೋಲರ್ ಆಗಿ ಕೆಲಸ ಮಾಡಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.
ಈ ಬಗ್ಗೆ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ಪ್ರಿಯಾಂಕ್ ಖರ್ಗೆ, ‘ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿಲ್ಲ. ಅವರ ತಂದೆಗೆ ಹೃದಯ ಕಾಯಿಲೆ ವಿಚಾರ ತಿಳಿದು ತುರ್ತಾಗಿ ಉತ್ತರ ಪ್ರದೇಶಕ್ಕೆ ಹೋಗಿದ್ದಾರೆ. ಹೋಗುವಾಗ ಮೇಲ್ ಮೂಲಕ ತಮ್ಮ ಮೇಲಧಿಕಾರಿಗೆ ತಿಳಿಸಿದ್ದಾರೆ. ಆದರೆ ಶುಕ್ರವಾರ ಹಬ್ಬ ಇದ್ದ ಕಾರಣ ಅವರು ನೋಡಿಕೊಂಡಿಲ್ಲ. ಇನ್ನು ಎರಡು ದಿನದಲ್ಲಿ ಅವರು ಬೆಂಗಳೂರಿಗೆ ವಾಪಸ್ ಬರಲಿದ್ದಾರೆ. ಯಾವುದೇ ಐಟಿ, ಇ.ಡಿ ಭಯದಿಂದ ಅವರು ನಾಪತ್ತೆಯಾಗಿಲ್ಲ ಎಂದು ಹೇಳಿದ್ದಾರೆ.

