ಸಾರಾಂಶ
ಕರ್ತವ್ಯದ ವೇಳೆ ಮಾರ್ಗಮಧ್ಯೆ ಸಾರಿಗೆ ಬಸ್ ನಿಲ್ಲಿಸಿ ನಿರ್ವಾಹಕ ನಮಾಜ್ ಮಾಡಿದ ಘಟನೆಗೆ ಸಂಬಂಧಿಸಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.
ಬೆಂಗಳೂರು : ಕರ್ತವ್ಯದ ವೇಳೆ ಮಾರ್ಗಮಧ್ಯೆ ಸಾರಿಗೆ ಬಸ್ ನಿಲ್ಲಿಸಿ ನಿರ್ವಾಹಕ ನಮಾಜ್ ಮಾಡಿದ ಘಟನೆಗೆ ಸಂಬಂಧಿಸಿ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.
ಏ.29ರಂದು ಹುಬ್ಬಳ್ಳಿಯಿಂದ ಹಾವೇರಿ ನಡುವಿನ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಸ್ನ ಚಾಲಕ ಕಂ ನಿರ್ವಾಹಕ ಮಾರ್ಗಮಧ್ಯೆ ಬಸ್ ನಿಲ್ಲಿಸಿ ನಮಾಜ್ ಮಾಡಿರುವ ಕುರಿತು ವರದಿಯಾಗಿದೆ. ಪ್ರತಿ ವ್ಯಕ್ತಿಗೂ ಧಾರ್ಮಿಕ ಸ್ವಾತಂತ್ರ್ಯದ ಹಕ್ಕಿದೆ.
ಆದರೆ, ಸಾರ್ವಜನಿಕ ಸೇವೆಯಲ್ಲಿರುವವರು ಕರ್ತವ್ಯ ವೇಳೆ ಹೊರತುಪಡಿಸಿ ತಮ್ಮ ಧರ್ಮವನ್ನು ಪಾಲಿಸಬಹುದಾಗಿದೆ. ಹೀಗಾಗಿ ಕರ್ತವ್ಯದ ಸಮಯದಲ್ಲಿ ಮಾರ್ಗ ಮಧ್ಯೆ ಬಸ್ ನಿಲ್ಲಿಸಿ ನಮಾಜ್ ಆಕ್ಷೇಪಾರ್ಹ. ಈ ವಿಡಿಯೋಗೆ ಸಂಬಂಧಿಸಿ ಸೂಕ್ತ ತನಿಖೆ ನಡೆಸಿ, ಸಿಬ್ಬಂದಿ ತಪ್ಪು ಮಾಡಿದ್ದರೆ ಶಿಸ್ತು ಕ್ರಮ ಕೈಗೊಳ್ಳುವಂತೆ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ. ಅಲ್ಲದೆ, ಇನ್ನು ಮುಂದೆ ಈ ರೀತಿಯ ಘಟನೆ ಮರುಕಳಿಸದಂತೆ ಎಚ್ಚರವಹಿಸಬೇಕು ಎಂದೂ ತಿಳಿಸಿದ್ದಾರೆ.