ಸಾರಾಂಶ
ಗೌರಿ ಮತ್ತು ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ರಾಜ್ಯದ ವಿವಿಧ ನಗರಗಳಿಗೆ ತೆರಳುವ ಜನರ ಸಂಖ್ಯೆ ಹೆಚ್ಚಿರುವ ಕಾರಣ ಕೆಎಸ್ಆರ್ಟಿಸಿಯು 1500 ಹೆಚ್ಚುವರಿ ವಿಶೇಷ ಬಸ್ ಸೇವೆಗಳನ್ನು ಆರಂಭಿಸುವುದಾಗಿ ತಿಳಿಸಿದೆ.
ಬೆಂಗಳೂರು : ಗೌರಿ ಮತ್ತು ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ರಾಜ್ಯದ ವಿವಿಧ ನಗರಗಳಿಗೆ ತೆರಳುವ ಜನರ ಸಂಖ್ಯೆ ಹೆಚ್ಚಿರುವ ಕಾರಣ ಕೆಎಸ್ಆರ್ಟಿಸಿಯು 1500 ಹೆಚ್ಚುವರಿ ವಿಶೇಷ ಬಸ್ ಸೇವೆಗಳನ್ನು ಆರಂಭಿಸುವುದಾಗಿ ತಿಳಿಸಿದೆ.
ಹೆಚ್ಚುವರಿ ಬಸ್ಸುಗಳು ಆ.25 ಮತ್ತು 26ರಿಂದ ಬೆಂಗಳೂರಿನ ವಿವಿಧ ಕಡೆಗಳಿಂದ ರಾಜ್ಯ ಮತ್ತು ಹೊರರಾಜ್ಯಗಳ ನಿಗದಿತ ಸ್ಥಳಗಳಿಗೆ ಸೇವೆ ನೀಡಲಿವೆ. ಹಾಗೆಯೇ, ಆ.27 ಮತ್ತು ಆ.31ರಂದು ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ಕಾರ್ಯಾಚರಣೆ ಮಾಡಲಾಗುತ್ತದೆ. ಈ ಬಸ್ಗಳಿಗೆ ಪ್ರಯಾಣಿಕರು www.ksrtc.karnataka.gov.inನಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸಿಕೊಳ್ಳಬಹುದಾಗಿದೆ. ನಾಲ್ಕು ಅಥವಾ ಹೆಚ್ಚಿನ ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಿದರೆ ಶೇ.5ರಷ್ಟು ರಿಯಾಯಿತಿ ನೀಡಲಾಗುತ್ತದೆ. ಹಾಗೆಯೇ, ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್ನ್ನು ಒಟ್ಟಿಗೆ ಕಾಯ್ದಿರಿಸಿದರೆ ಟಿಕೆಟ್ ದರದ ಶೇ.10ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಕೆಎಸ್ಸಾರ್ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಎಲ್ಲೆಲ್ಲಿಂದ ಎಲ್ಲಿಗೆ?
ಕೆಂಪೇಗೌಡ ಬಸ್ ನಿಲ್ದಾಣ ಮೆಜೆಸ್ಟಿಕ್ನಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಮಂಗಳೂರು, ಉಡುಪಿ, ಕುಂದಾಪುರ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ದಾವಣಗೆರೆ, ಕಾರವಾರ, ಗೋಕರ್ಣ, ಶಿರಸಿ, ರಾಯಚೂರು, ಕಲಬುರಗಿ, ಕೊಪ್ಪಳ, ಯಾದಗಿರಿ, ಬೀದರ, ತಿರುಪತಿ, ವಿಜಯವಾಡ ಮತ್ತು ಹೈದರಾಬಾದ್ಗಳಿಗೆ.
ಮೈಸೂರು ರಸ್ತೆ ಸ್ಯಾಟಲೈಟ್ ಬಸ್ ನಿಲ್ದಾಣದಿಂದ, ಮೈಸೂರು, ಹುಣಸೂರು, ಚಾಮರಾಜನಗರ, ಮಡಿಕೇರಿ, ವಿರಾಜಪೇಟೆ, ಪಿರಿಯಾಪಟ್ಟಣ ಮತ್ತು ಕುಶಾಲನಗರಗಳಿಗೆ.
ಶಾಂತಿನಗರ ಬಸ್ ನಿಲ್ದಾಣದಿಂದ ಮದುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರು, ತಿರುಚಿರಾಪಲ್ಲಿ, ಪಾಲಕ್ಕಾಡ್, ತ್ರಿಶೂರ್, ಎರ್ನಾಕುಲಂ, ಕಲ್ಲಿಕೋಟೆ ಮತ್ತು ಕೇರಳ ಮತ್ತು ತಮಿಳುನಾಡಿನ ಇನ್ನಿತರ ಸ್ಥಳಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.