ಬೆಂಗಳೂರು- ಮೈಸೂರು ನಡುವೆ ನಮೋ ಭಾರತ ರೈಲು - ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಸುಳಿವು

| N/A | Published : Feb 04 2025, 10:59 AM IST

What is UPSSF plan for the security of Namo Bharat Train

ಸಾರಾಂಶ

ಶನಿವಾರ ಮಂಡಿಸಲಾದ ಕೇಂದ್ರ ಬಜೆಟ್​ನಲ್ಲಿ ರೈಲ್ವೆಗಾಗಿ ಕರ್ನಾಟಕಕ್ಕೆ ₹7,564 ಕೋಟಿ ಮೀಸಲಿರಿಸಲಾಗಿದೆ. ಈ ಹಿಂದಿನ ಯುಪಿಎ ಸರ್ಕಾರದ ಅಧಿಕಾರದ ಅವಧಿ ಹೋಲಿಸಿದರೆ 9 ಪಟ್ಟು ಹೆಚ್ಚು ಹಣ ನೀಡಲಾಗಿದೆ.

ಹುಬ್ಬಳ್ಳಿ  : ಶನಿವಾರ ಮಂಡಿಸಲಾದ ಕೇಂದ್ರ ಬಜೆಟ್​ನಲ್ಲಿ ರೈಲ್ವೆಗಾಗಿ ಕರ್ನಾಟಕಕ್ಕೆ ₹7,564 ಕೋಟಿ ಮೀಸಲಿರಿಸಲಾಗಿದೆ. ಈ ಹಿಂದಿನ ಯುಪಿಎ ಸರ್ಕಾರದ ಅಧಿಕಾರದ ಅವಧಿ ಹೋಲಿಸಿದರೆ 9 ಪಟ್ಟು ಹೆಚ್ಚು ಹಣ ನೀಡಲಾಗಿದೆ. ಕಡಿಮೆ ಅಂತರ ಹೊಂದಿರುವ ರೈಲು ನಿಲ್ದಾಣಗಳಲ್ಲಿ ನಮೋ ಭಾರತ ರೈಲು ಓಡಿಸಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್​ ಹೇಳಿದರು.

ಸೋಮವಾರ ವಿಡಿಯೋ ಕಾನ್ಫೆರೆನ್ಸ್​ ಮೂಲಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಬಜೆಟ್​ನಲ್ಲಿ ಕರ್ನಾಟಕ ರೈಲ್ವೆಗೆ ನೀಡಿರುವ ಕೊಡುಗೆಗಳ ಕುರಿತು ಮಾಹಿತಿ ನೀಡಿದರು.

2025-26ನೇ ಹಣಕಾಸು ವರ್ಷದಲ್ಲಿ ರೈಲ್ವೆಯ ಬೆಳವಣಿಗೆ ಮತ್ತು ದಕ್ಷತೆ ವೇಗಗೊಳಿಸಲು ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಸಾಮರ್ಥ್ಯ ದುರ್ಬಲಗೊಂಡಿರುವ ರೈಲು ಹಳಿಗಳನ್ನು ಹಂತ-ಹಂತವಾಗಿ ಬದಲಾಯಿಸಲಾಗುತ್ತಿದ್ದು, 4-5 ವರ್ಷಗಳಲ್ಲಿ ಎಲ್ಲೆಡೆ ಹೊಸ ಹಳಿ ಅಳವಡಿಕೆಗೆ ಕ್ರಮಕೈಗೊಳ್ಳಲಾಗುವುದು ಎಂದರು.

1,652 ಕಿಮೀ ಹೊಸ ರೈಲು ಮಾರ್ಗ:

ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರತಿ ವರ್ಷ 15 ಕಿಮೀ ಮಾತ್ರ ವಿದ್ಯುದ್ದಿಕರಣ​ ಕಾಮಗಾರಿ ನಡೆಯುತ್ತಿತ್ತು. ಈಗಿನ ಅವಧಿಯಲ್ಲಿ ಪ್ರತಿ ವರ್ಷ 300 ಕಿಮೀಗೂ ಹೆಚ್ಚು ವಿದ್ಯುದೀಕರಣ​ ಮಾಡಲಾಗುತ್ತಿದೆ. 2014ರ ನಂತರ ಕರ್ನಾಟಕದಲ್ಲಿ 1,652 ಕಿಮೀ ಹೊಸ ರೈಲ್ವೆ ಮಾರ್ಗಗಳನ್ನು ಅಳವಡಿಸಲಾಗಿದೆ. ಇಡೀ ಶ್ರೀಲಂಕಾದ ವಿಸ್ತೀರ್ಣದಷ್ಟು ರೈಲ್ವೆ ಮಾರ್ಗ ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಎನ್​ಡಿಎ ಸರ್ಕಾರದ ಅವಧಿಯಲ್ಲಿ ಆಗಿದೆ ಎಂದರು.

ನಮೋ ರೈಲು ಓಡಿಸಲು ಕ್ರಮ:

ಕಡಿಮೆ ಅಂತರ ಹೊಂದಿರುವ ರೈಲು ನಿಲ್ದಾಣಗಳ ಮಧ್ಯೆ ನಮೋ ಭಾರತ ರೈಲು ಓಡಿಸಲು ಕ್ರಮಕೈಗೊಳ್ಳಲಾಗುತ್ತಿದೆ. 100, 150, 200 ಕಿಮೀ ಅಂತರಗಳ ರೈಲು ನಿಲ್ದಾಣಗಳ ಮಧ್ಯೆ ಈ ರೈಲು ಸಂಚರಿಸಲಿದೆ. ಬೆಂಗಳೂರು ಮತ್ತು ಮೈಸೂರು ಮಧ್ಯೆ ನಮೋ ಭಾರತ ರೈಲು ಓಡಿಸುವ ಉದ್ದೇಶ ಹೊಂದಲಾಗಿದೆ ಎಂದು ಮಾಹಿತಿ ನೀಡಿದರು.

₹51,479 ಕೋಟಿ ಮೀಸಲು:

ರೈಲ್ವೆ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸದಾ ಬದ್ಧವಾಗಿದೆ. ಹಲವಾರು ಹೊಸ ಮಾರ್ಗ ಸೇರಿದಂತೆ ನೂತನ ಯೋಜನೆಗಳನ್ನು ಕೈಗೊಳ್ಳಲಾಗುವುದು. ದೇಶದಾದ್ಯಂತ ಹೊಸ ಮಾರ್ಗ, ಡಬ್ಲಿಂಗ್​, ವರ್ಕ್​ಶಾಪ್​ಗಳ ಅಭಿವೃದ್ಧಿ ಸೇರಿದಂತೆ ಇನ್ನಿತರ ರೈಲ್ವೆ ಅಭಿವೃದ್ಧಿ ಕಾಮಗಾರಿಗಳಿಗೆ ₹51,479 ಕೋಟಿ ಮೀಸಲಿರಸಲಾಗಿದ್ದು, ಕರ್ನಾಟಕದಲ್ಲಿರುವ ರೈಲ್ವೆ ಸೌಲಭ್ಯಗಳೂ ಅಭಿವೃದ್ಧಿಗೊಳ್ಳಲಿವೆ ಎಂದರು.

ಈಗಾಗಲೇ ಕರ್ನಾಟಕದಲ್ಲಿ 10 ವಂದೇ ಭಾರತ್​ ರೈಲುಗಳು ಸಂಚರಿಸುತ್ತಿವೆ. ಮುಂದಿನ ದಿನಗಳಲ್ಲಿ ದೇಶದಾದ್ಯಂತ 100 ಹೊಸ ಅಮೃತ ಭಾರತ ಹಾಗೂ 200 ಹೊಸ ವಂದೇ ಭಾರತ್​ ರೈಲುಗಳು ಸಂಚರಿಸಲಿವೆ ಎಂದು ಹೇಳಿದರು.

ಮೆಮು ರೈಲುಗಳ ಸೇವೆ ಒದಗಿಸಲು ಆದ್ಯತೆ: ಜೈನ್

ಧಾರವಾಡ ಮತ್ತು ಬೆಳಗಾವಿ ನೂತನ ರೈಲು ಮಾರ್ಗಕ್ಕೆ ರಾಜ್ಯ ಸರ್ಕಾರ ಇನ್ನೂ ಭೂಮಿ ಹಸ್ತಾಂತರ ಮಾಡಿಲ್ಲ. ಭೂಮಿ ವಶಪಡಿಸಿಕೊಳ್ಳುವ ಕಾರ್ಯ ಇನ್ನೂ ನಡೆದಿದೆ. ಹುಬ್ಬಳ್ಳಿ ಮತ್ತು ಗೋವಾ ಮಧ್ಯದ ಘಾಟ್​ ಪ್ರದೇಶದಲ್ಲಿ ಡಬ್ಲಿಂಗ್​ ಕಾಮಗಾರಿ ಇನ್ನೂ ಆಗಿಲ್ಲ ಎಂದು ನೈಋತ್ಯ ರೈಲ್ವೆ ವಲಯದ ಅಪರ ಪ್ರಧಾನ ವ್ಯವಸ್ಥಾಪಕ ಕೆ.ಎಸ್​. ಜೈನ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಗ್ರಾಮೀಣ ಭಾಗದ ಪ್ರಯಾಣಿಕರ ಅನುಕೂಲಕ್ಕಾಗಿ ಮೆಮು ರೈಲುಗಳ ಸೇವೆ ಒದಗಿಸಲು ನೈಋತ್ಯ ರೈಲ್ವೆ ಉದ್ದೇಶಿಸಲಾಗಿದೆ. ರಾಜ್ಯದ 10 ಮಾರ್ಗಗಳಲ್ಲಿ ಕಾರ್ಯಾಚರಣೆಗೆ ಅವಕಾಶ ನೀಡುವಂತೆ ರೈಲ್ವೆ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಿರುವುದಾಗಿ ತಿಳಿಸಿದರು.

ಹುಬ್ಬಳ್ಳಿ-ಗದಗ, ದಾವಣಗೆರೆ-ಹುಬ್ಬಳ್ಳಿ, ಹೊಸಪೇಟೆ- ಬಳ್ಳಾರಿ, ಸೊಲ್ಲಾಪುರ-ಗದಗ, ಮೈಸೂರು- ಚಾಮರಾಜ ನಗರ, ಬೆಂಗಳೂರು-ಚಿಕ್ಕಮಗಳೂರು ಸೇರಿದಂತೆ 10 ಮಾರ್ಗಗಳಲ್ಲಿ ಮೆಮು ರೈಲು ಕಾರ್ಯಾಚರಣೆ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮಂಡಳಿಯು ಅನುಮೋದನೆ ನೀಡುತ್ತಿದ್ದಂತೆ ಕಾರ್ಯಾಚರಣೆ ನಡೆಸುವುದಾಗಿ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಮೆಗಾ ಕೋಚಿಂಗ್ ಟರ್ಮಿನಲ್ ಸ್ಥಾಪನೆ ಕುರಿತು 4 ತಿಂಗಳ ಹಿಂದೆ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುಮೋದನೆ ನಿರೀಕ್ಷೆಯಲ್ಲಿದ್ದೇವೆ ಎಂದರು.

ಹುಬ್ಬಳ್ಳಿ ವಿಭಾಗೀಯ ಹೆಚ್ಚುವರಿ ವ್ಯವಸ್ಥಾಪಕ ಎ.ಕೆ. ವರ್ಮಾ ಮಾತನಾಡಿ, ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಗೆ ಸಂಬಂಧಿಸಿ ವಿಸ್ತೃತ ಯೋಜನಾ ವರದಿ (ಡಿಪಿಆರ್) ಬಹುತೇಕ ಅಂತಿಮ ಹಂತದಲ್ಲಿದೆ. ಇನ್ನು 6 ತಿಂಗಳಲ್ಲಿ ಸರ್ಕಾರದಿಂದ ಅನುಮೋದನೆ ಸಿಗುವ ಸಾಧ್ಯತೆ ಇದೆ ಎಂದರು.

ಅಮೃತ ಭಾರತ್ ಯೋಜನೆಯ ಅಡಿ ಮರು ನಿರ್ಮಿಸಲಾಗುತ್ತಿರುವ ರೈಲು ನಿಲ್ದಾಣಗಳು ಮಾರ್ಚ್ ಹೊತ್ತಿಗೆ ಪೂರ್ಣಗೊಳ್ಳಲಿವೆ. ಈ ನಿಲ್ದಾಣಗಳ ಉದ್ಘಾಟನೆಗೆ ಪ್ರಧಾನಿಯವರು ಆಗಮಿಸುವ ಸಾಧ್ಯತೆ ಇದೆ ಎಂದರು.

ಈ ವೇಳೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ ಕನಮಡಿ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಹಾಜರಿದ್ದರು.